'ಆಡಳಿತ, ವಿರೋಧ ಪಕ್ಷಗಳು ಮಹದಾಯಿ ವಿಚಾರದಲ್ಲಿ ರಾಜಕೀಯ ಮಾಡುತ್ತಿವೆ'

By Suvarna NewsFirst Published Jan 24, 2020, 1:17 PM IST
Highlights

ಮಹದಾಯಿ ಸಂಬಂಧ ಸುಪ್ರೀಂಕೋರ್ಟ್‌ಗೆ ಪಿಐಎಲ್ ಸಲ್ಲಿಕೆ|  ಕುಡಿಯುವ ನೀರು ಕೊಡುವಂತೆ ಫೆಬ್ರುವರಿಯಲ್ಲಿ ದೆಹಲಿ ಚಲೋ| ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಮನವಿ ಕೂಡ ಸಲ್ಲಿಸುತ್ತೇವೆ| ರಾಜಕಾರಣಿಗಳ ಮೇಲೆ ರೈತರಿಗೆ ವಿಶ್ವಾಸ ಹೋಗಿದೆ ಎಂದ ವೀರೇಶ ಸೊಬರದಮಠ| 

ಹುಬ್ಬಳ್ಳಿ(ಜ.24): ಮಹದಾಯಿ ನ್ಯಾಯಾಧಿಕರಣದ ಆದೇಶವನ್ನ ಜಾರಿಗೆ ತರಬೇಕು. ಕೇಂದ್ರ ಸರ್ಕಾರ ಕೂಡಲೇ ಗೆಜೆಟ್ ನೋಟಿಫಿಕೇಶನ್ ಹೊರಡಿಸಬೇಕು. ರಾಜ್ಯಕ್ಕೆ ಮಂಜೂರಾದ ನೀರು ಬಳಸಿಕೊಳ್ಳಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ರೈತಸೇನಾ ಅಧ್ಯಕ್ಷ ವೀರೇಶ ಸೊಬರದಮಠ ಆಗ್ರಹಿಸಿದ್ದಾರೆ. 

ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಕುರಿತು ಸುಪ್ರೀಂಕೋರ್ಟ್‌ಗೆ ಪಿಐಎಲ್ ಸಲ್ಲಿಸಲಾಗಿದೆ. ಕುಡಿಯುವ ನೀರು ಕೊಡುವಂತೆ ಫೆಬ್ರುವರಿಯಲ್ಲಿ ದೆಹಲಿ ಚಲೋ ನಡೆಸುತ್ತೇವೆ. ಇದರ ಜೊತೆಗೆ ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸುತ್ತೇವೆ. ರಾಜಕಾರಣಿಗಳ ಮೇಲೆ ರೈತರಿಗೆ ವಿಶ್ವಾಸ ಹೋಗಿದೆ ಎಂದು ಹೇಳಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಆಡಳಿತ ಮತ್ತು ವಿರೋಧ ಪಕ್ಷಗಳು ಮಹದಾಯಿ ವಿಚಾರದಲ್ಲಿ ರಾಜಕೀಯ ಮಾಡುತ್ತಿವೆ. ಕೇಂದ್ರದ ಮಂತ್ರಿಗಳು, ಜನಪ್ರತಿನಿಧಿಗಳು ರೈತರ ದಾರಿ ತಪ್ಪಿಸುತ್ತಿದ್ದಾರೆ. ಅತಿವೃಷ್ಟಿ, ಅನಾವೃಷ್ಟಿಯಿಂದ ರೈತರು ಕಂಗಾಲಾಗಿದ್ದೇವೆ. ಕಷ್ಟ ಪಟ್ಟು ಬೆಳೆದ ಹಿಂಗಾರಿ ಬೆಳೆಗಳಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ. ದಲ್ಲಾಳಿಗಳು ಮತ್ತು ಅಧಿಕಾರಿಗಳು ಹೊಂದಾಣಿಕೆ ಮಾಡಿಕೊಂಡು ರೈತರಿಗೆ ದ್ರೋಹ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ. 

ಕಡಲೆ, ಜೋಳ, ಗೋದಿ, ಕುಸುಬಿ, ಸೂರ್ಯಕಾಂತಿ, ಗೋವಿನಜೋಳಕ್ಕೆ ವೈಜ್ಞಾನಿಕ ಬೆಲೆ ನಿಗದಿಪಡಿಸಬೇಕು. ಕೇಂದ್ರ ಸರ್ಕಾರ ಘೋಷಿಸಿರುವ ಬೆಂಬಲ ಬೆಲೆಗೆ ರಾಜ್ಯ ಸರ್ಕಾರ ಹೆಚ್ಚುವರಿ ದರ ನಿಗದಿಪಡಿಸಬೇಕು. ರಾಜ್ಯ ಸರ್ಕಾರ ಕೂಡಲೇ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಬೇಕು. ಶೀಘ್ರದಲ್ಲಿ ಸೂಕ್ತ ಬೆಂಬಲ ಬೆಲೆ ಘೋಷಿಸಿ ಖರೀದಿ ಕೇಂದ್ರ ಪ್ರಾರಂಭಿಸದಿದ್ದರೆ ಹೋರಾಟ ಪ್ರಾರಂಭಿಸಲಾಗುವುದು. ಈ ಸಂಬಂಧ ಜನವರಿ 27ರಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಿರಂತರ ಧರಣಿ ನಡೆಸಲಾಗುವುದು ಎಂದು ಹೇಳಿದ್ದಾರೆ. 
 

click me!