
ಬೆಂಗಳೂರು : ಸಾರ್ವಜನಿಕವಾಗಿ ಧೂಮಪಾನ ಮಾಡುವುದನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಿಯಂತ್ರಿಸಲು ಹಾಲಿ ಇರುವ 200 ರು. ದಂಡ ಪ್ರಮಾಣವನ್ನು ಎರಡು ಸಾವಿರ ರು.ಗಳಿಗೆ ಹೆಚ್ಚಿಸಬೇಕೆಂಬ ಪ್ರಸ್ತಾವನೆ ಸರ್ಕಾರದ ಮುಂದಿದ್ದು, ಜಾರಿಯಾಗುವ ಸಾಧ್ಯತೆಗಳಿವೆ ಎಂದು ಬೆಂಗಳೂರು ನಗರ ಜಿಲ್ಲಾ ಕ್ಷಯರೋಗ ಮತ್ತು ತಂಬಾಕು ನಿಯಂತ್ರಣಾಧಿಕಾರಿ ಡಾ.ಶ್ರೀನಿವಾಸ್ ತಿಳಿಸಿದ್ದಾರೆ.
ಬೆಂಗಳೂರು ನಗರ ಜಿಲ್ಲಾಡಳಿತ ಹಾಗೂ ತಂಬಾಕು ನಿಯಂತ್ರಣ ಕೋಶ ಮಂಗಳವಾರ ನಗರದ ವಾರ್ತಾ ಇಲಾಖೆಯ ಮಹಾತ್ಮ ಗಾಂಧಿ ಮಾಧ್ಯಮ ಕೇಂದ್ರದಲ್ಲಿ ಆಯೋಜಿಸಿದ್ದ ‘ತಂಬಾಕು ಸೇವನೆಯ ದುಷ್ಪರಿಣಾಮಗಳು ಹಾಗೂ ಸಿಗರೆಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ- 2003 ’ ಕುರಿತು ಮಾಧ್ಯಮದವರಿಗೆ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಸರಕಾರಿ ಕಚೇರಿಗಳು, ಆಸ್ಪತ್ರೆಗಳು, ರೆಸ್ಟೋರೆಂಟ್ಗಳು, ರೈಲ್ವೆ, ಬಸ್ ನಿಲ್ದಾಣಗಳು, ಬೇಕರಿ, ಟೀ ಸ್ಟಾಲ್, ಕೋರ್ಟ್ ಆವರಣ ಸೇರಿದಂತೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು, ಇತರೆ ತಂಬಾಕು ಉತ್ನನ್ನಗಳನ್ನು ಜಗಿದು ಉಗಿಯುವುದು ಮತ್ತು 18 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನ ಮಾರುವುದು, ಕೊಳ್ಳುವುದನ್ನು ‘ಸಿಗರೆಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ- 2003 ಸೆಕ್ಷನ್ 21 ’ರ ಪ್ರಕಾರ ನಿಧಿಸಲಾಗಿದೆ.
ಇದನ್ನು ಉಲ್ಲಂಘಿಸಿದವರಿಗೆ ಪ್ರಸ್ತುತ 200 ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ. ಆದರೂ, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ಸಂಪೂರ್ಣ ನಿಯಂತ್ರಣಕ್ಕೆ ಬಂದಿಲ್ಲ. ಹಾಗಾಗಿ ಈ ದಂಡ ಪ್ರಮಾಣವನ್ನು 2000 ಗಳಿಗೆ ಹೆಚ್ಚಿಸಬೇಕೆಂದು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ಮುಂದಿನ ದಿನಗಳಲ್ಲಿ ಇದು ಜಾರಿಯಾಗುವ ಸಾಧ್ಯತೆಗಳಿವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವೈದ್ಯಾಧಿಕಾರಿ ಡಾ.ಸಿರಾಜ್, ವಾರ್ತಾ ಇಲಾಖೆಯ ಉಪ ನಿರ್ದೇಶಕ ಮುರಳೀಧರ್, ಡಾ.ಮಮತಾ, ಡಾ.ನದೀಮ್ ಮುಹಮದ್ ಮತ್ತಿತರರು ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.