
ಶಿರಾ : ದೇವರ ಪ್ರಸಾದ ಸೇವಿಸಿ 40ಕ್ಕೂ ಹೆಚ್ಚು ಭಕ್ತರು ಅಸ್ವಸ್ಥಗೊಂಡಿರುವ ಘಟನೆ ಶಿರಾ ತಾಲೂಕಿನ ಕಳ್ಳಂಬೆಳ್ಳ ಹೋಬಳಿ ಚಿನ್ನಪ್ಪನಹಳ್ಳಿಯಲ್ಲಿ ನಡೆದಿದ್ದು, ಕಲುಷಿತ ಆಹಾರ ಸೇವನೆಯೇ ಘಟನೆಗೆ ಕಾರಣ ಎನ್ನಲಾಗಿದೆ. ಇಲ್ಲಿನ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶನಿವಾರ ರಾತ್ರಿ ಹರಿಸೇವೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಈ ವೇಳೆ ದೇವಸ್ಥಾನಕ್ಕೆ ಆಗಮಿಸಿದವರಿಗೆ ಪ್ರಸಾದವಾಗಿ ಅನ್ನ, ಸಾಂಬಾರು ಮತ್ತು ಪಲ್ಯ ವಿತರಿಸಲಾಗಿತ್ತು. ಪ್ರಸಾದ ಸ್ವೀಕರಿಸಿದ 45ಕ್ಕೂ ಹೆಚ್ಚು ಭಕ್ತರಿಗೆ ಭಾನುವಾರ ಬೆಳಗ್ಗೆ ಹೊಟ್ಟೆನೋವು, ವಾಂತಿ, ಭೇದಿ ಕಾಣಿಸಿಕೊಂಡಿದ್ದು, ತಕ್ಷಣ ಅಸ್ವಸ್ಥಗೊಂಡವರನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. 8ಕ್ಕೂ ಹೆಚ್ಚು ಮಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಯಿಂದ ಇಡೀ ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಕಲುಷಿತ ಆಹಾರ ಸೇವನೆಯಿಂದ ಘಟನೆ ಸಂಭವಿಸಿರಬಹುದು. ಯಾರು ಆತಂಕ ಪಡಬೇಕಾಗಿಲ್ಲ. ಇದು ಸಾಮಾನ್ಯ ರೀತಿಯ ಪ್ರಕರಣವಾಗಿದ್ದು, ಪ್ರಾಣಾಪಾಯದ ಭಯವಿಲ್ಲ ಎಂದು ಶಿರಾ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ. ಅಜ್ಗರ್ ಬೇಗ್ ತಿಳಿಸಿದ್ದಾರೆ. ಘಟನೆ ಸಂಬಂಧ ಯಾವುದೇ ದೂರು ದಾಖಲಾಗದಿದ್ದರೂ, ಪೊಲೀಸರೇ ಸ್ವಯಂ ಪ್ರೇರಿತರಾಗಿ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.