
ಬೆಂಗಳೂರು: ರಾಜ್ಯದ ಗ್ರಾಮೀಣ, ನಗರ ಪ್ರದೇಶದಲ್ಲಿ ಸರ್ಕಾರಿ ಜಮೀನುಗಳಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿಕೊಂಡ ಬಡ ಜನರಿಗೆ ಅನುಕೂಲ ಕಲ್ಪಿಸಲು ರಾಜ್ಯ ಸರ್ಕಾರ ರೂಪಿಸಿರುವ ಅಕ್ರಮ-ಸಕ್ರಮ ಯೋಜನೆ ಕುರಿತು ಶೀಘ್ರ ಅಧಿಸೂಚನೆ ಹೊರ ಬೀಳುವ ಸಾಧ್ಯತೆ ಇದೆ.
ಶನಿವಾರ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ನಗರಾಭಿವೃದ್ಧಿ ಇಲಾಖೆ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅಕ್ರಮ-ಸಕ್ರಮ ಯೋಜನೆ ಅನುಷ್ಠಾನ ಕುರಿತಂತೆ ಪರಿಶೀಲನೆ ನಡೆಸಿದರು.
ಅಕ್ರಮ-ಸಕ್ರಮ ಯೋಜನೆಗೆ ಹೈಕೋರ್ಟ್ ಇತ್ತೀಚೆಗಷ್ಟೇ ಹಸಿರು ನಿಶಾನೆ ತೋರಿತ್ತು. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಡಿ ಅರ್ಜಿ ಸಲ್ಲಿಸಿದವರು ಹೈಕೋರ್ಟ್ ಆದೇಶ ಪ್ರಶ್ನಿಸಿ, ಸುಪ್ರೀಂಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ಸಿಎಂ ಗಮನಕ್ಕೆ ತಂದರು. ಅಕ್ರಮ-ಸಕ್ರಮ ಕುರಿತು ಈಗಾಗಲೇ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಆಧರಿಸಿ, ನಿಯಮಗಳನ್ನು ರಚಿಸಿ, ಅಧಿಸೂಚನೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು.
ಕರ್ನಾಟಕ ಭೂ ಕಂದಾಯ ಅಧಿನಿಯಮ 1964ರ ಕಲಂ 94-ಸಿ ಮತ್ತು 94-ಸಿಸಿ ಅನ್ವಯ ರೂಪಿಸಲಾಗಿದ್ದ ಸಾಂಕೇತಿಕ ಬೆಲೆಗಳನ್ನು ತಗ್ಗಿಸಲು ಸಂಪುಟ ನಿರ್ಧರಿಸಿತ್ತು. ಗ್ರಾಮೀಣ ಪ್ರದೇಶದಲ್ಲಿ 30-40 ಚದರ ಅಡಿಗೆ ರೂ.1000, 40-60 ಚದರ ಅಡಿಗೆ ರೂ.2000 ಹಾಗೂ 50-80 ಚದರ ಅಡಿಯ ನಿವೇಶನಗಳಿಗೆ ರೂ.3000 ಗಳಿಗೆ ಪರಿಷ್ಕರಿಸಲು ಇತ್ತೀಚೆಗಷ್ಟೇ ಸಂಪುಟ ತೀರ್ಮಾನ ತೆಗೆದುಕೊಂಡಿದೆ. ಈ ಮೊದಲು ಕ್ರಮವಾಗಿ ರೂ.2, ರೂ.4 ಹಾಗೂ ರೂ.8000 ವಿಧಿಸಲಾಗುತ್ತಿತ್ತು. ನಗರ ಪ್ರದೇಶಗಳಲ್ಲಿ (ಬಿಬಿಎಂಪಿ ಹೊರತುಪಡಿಸಿ) 20-30 ಚದರ ಅಡಿಗೆ ರೂ.5 ಸಾವಿರಗಳಿಗೆ ಪರಿಷ್ಕರಿಸಿದ್ದು, ಪರಿಶಿಷ್ಟರು ಹಾಗೂ ವಿಕಲಚೇತರಿಗೆ ರೂ.2 ಸಾವಿರಗಳಿಗೆ ಇಳಿಸಲಾಗಿದೆ. ಈ ಮೊದಲು ರೂ.10 ಸಾವಿರ ನಿಗದಿಪಡಿಸಲಾಗಿತ್ತು.
ಸಭೆಯಲ್ಲಿ ಸಚಿವರಾದ ಕೆ.ಜೆ.ಜಾರ್ಜ್, ರೋಶನ್ ಬೇಗ್, ಈಶ್ವರ್ ಖಂಡ್ರೆ, ಮೇಯರ್ ಪದ್ಮಾವತಿ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ಕನ್ನಡಪ್ರಭ ವಾರ್ತೆ
epaper.kannadaprabha.in
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.