ಕಾಂಗ್ರೆಸ್‌ಗೆ 4 ಶಾಸಕರ ರಾಜೀನಾಮೆ : 8-10 ಶಾಸಕರು ಬಿಜೆಪಿ ಸಂಪರ್ಕದಲ್ಲಿ

By Web DeskFirst Published Jun 5, 2019, 10:42 AM IST
Highlights

ಕಾಂಗ್ರೆಸ್ ಗೆ ನಾಲ್ವರು ಶಾಸಕರು ಗುಡ್ ಬೈ ಹೇಳಿದ್ದಾರೆ. ಅಲ್ಲದೇ 8 10 ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ.

ಮುಂಬೈ: ಮಹಾರಾಷ್ಟ್ರದ ಹಿರಿಯ ಕಾಂಗ್ರೆಸ್ಸಿಗ, ವಿಧಾನಸಭೆಯಲ್ಲಿನ ಪ್ರತಿಪಕ್ಷ ನಾಯಕರಾಗಿದ್ದ ರಾಧಾಕೃಷ್ಣ ವಿಖೆ ಪಾಟೀಲ್‌, ಮಂಗಳವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೆ, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್‌ ಅವರನ್ನು ಭೇಟಿಯಾಗಿದ್ದಾರೆ.

ಇದರ ಬೆನ್ನಲ್ಲೇ, ರಾಜ್ಯದ ಕಾಂಗ್ರೆಸ್‌ ನಾಯಕತ್ವದ ಬಗ್ಗೆ ಅಸಮಾಧಾನ ಹೊಂದಿದ ಅಬ್ದುಲ್‌ ಸತ್ತಾರ್‌, ಕಾಳಿದಾಸ್‌ ಕೊಲಂಬಕರ್‌ ಹಾಗೂ ಜಯಕುಮಾರ್‌ ಅವರು ಸಹ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, 8-10 ಕಾಂಗ್ರೆಸ್‌ ನಾಯಕರು ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆಯಿದೆ. 

ಈ ಮೂಲಕ ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ್ದ ಕಾಂಗ್ರೆಸ್‌ಗೆ ಇದೀಗ ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಸ್ಥಾನಮಾನವೂ ಕೈತಪ್ಪಿದೆ. ವಿಖೆ ಪಾಟೀಲ್‌ ಅವರಿಗೆ ಸಚಿವ ಸ್ಥಾನ ನೀಡಲಾಗುತ್ತದೆ ಎಂದು ಹೇಳಲಾಗಿದೆ.

ಲೋಕಸಭಾ ಚುನಾವಣೆಗೂ ಮುನ್ನವೇ ವಿಖೆ ಪಾಟೀಲ್‌ ಅವರ ಪುತ್ರ ಸುಜಯ್‌ ವಿಖೆ ಪಾಟೀಲ್‌ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದರು. ಅಲ್ಲದೆ, ಅಹಮದಾನಗರ ಕ್ಷೇತ್ರದಿಂದ ಸ್ಪರ್ಧಿಸಿ 2.81 ಲಕ್ಷ ಮತಗಳ ಅಂತರದಿಂದ ಜಯಿಸಿ ಲೋಕಸಭೆಗೆ ಆಯ್ಕೆಯಾಗಿದ್ದರು.

click me!