
ಬೆಳಗಾವಿ: ಖಾನಾಪುರ ತಾಲೂಕಿನ ಗ್ರಾಮೀಣ ಭಾಗದ ಅನೇಕ ಮಹಿಳೆಯರು ಗೃಹಲಕ್ಷ್ಮೀ ಹಣದಲ್ಲಿ ಹೈನುಗಾರಿಕೆ, ಕುರಿ-ಕೋಳಿ ಸಾಕಾಣಿಕೆ, ಕಿರಾಣಿ ಅಂಗಡಿ, ಕರಕುಶಲ ಕೆಲಸ ಸೇರಿದಂತೆ ವಿವಿಧ ಉದ್ದಿಮೆಗಳನ್ನು ಆರಂಭಿಸಿ ಯಶಸ್ವಿಯಾಗಿದ್ದಾರೆ ಎಂದು ಗ್ಯಾರಂಟಿ ಸಮಿತಿಯ ತಾಲೂಕು ಘಟಕದ ಅಧ್ಯಕ್ಷ ಸೂರ್ಯಕಾಂತ ಕುಲಕರ್ಣಿ ಹೇಳಿದರು.
ಪಟ್ಟಣದ ಶಿವಸ್ಮಾರಕ ಸಭಾಭವನದಲ್ಲಿ ಶನಿವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ವಿಶ್ವ ಮಹಿಳಾ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶಕ್ತಿ ಯೋಜನೆಯ ಸದ್ಬಳಕೆ ಮಾಡಿಕೊಂಡು ಗ್ರಾಮೀಣ ಭಾಗದಿಂದ ಹಣ್ಣು-ತರಕಾರಿಗಳನ್ನು ಶಹರಕ್ಕೆ ತಂದು ಮಾರಾಟ ಮಾಡಿ ಹೆಚ್ಚಿನ ಲಾಭ ಗಳಿಸುತ್ತಿದ್ದಾರೆ. ಇಂತಹ ಗ್ಯಾರಂಟಿ ಯೋಜನೆಯ ಅರ್ಹ ಫಲಾನುಭವಿಗಳನ್ನು ಗುರುತಿಸಿ ಗೌರವಿಸುವ ಕೆಲಸವನ್ನು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.
ಇದನ್ನೂ ಓದಿ: ಅರ್ಧಕ್ಕೆ ನಿಂತ ಗ್ರಾಮದ ದೇಗುಲ ನಿರ್ಮಾಣಕ್ಕೆ ₹2.50 ಲಕ್ಷ ನೀಡಿದ 850 ‘ಗೃಹಲಕ್ಷ್ಮೀ’ಯರು
ಕಾರ್ಯಕ್ರಮದ ಅಂಗವಾಗಿ ಪ್ರತಿ ಗ್ಯಾರಂಟಿ ಯೋಜನೆಯಿಂದ ಆಯ್ದ 10 ಫಲಾನುಭವಿಗಳನ್ನು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಸತ್ಕರಿಸಲಾಯಿತು. ಈ ವೇಳೆ ಸಿಡಿಪಿಒ ವಿಕ್ರಮ, ತಾಪಂ ಇಒ ರಮೇಶ ಮೇತ್ರಿ ಸೇರಿದಂತೆ ಗ್ಯಾರಂಟಿ ಸಮಿತಿಯ ಸದಸ್ಯರು, ಅಂಗನವಾಡಿ ಮತ್ತು ಆಶಾ ಸಂಘಟನೆಗಳ ಮುಖಂಡರು, ವಿವಿಧ ಇಲಾಖೆ ಸಿಬ್ಬಂದಿ ಹಾಗೂ ಸಾರ್ವಜನಿಕರು ಇದ್ದರು. ಸಂದೀಪ ದೇಶಮುಖ ಕಾರ್ಯಕ್ರಮ ನಿರ್ವಹಿಸಿದರು. ಪ್ರಕಾಶ ಮಾದಾರ ಸ್ವಾಗತಿಸಿದರು. ದೀಪಾ ಪಾಟೀಲ ವಂದಿಸಿದರು.
ಇದನ್ನೂ ಓದಿ: ಗ್ಯಾರಂಟಿಯಿಂದ ರಾಜ್ಯ ಸರ್ಕಾರಕ್ಕೆ ಹೊರೆ! ಆದ್ರೂ ರಾಜ್ಯದ ಜನಕ್ಕೆ ಶಕ್ತಿ ತುಂಬುತ್ತಿದ್ದೇವೆ: ಡಿಕೆಶಿ