Udupi: ಚುನಾವಣೆ ನೀತಿ ಸಂಹಿತೆ ಹಿನ್ನೆಲೆ, ಶಸ್ತಾಸ್ತ್ರಗಳ ಠೇವಣಿಗೆ ಜಿಲ್ಲಾಧಿಕಾರಿ ಸೂಚನೆ

Published : Apr 01, 2023, 05:52 PM IST
Udupi: ಚುನಾವಣೆ ನೀತಿ ಸಂಹಿತೆ ಹಿನ್ನೆಲೆ, ಶಸ್ತಾಸ್ತ್ರಗಳ ಠೇವಣಿಗೆ ಜಿಲ್ಲಾಧಿಕಾರಿ ಸೂಚನೆ

ಸಾರಾಂಶ

ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ, ಚುನಾವಣೆ ಪ್ರಕ್ರಿಯೆ ಸಂಪೂರ್ಣವಾಗಿ ಮುಕ್ತಾಯಗೊಳ್ಳುವವರೆಗೆ ಶಸ್ತ್ರಾಸ್ತ್ರ, ಆಯುಧ ಮತ್ತು ಮದ್ದುಗುಂಡುಗಳೊಂದಿಗೆ ಸಂಚಾರ ಹಾಗೂ ಅವುಗಳನ್ನು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಉಡುಪಿ (ಏ.1): ಕರ್ನಾಟಕ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ, ಮೇ 10 ರಂದು ಚುನಾವಣೆ ನಡೆಯಲಿದ್ದು, ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ, ಚುನಾವಣೆ ಪ್ರಕ್ರಿಯೆ ಸಂಪೂರ್ಣವಾಗಿ ಮುಕ್ತಾಯಗೊಳ್ಳುವವರೆಗೆ ಶಸ್ತ್ರಾಸ್ತ್ರ, ಆಯುಧ ಮತ್ತು ಮದ್ದುಗುಂಡುಗಳೊಂದಿಗೆ ಸಂಚಾರ ಹಾಗೂ ಅವುಗಳನ್ನು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ. 

ಆತ್ಮ ರಕ್ಷಣೆ ಮತ್ತು ಬೆಳೆ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಿಗೆ ಹೊಂದಿರುವ ಎಲ್ಲಾ ಅಧಿಕೃತ ಪರವಾನಿಗೆದಾರರು ತಮ್ಮ ಪರವಾನಿಗೆಯಲ್ಲಿ ಹೊಂದಿರುವ ಎಲ್ಲಾ ವಿಧಧ ಶಸ್ತ್ರಾಸ್ತ್ರಗಳನ್ನು (ಎಸ್‌ಬಿಬಿಎಲ್, ಡಿಬಿಬಿಎಲ್, ಎಸ್‌ಬಿಎಂಎಲ್, ಡಿಬಿಎಂಎಲ್, ಎನ್‌ಪಿಬಿ ರೈಫಲ್, ರಿವಾಲ್ವರ್ ಹಾಗೂ ಪಿಸ್ತೂಲ್) ತಮ್ಮ ವಿಳಾಸ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ಅಥವಾ ಅಧಿಕೃತವಾಗಿ ಪರವಾನಿಗೆ ಹೊಂದಿರುವ ಡೀಲರ್ ಶಾಪ್‌ಗಳಲ್ಲಿ ಕಡ್ಡಾಯವಾಗಿ ವಿಳಂಬ ಮಾಡದೇ ಠೇವಣಿ ಮಾಡಿ, ರಶೀದಿ ಪಡೆಯಬೇಕು.

ಚುನಾವಣಾ ಫಲಿತಾಂಶ ಘೋಷಣೆಯಾದ ದಿನಾಂಕದಿಂದ ಒಂದು ವಾರದ ನಂತರ ಶಸ್ತ್ರಾಸ್ತ್ರ ಠೇವಣಿ ಪಡೆದ ಠಾಣಾಧಿಕಾರಿಗಳಿಂದ ಅಥವಾ ಡೀಲರ್‌ಗಳಿಂದ ಶಸ್ತ್ರಾಸ್ತ್ರಗಳನ್ನು ಮರು ಪಡೆದುಕೊಳ್ಳಬಹುದು. ಈ ನಿಷೇಧ ಆದೇಶವು ಸರ್ಕಾರಿ ಕರ್ತವ್ಯಕ್ಕೆ ಹಾಗೂ ಬ್ಯಾಂಕ್ ಸೆಕ್ಯೂರಿಟಿ ಸಂಸ್ಥೆಗಳ ಭದ್ರತೆ ಹಾಗೂ ಸಂರಕ್ಷತಾ ಸಿಬ್ಬಂದಿಗಳ ಕರ್ತವ್ಯ ನಿರ್ವಹಣೆ ವೇಳೆ ಶಸ್ತ್ರಾಸ್ತ್ರ ಆಯುಧ ಬಳಸುವುದಕ್ಕೆ ಅನ್ವಯವಾಗುವುದಿಲ್ಲ.

ಸದರಿ ಠೇವಣಿ ಆದೇಶದಿಂದ ವಿನಾಯಿತಿ ಕೋರುವ ಪರವಾನಿಗೆದಾರರು ಏಪ್ರಿಲ್ 5 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಸದರಿ ಅರ್ಜಿಗಳನ್ನು ಸ್ಕ್ರೀನಿಂಗ್ ಸಮಿತಿ ಸದಸ್ಯರಾದ ಪೊಲೀಸ್ ಅಧೀಕ್ಷಕರ ಕಮಿಟಿ ಮುಂದೆ ಮಂಡಿಸಿ, ಅರ್ಜಿಗಳ ಅವಶ್ಯಕತೆ ಹಾಗೂ ನೈಜ್ಯತೆಯ ಬಗ್ಗೆ ಪರಿಶೀಲಿಸಿ, ವಿನಾಯಿತಿ ನೀಡುವ ಬಗ್ಗೆ ಕ್ರಮಕೈಗೊಳ್ಳಲಾಗುವುದು. 

ಆದೇಶಕ್ಕೆ ವ್ಯತಿರಿಕ್ತವಾಗಿ ಹಾಗೂ ಯಾವುದೇ ರೀತಿಯ ಕಾನೂನು ಬಾಹಿರವಾಗಿ ಪರವಾನಿಗೆ ರಹಿತ ಶಸ್ತಾಸ್ತ್ರ /ಆಯುಧ ಇತ್ಯಾದಿಗಳ ಸಂಗ್ರಹಣೆ, ಬಳಕೆ, ಸಾಗಾಟ ಮಾಡುತ್ತಿರುವ ಸುಳಿವು ದೊರೆತಲ್ಲಿ ಹತ್ತಿರದ ಪೋಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಧಾರ್ಮಿಕ ಕಾರ್ಯಕ್ರಮ ಗಳಿಗೆ ಅರ್ಜಿ
ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿಉಡುಪಿ ತಾಲೂಕಿನಾದ್ಯಂತ ಧಾರ್ಮಿಕ ಕಾರ್ಯಕ್ರಮ ಮತ್ತು ಇತರೆ ಕಾರ್ಯಕ್ರಮಗಳಿಗೆ ಕಳೆದ ಮೂರು ದಿನಗಳಲ್ಲಿ ಅನುಮತಿ ಕೋರಿ ಒಟ್ಟು 56 ಅರ್ಜಿಗಳು ಬಂದಿವೆ ಎಂದು ಉಡುಪಿ ತಾಲೂಕು ಚುನಾವಣಾ ಅಧಿಕಾರಿ ಸೀತಾ ಎಂ.ಸಿ ತಿಳಿಸಿದರು. ಅವರು ನಗರದ ತಹಶೀಲ್ದಾರ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ವಿವರಿಸಿದರು. 

ಕೋಲ, ನೇಮ, ಭಜನೆ, ಧಾರ್ಮಿಕ ಕಾರ್ಯಕ್ರಮಗಳ ದಿನಾಂಕವು ಈ ಹಿಂದೆಯೇ ನಿಗದಿಗೊಂಡಿರುತ್ತದೆ. ಆದರೆ ಚುನಾವಣಾ ನೀತಿ ಸಂಹಿತೆ ಇರುವುದರಿಂದ ತಾಲೂಕು ಚುನಾವಣಾ ಅಧಿಕಾರಿಯವರ ಅನುಮತಿ ಪಡೆಯಬೇಕು. ಈ ಹಿನ್ನಲೆಯಲ್ಲಿ ತಾಲೂಕು ಆಡಳಿತ ಸೌಧದಲ್ಲಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, 3 ಗಂಟೆಯೊಳಗಾಗಿ ಅರ್ಜಿಗಳನ್ನು ವಿಲೇವಾರಿ ಮಾಡಲಾಗುತ್ತಿದೆ.

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಕೇಸು

ಕೋವಿಡ್ ಪಾಸಿಟಿವ್ ಇರುವವರಿಗೆ ಮನೆಯಿಂದಲೇ ಮತದಾನ ನಡೆಸಲು ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಪಾಸಿಟಿವ್ ಇರುವವರ ಮಾಹಿತಿಯನ್ನು ಆಶಾ ಕಾರ್ಯಕರ್ತರ ಮೂಲಕ ಪಡೆದು, ಬಿ.ಎಲ್.ಓ ಅವರು 12D ಅರ್ಜಿಯನ್ನು ವಿತರಿಸುತ್ತಾರೆ. ಆ ಅರ್ಜಿಯನ್ನು ಭರ್ತಿ ಮಾಡಿ ನೀಡಿದ ಬಳಿಕ ಅವರಿಗೆ ಮನೆಯಲ್ಲಿ ಮತದಾನಕ್ಕೆ ವ್ಯವಸ್ಥೆಯನ್ನು ಕಲ್ಪಿಸುತ್ತೇವೆ ಎಂದರು.

Chikkamagaluru: ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2.5 ಲಕ್ಷ ಹಣ ವಶ

2019 ರ ಲೋಕಸಭಾ ಚುನಾವಣಾ ವೇಳೆ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ 2,09,000 ಇದ್ದ ಮತದಾರರ ಸಂಖ್ಯೆ ಈ ಬಾರಿ 2,14,650 ಕ್ಕೆ ಏರಿಕೆಯಾಗಿದೆ. ಈ ಬಾರಿ ಹೊಸ ಮತದಾರರು ವೋಟರ್ ಐಡಿಗೆ ಹೆಸರು ನೊಂದಾಯಿಸಲು ಚುನಾವಣಾ ಆಯೋಗ ಎಪ್ರಿಲ್ ತಿಂಗಳವರೆಗೆ ಅವಕಾಶ ಒದಗಿಸಿದ್ದು, ಇನ್ನಷ್ಟು ಜನರು ಸೇರ್ಪಡೆಗೊಳ್ಳುವ ಸಾಧ್ಯತೆ ಇದೆ ಎಂದರು. 

ಉಡುಪಿ ವಿಧಾನಸಭಾ ಕ್ಷೇತ್ರದ ನೇಜಾರು, ಬಲಾಯಿಪಾದೆ, ಅಲೆವೂರಿನಲ್ಲಿ ಚೆಕ್ ಪೋಸ್ಟ್ ನಿರ್ಮಿಸಲಾಗಿದ್ದು, ದಿನದ 24 ಗಂಟೆ ತಪಾಸಣೆ ನಡೆಸಲಾಗುತ್ತಿದೆ. 3 ಶಿಫ್ಟ್ ನಲ್ಲಿ ಅಧಿಕಾರಿಗಳು ಮತ್ತು ಪೋಲಿಸರು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದರು.

PREV
Read more Articles on
click me!

Recommended Stories

ಬೆಂಗಳೂರು ಕಬ್ಬನ್‌ಪಾರ್ಕ್‌ ಪುಷ್ಪ ಪ್ರದರ್ಶನಕ್ಕೆ ಇಂದು ತೆರೆ
ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ