
ಹಾಸನ (ಜು.9): ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ದಾಳಿ ಹೆಚ್ಚುತ್ತಿದ್ದು ರೈತರು, ಕಾರ್ಮಿಕರು ಕೃಷಿ ಕೆಲಸಕ್ಕೆ ಹೋಗದ ಸ್ಥಿತಿ ನಿರ್ಮಾಣವಾಗಿದೆ. ನಿನ್ನೆ ತಡರಾತ್ರಿ ವಿದ್ಯುತ್ ದುರಸ್ತಿ ಕಾರ್ಯ ಮುಗಿಸಿ ವಾಪಸ್ ಆಗುತ್ತಿದ್ದ ಚೆಸ್ಕಾಂ ಸಿಬ್ಬಂದಿ ವಾಹನದ ಮೇಲೆ ಕಾಡಾನೆ ದಾಳಿಗೆ ಯತ್ನಿಸಿದ ಬೆನ್ನಲ್ಲೇ ಇದೀಗ ಜಾನುವಾರುಗಳನ್ನು ಕಟ್ಟುತ್ತಿದ್ದ ವೇಳೆ ರೈತನ ಮೇಲೆ ದಾಳಿ ನಡೆಸಿದ ಘಟನೆ ಬೇಲೂರು ತಾಲೂಕಿನ ಕಣಗುಪ್ಪೆ ಗ್ರಾಮದಲ್ಲಿ ನಡೆದಿದೆ.
ರೈತ ಸಿದ್ದಶೆಟ್ಟಿ ಎಂಬುವವರು ಮನೆಯ ಮುಂದಿನ ಜಾನುವಾರುಗಳನ್ನು ಕಟ್ಟುತ್ತಿದ್ದರು. ಈ ವೇಳೆ ಏಕಾಏಕಿ ದಾಳಿ ನಡೆಸಿದ ಒಂಟಿ ಸಲಗ, ರೈತ ಸಿದ್ಧಶೆಟ್ಟಿ(65) ತಪ್ಪಿಸಿಕೊಳ್ಳಲು ಅವಕಾಶ ಕೊಡದೆ ಸೊಂಡಿಲಿನಿಂದ ಎತ್ತಿ ಬಿಸಾಡಿದೆ. ಆನೆಯ ಅನಿರೀಕ್ಷಿತ ದಾಳಿಯಿಂದಾಗಿ ತೀವ್ರ ಗಾಯಗೊಂಡಿರುವ ರೈತ ಸಿದ್ಧಶೆಟ್ಟಿ ಅವರಿಗೆ ಬೇಲೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದು ಪರಿಶೀಲನೆ ನಡೆಸಿ, ಗಾಯಾಳುವಿನ ಆರೋಗ್ಯ ವಿಚಾರಿಸಿದ್ದಾರೆ.
ಮಳೆಗಾಲದಲ್ಲಿ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಿದೆ. ಅಧಿಕಾರಿಗಳು ನಾಗರಿಕರು ಓಡಾಡಲು ಸುರಕ್ಷಿತ ಕ್ರಮ ಕೈಗೊಳ್ಳುವಂತೆ ನಾಗರಿರು ಆಗ್ರಹಿಸಿದ್ದಾರೆ.