ಚೆನ್ನೈ(ಅ.03): ಕಾವೇರಿ ನಿರ್ವಹಣಾ ಮಂಡಳಿ ರಚನೆ ಸಂಸತ್ತಿನ ಜವಾಬ್ದಾರಿ, ಸುಪ್ರೀಂಕೋರ್ಟ್ ವ್ಯಾಪ್ತಿಗೆ ಬರುವುದಿಲ್ಲವೆಂದು ಕೇಂದ್ರ ಸರ್ಕಾರ ಅಫಿಡವಿಟ್ ಸಲ್ಲಿಸಿರುವುದಕ್ಕೆ ಎಐಎಡಿಎಂಕೆ ವಕ್ತಾರೆ ಸಿ.ಆರ್. ಸರಸ್ವತಿ ಕಿಡಿ ಕಾರಿದ್ದಾರೆ.
ಕಾವೇರಿ ನೀರು ನಿರ್ವಹಣಾ ಮಂಡಳಿಯನ್ನು ತಕ್ಷಣವೇ ರಚಿಸಬೇಕು. ಕರ್ನಾಟಕ ರಾಜ್ಯವು ಸುಪ್ರೀಂ ಕೋರ್ಟ್ ಆದೇಶವನ್ನು ಪರಿಪಾಲನೆ ಮಾಡುತ್ತಿಲ್ಲ. ಇದೆಲ್ಲ ವಿಚಾರಗಳು ತಿಳಿದೇ ನಮ್ಮ ಮುಖ್ಯಮಂತ್ರಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲಿಂದ ಬಂದಂತಹ ಆದೇಶಕ್ಕೂ ಕರ್ನಾಟಕ ಮನ್ನಣೆ ಕೊಡುತ್ತಿಲ್ಲ. ಈಗ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಇದು ಕರ್ನಾಟಕದ ಪರವಾಗಿದೆ. ಆದರೆ, ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುವ ಆವಶ್ಯಕತೆ ಕೇಂದ್ರಕ್ಕೆ ಇರಲಿಲ್ಲ. ಅರ್ಜಿಯನ್ನು ಕೇಂದ್ರ ಸರ್ಕಾರ ಕೂಡಲೇ ಹಿಂಪಡೆದು ಆದಷ್ಟು ಬೇಗ ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸಲು ಆವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.