
ವಿಜಯನಗರ (ಸೆ.17): ರಾಜ್ಯದ ಹಿಂದುಳಿದ ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಒಂದಾದ ವಿಜಯನಗರದ ಆಡಳಿತ ಚುಕ್ಕಾಣಿ ಸಂಪೂರ್ಣವಾಗಿ ಸಮರ್ಥ ಮಹಿಳಾ ಅಧಿಕಾರಿಗಳ ಕೈಯಲ್ಲಿದೆ ಎನ್ನುವುದಕ್ಕೆ ಹೊಸಪೇಟೆಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವದ ವೇದಿಕೆಯು ಸಾಕ್ಷಿಯಾಯಿತು. ಜಿಲ್ಲೆಯ ಪ್ರಮುಖ ಆಯಕಟ್ಟಿನ ಹುದ್ದೆಗಳನ್ನು ಅಲಂಕರಿಸಿರುವ ಮಹಿಳಾ ಅಧಿಕಾರಿಗಳು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ವಿಶೇಷ ಗಮನ ಸೆಳೆದರು.
ಹೊಸಪೇಟೆಯ ಡಾ. ಪುನೀತ್ ರಾಜ್ಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ಕಲ್ಯಾಣ ಕರ್ನಾಟಕ ಉತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್. ಬಸವಂತಪ್ಪ (ಬಸವಂತಪ್ಪ) ಅವರು ಧ್ವಜಾರೋಹಣ ನೆರವೇರಿಸಿ, ಅಕರ್ಷಕ ಪಥಸಂಚಲನದ ಗೌರವ ವಂದನೆ ಸ್ವೀಕರಿಸಿದರು.
ಈ ಕಾರ್ಯಕ್ರಮದಲ್ಲಿ ಸಚಿವರಿಗೆ ಜಿಲ್ಲೆಯ ಉನ್ನತ ಮಹಿಳಾ ಅಧಿಕಾರಿಗಳು ಸಾಥ್ ನೀಡಿದರು. ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಹ್ನವಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಗರಿಮಾ ಪನ್ವಾರ್, ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಅನುಪಮಾ ಹಾಗೂ ತಹಶೀಲ್ದಾರ್ ಶೃತಿ ಅವರು ಒಂದೇ ವೇದಿಕೆಯಲ್ಲಿ ಉಪಸ್ಥಿತರಿದ್ದು, ಮಹಿಳಾ ಸಬಲೀಕರಣಕ್ಕೆ ಹಿಡಿದ ಕನ್ನಡಿಯಂತೆ ಗೋಚರಿಸಿದರು.
ಜಿಲ್ಲೆಯ ಕಾನೂನು ಸುವ್ಯವಸ್ಥೆ, ಅಭಿವೃದ್ಧಿ ಹಾಗೂ ಆಡಳಿತಾತ್ಮಕ ನಿರ್ಣಾಯಕ ಹುದ್ದೆಗಳಲ್ಲಿ ಮಹಿಳೆಯರೇ ಮುಂಚೂಣಿಯಲ್ಲಿರುವುದು ವಿಜಯನಗರ ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದ್ದು, ಸಾರ್ವಜನಿಕ ವಲಯದಲ್ಲಿಯೂ ಈ ಬಗ್ಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ.
ಕಲ್ಯಾಣ- ಕರ್ನಾಟಕ ಉತ್ಸವದ ಅಂಗವಾಗಿ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಪೊಲೀಸ್ ಹಾಗೂ ವಿವಿಧ ಇಲಾಖೆಗಳ ವತಿಯಿಂದ ಆಕರ್ಷಕ ಪಥಸಂಚಲನ ನಡೆಯಿತು. ಸಚಿವ ಬಸವಂತಪ್ಪ ಅವರು ಪಥಸಂಚಲನದ ಗೌರವ ವಂದನೆಯನ್ನು ಸ್ವೀಕರಿಸಿದರು. ಜಿಲ್ಲೆಯ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಹಾಗೂ ನೂರಾರು ಸಾರ್ವಜನಿಕರು ಉತ್ಸಾಹದಿಂದ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.