
ಯಾದಗಿರಿ (ಜ.23): ಅಕ್ಷರ ಕಲಿತು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕಿದ್ದ ವಿದ್ಯಾರ್ಥಿಯೊಬ್ಬ ಶಾಲಾ ಆವರಣದಲ್ಲೇ ಅಕಾಲಿಕ ಮರಣಕ್ಕೀಡಾಗಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಶಿಕ್ಷಕರ ನಿಂದನೆಯೇ ಬಾಲಕನ ಈ ನಿರ್ಧಾರಕ್ಕೆ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.
ಮೃತ ಬಾಲಕನನ್ನು ಪವನ್ (15) ಎಂದು ಗುರುತಿಸಲಾಗಿದೆ. ಈತ ವಡಗೇರಾ ಸರ್ಕಾರಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಜನವರಿ 21ರಂದು ಮಧ್ಯಾಹ್ನದ ವೇಳೆಗೆ ಶಾಲಾ ಆವರಣದಲ್ಲಿರುವ ಮರದ ಕೆಳಗೆ ಪವನ್ ಶವ ಪತ್ತೆಯಾಗಿದೆ. ಮರಕ್ಕೆ ಕಟ್ಟಿದ್ದ ಹಗ್ಗಕ್ಕೆ ಬಾಲಕ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಇದು ಸ್ವಯಂ ಪ್ರೇರಿತ ಸಾವು ಎನ್ನಲಾಗುತ್ತಿದೆ.
ಶಾಲೆಯಲ್ಲಿ ಶಿಕ್ಷಕರು ಕಾರಣವಿಲ್ಲದೆ ತನ್ನನ್ನು ಬೈಯುತ್ತಿದ್ದಾರೆ ಎಂದು ಪವನ್ ಈ ಹಿಂದೆ ತನ್ನ ತಾಯಿಯ ಬಳಿ ಹೇಳಿಕೊಂಡಿದ್ದ ಎನ್ನಲಾಗಿದೆ. ಶಿಕ್ಷಕರು ನೀಡುತ್ತಿದ್ದ ಮಾನಸಿಕ ಕಿರುಕುಳ ಮತ್ತು ನಿಂದನೆಯಿಂದ ಬೇಸತ್ತು ಪವನ್ ಈ ಕಠಿಣ ನಿರ್ಧಾರ ಕೈಗೊಂಡಿದ್ದಾನೆ ಎಂದು ಕುಟುಂಬದ ಸದಸ್ಯರು ದೂರಿದ್ದಾರೆ. ಘಟನೆಯ ನಂತರ ಶಾಲಾ ಆವರಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಬಾಲಕನ ಸಾವಿನ ಹಿನ್ನೆಲೆಯಲ್ಲಿ ಮುಖ್ಯ ಶಿಕ್ಷಕ ಅಯ್ಯಪ್ಪ ಸೇರಿದಂತೆ ಒಟ್ಟು 6 ಜನ ಶಿಕ್ಷಕರ ವಿರುದ್ಧ ವಡಗೇರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪವನ್ ತಾಯಿಯ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶಾಲಾ ಆವರಣದಲ್ಲೇ ಇಂತಹ ಘಟನೆ ನಡೆದಿರುವುದು ಪೋಷಕರಲ್ಲಿ ಆತಂಕ ಮೂಡಿಸಿದೆ. ಶಿಕ್ಷಕರ ನಡೆ ಮತ್ತು ಶಾಲಾ ಶಿಸ್ತಿನ ಹೆಸರಿನಲ್ಲಿ ನಡೆಯುವ ನಿಂದನೆಗಳ ಬಗ್ಗೆ ತನಿಖೆ ನಡೆಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಪ್ರಸ್ತುತ ವಡಗೇರಾ ಪೊಲೀಸರು ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಸಾವಿನ ನಿಖರ ಕಾರಣ ತಿಳಿದುಬರಲಿದೆ.