ಕೆವೈಸಿ ಮಾಡದಿದ್ದರೆ ಆಗಸ್ಟ್‌ನಿಂದ ರೇಶನ್‌ ಸಿಗಲ್ಲ!

Published : Jun 09, 2019, 08:00 AM IST
ಕೆವೈಸಿ ಮಾಡದಿದ್ದರೆ ಆಗಸ್ಟ್‌ನಿಂದ ರೇಶನ್‌ ಸಿಗಲ್ಲ!

ಸಾರಾಂಶ

ರೇಷನ್ ಕಾರ್ಡ್ ಹೊಂದಿರುವವರು ಜುಲೈ 31ರ ಒಳಗೆ ನಿಮ್ಮ ರೇಷನ್ ಕಾರ್ಡ್ ಕೆ ವೈ ಸಿ ಮಾಡಿಸದಿದ್ದರೆ ನಿಮ್ಮ ಕಾರ್ಡ್ ರದ್ದಾಗುತ್ತೆ. ಏನದು ಕೆವೈಸಿ 

ಬೆಂಗಳೂರು :  ಪಡಿತರ ಚೀಟಿಯಲ್ಲಿ ಹೆಸರು ಇರುವ ಪ್ರತಿಯೊಬ್ಬರೂ ಜುಲೈ 31ರೊಳಗೆ ಆಧಾರ್‌ ದೃಢೀಕರಣ (ಇ-ಕೆವೈಸಿ) ಮಾಡಿಸಿಕೊಳ್ಳಬೇಕು. ಇ-ಕೆವೈಸಿ ಮಾಡಿಸಿಕೊಳ್ಳದವರಿಗೆ ಆಗಸ್ಟ್‌ನಿಂದ ಪಡಿತರ ನೀಡದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಆಧಾರ್‌ ದೃಢೀಕರಣದ ಮೂಲಕ ಚಾಲ್ತಿಯಲ್ಲಿ ಇರದ, ಕುಟುಂಬದೊಂದಿಗೆ ವಾಸವಿಲ್ಲದ ಹಾಗೂ ಮೃತರಾದ ಫಲಾನುಭವಿಗಳ ಮಾಹಿತಿಯನ್ನು ಗುರುತಿಸಿ, ಅಂತಹವರನ್ನು ದತ್ತಾಂಶದಿಂದ ತೆಗೆದುಹಾಕಿ ಪಡಿತರ ಕಡಿತ ಮಾಡಲಾಗುವುದೆಂದು ಇಲಾಖೆ ತಿಳಿಸಿದೆ. ಇ-ಕೆವೈಸಿ ದೃಢೀಕರಣ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಜುಲೈ 31ರೊಳಗೆ ಅಂತ್ಯೋದಯ, ಬಿಪಿಎಲ್‌ ಮತ್ತು ಎಪಿಎಲ್‌ ಪಡಿತರ ಚೀಟಿಯಲ್ಲಿ ಹೆಸರು ಇರುವ ಎಲ್ಲರೂ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಇ-ಕೆವೈಸಿ ದೃಢೀಕರಣ ಮಾಡಿಸಬೇಕು.

ಉಚಿತ ನೋಂದಣಿ:

ಪಡಿತರ ಚೀಟಿದಾರರು ಇ-ಕೆವೈಸಿ ನೋಂದಣಿಗೆ ಯಾವುದೇ ಸೈಬರ್‌ ಕೆಫೆ, ಕಂಪ್ಯೂಟರ್‌ ಸೆಂಟರ್‌ಗಳಿಗೆ ಹೋಗಬೇಕಿಲ್ಲ. ಬದಲಾಗಿ ತಾವು ಪಡಿತರ ಪಡೆಯುವ ನ್ಯಾಯಬೆಲೆ ಅಂಗಡಿಗಳಲ್ಲಿಯೇ ಆಧಾರ್‌ ದೃಢೀಕರಣ ಮಾಡಿಸಬೇಕಾಗುತ್ತದೆ. ಪ್ರತಿಯೊಬ್ಬರೂ ಉಚಿತವಾಗಿ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ. ಒಂದು ವೇಳೆ ಯಾವುದೇ ನ್ಯಾಯಬೆಲೆ ಅಂಗಡಿಯ ಪಡಿತರ ವಿತರಕರು ಫಲಾನುಭವಿಗಳಿಂದ ಹಣ ಪಡೆದರೆ ಈ ಬಗ್ಗೆ ಸ್ಥಳೀಯ ಆಹಾರ ಇಲಾಖೆ ಅಧಿಕಾರಿಗಳಿಗೆ ದೂರು ನೀಡಬಹುದಾಗಿದೆ.

ಸರ್ಕಾರ ಪ್ರತಿ ಫಲಾನುಭವಿಯ ಆಧಾರ್‌ ದೃಢೀಕರಣಕ್ಕೆ ತಲಾ 5 ರು.ನಂತೆ ಮತ್ತು ಒಂದು ಕುಟುಂಬದಲ್ಲಿ ಎಷ್ಟೇ ಫಲಾನುಭವಿ ಇದ್ದರೂ ಅವರೆಲ್ಲರ ನೋಂದಣಿಗೆ ಗರಿಷ್ಠ 20 ರು.ಗಳಂತೆ ನ್ಯಾಯಬೆಲೆ ಅಂಗಡಿಯವರಿಗೆ ಹಣ ಪಾವತಿಸಲಿದೆ.

ಯಾಕೆ ಆಧಾರ್‌ ದೃಢೀಕರಣ:

ರಾಜ್ಯದಲ್ಲಿ ಅಂತ್ಯೋದಯ ಮತ್ತು ಬಿಪಿಎಲ್‌ ಪಡಿತರ ಚೀಟಿ ಹೊಂದಿರುವ 1.24 ಕೋಟಿ ಕುಟುಂಬಗಳಿದ್ದು, 4,16,54,587 ಫಲಾನುಭವಿಗಳು ಪಡಿತರ ಪಡೆಯುತ್ತಿದ್ದಾರೆ. ಇದರಲ್ಲಿ ಶೇ.99ರಷ್ಟುಫಲಾನುಭವಿಗಳ ಆಧಾರ್‌ ಪಡೆಯಲಾಗಿದೆ. ಆದರೆ, ಆಧಾರ್‌ ನೋಂದಣಿ ಹಾಗೂ ದೃಢೀಕರಣ ಆಗಿಲ್ಲ. ಪಡಿತರ ದತ್ತಾಂಶದಲ್ಲಿ ತಿಳಿಸಿರುವಂತೆ ಒಟ್ಟು ಫಲಾನುಭವಿಗಳ ಸಂಖ್ಯೆಯಲ್ಲಿ ಶೇ.17.07ರಷ್ಟುಫಲಾನುಭವಿಗಳ ಆಧಾರ್‌ ದೃಢೀಕರಣ ಮಾತ್ರ ಆಗಿದೆ. ಈ ಹಿನ್ನೆಲೆಯಲ್ಲಿ ಪಡಿತರ ಸೋರಿಕೆ ತಡೆಯಲು ಇ-ಕೆವೈಸಿ ನೋಂದಣಿ ಆರಂಭಿಸಲಾಗಿದೆ. ಜುಲೈ ಅಂತ್ಯದೊಳಗೆ ನೋಂದಣಿ ಮಾಡಿಸದಿದ್ದರೆ ಅಂತಹ ಫಲಾನುಭವಿಗಳಿಗೆ ಆಗಸ್ಟ್‌ ತಿಂಗಳ ಪಡಿತರ ಸಿಗುವುದಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹಿರಿಯ ಅಧಿಕಾರಿಗಳು ಕನ್ನಡಪ್ರಭಕ್ಕೆ ಮಾಹಿತಿ ನೀಡಿದ್ದಾರೆ.

4 ಕೋಟಿ ಜನರಿಗೆ ಪಡಿತರ ವಿತರಣೆ

ಅಂತ್ಯೋದಯ ಕಾರ್ಡ್‌ಗಳ ಸಂಖ್ಯೆ 7,69,918 (ಫಲಾನುಭವಿಗಳು 30,16,603), ಬಿಪಿಎಲ್‌ ಪಡಿತರ ಚೀಟಿ 1,16,80,898 (ಫಲಾನುಭವಿಗಳು 3,86,37,984) ಇವೆ. ಹಾಗೆಯೇ ಒಬ್ಬರೇ ಸದಸ್ಯರಿರುವ 93921 ಕಾರ್ಡ್‌ಗಳು ಮತ್ತು ಒಂದಕ್ಕಿಂತ ಹೆಚ್ಚು ಸದಸ್ಯರಿರುವ 379215 ಎಪಿಎಲ್‌ ಕಾರ್ಡುಗಳಿದ್ದು, ರಾಜ್ಯದಲ್ಲಿ ಒಟ್ಟು 1.29 ಕೋಟಿಗೂ ಹೆಚ್ಚು ಪಡಿತರ ಕಾರ್ಡ್‌ ವಿತರಿಸಲಾಗಿದೆ.

ಪಡಿತರ ಫಲಾನುಭವಿಗಳು ಜುಲೈ ಅಂತ್ಯದೊಳಗೆ ಕುಟುಂಬ ಸಮೇತರಾಗಿ ಆಧಾರ್‌ ದೃಢೀಕರಣ (ಇ-ಕೆವೈಸಿ) ಮಾಡಿಸಿಕೊಳ್ಳಬೇಕು. ಆಗಸ್ಟ್‌ ತಿಂಗಳಿನಲ್ಲಿ ನೋಂದಣಿ ಮಾಡಿಸದ ಫಲಾನುಭವಿಯ ಪಡಿತರ ರದ್ದುಗೊಳಿಸಲಾಗುವುದು. ಬಯೋಮೆಟ್ರಿಕ್‌ ಮೂಲಕ ನೋಂದಣಿ ಮಾಡಲಾಗುವುದು. ಈಗಾಗಲೇ ಈ ಕುರಿತು ನ್ಯಾಯಬೆಲೆ ಅಂಗಡಿ ಎದುರು ಸೂಚನಾ ಫಲಕ ಪ್ರದರ್ಶಿಸಲಾಗುತ್ತಿದೆ.

- ಡಿ.ಜಿ.ಶಿವಾನಂದಪ್ಪ, ಅಧ್ಯಕ್ಷ, ರಾಜ್ಯ ಪಡಿತರ ವಿತರಕರ ಕ್ಷೇಮಾಭಿವೃದ್ಧಿ ಸಂಘ

ವರದಿ : ಸಂಪತ್‌ ತರೀಕೆರೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಾಮಾಜಿಕ ಭದ್ರತಾ ಪಿಂಚಣಿಯಲ್ಲಿ 24.55 ಲಕ್ಷ ಅನುಮಾನಾಸ್ಪದ ಫಲಾನುಭವಿಗಳು: ಕೃಷ್ಣ ಬೈರೇಗೌಡ
ಹಂತ ಹಂತವಾಗಿ 1.88 ಲಕ್ಷ ಸರ್ಕಾರಿ ಹುದ್ದೆ ಭರ್ತಿ : ಸಿದ್ದರಾಮಯ್ಯ