
ಬೆಳಗಾವಿ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕೋ-ಆಪ್ ಸೊಸೈಟಿಯ ನಿರ್ದೇಶಕಿ ಪ್ರೇಮಾ ಅಪ್ಪುಗೋಳ ಅವರನ್ನು ಖಡೇಬಜಾರ ಪೊಲೀಸರು ಶುಕ್ರವಾರ ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರು ಪಡಿಸಿದರು. ಜು.10ರ ತನಕ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕೋ-ಆಪ್ ಸೊಸೈಟಿಯಲ್ಲಿ ಠೇವಣಿ ಇರಿಸಿದ್ದ ಗ್ರಾಹಕರ ಹಣ ವಾಪಸಾತಿ ಮಾಡದ ಹಿನ್ನೆಲೆಯಲ್ಲಿ ಚಿತ್ರದ ನಿರ್ಮಾಪಕ ಆನಂದ ಅಪ್ಪುಗೋಳ ಅವರ ಮೇಲೆ ಸಾಕಷ್ಟುದೂರುಗಳು ದಾಖಲಾಗಿದ್ದವು. ಇದಕ್ಕೆ ಸಂಬಂಧಿಸಿದಂತೆ ಆನಂದ ಅಪ್ಪುಗೋಳ, ಸೊಸೈಟಿಯ ವ್ಯವಸ್ಥಾಪಕರು ಹಾಗೂ ಕೆಲ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು.
ಇತ್ತೀಚೆಗೆ ಜಾಮೀನು ಮೇಲೆ ಹೊರ ಬಂದಿದ್ದಾಗ, ಸಂಗೊಳ್ಳಿ ರಾಯಣ್ಣ ಸೊಸೈಟಿ ಸಾವಿರಾರು ಗ್ರಾಹಕರು ಅವರ ಮನೆಗೆ ಮುತ್ತಿಗೆ ಹಾಕಿ ತಮ್ಮ ಹಣ ವಾಪಸ್ ನೀಡುವಂತೆ ಆಗ್ರಹಿಸಿದ್ದರು. ಇನ್ನು ಆನಂದ ಅಪ್ಪುಗೋಳ ಸಂಗೊಳ್ಳಿ ರಾಯಣ್ಣ ಮಾತ್ರವಲ್ಲ ಭೀಮಾಂಬಿಕಾ ಮಹಿಳಾ ಸೊಸೈಟಿ ಹಾಗೂ ಗಜರಾಜ ಎಂಬ ಹೆಸರಿನಲ್ಲಿ ಸೊಸೈಟಿ ಆರಂಭಿಸಿದ್ದು, ಅವು ಕೂಡ ವ್ಯವಹಾರ ಸ್ಥಗಿತಗೊಳಿಸಿವೆ.
ಇದೀಗ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೊಸೈಟಿಯಲ್ಲಿ ಠೇವಣಿ ಇಟ್ಟವರ ಹಣ ವಾಪಸ್ ಮಾಡದ ಹಿನ್ನೆಲೆಯಲ್ಲಿ ದೂರೊಂದಕ್ಕೆ ಸಂಬಂಧಿಸಿದಂತೆ ಸೊಸೈಟಿ ನಿರ್ದೇಶಕಿ ಹಾಗೂ ಆನಂದ ಅಪ್ಪುಗೋಳ ಪತ್ನಿ ಪ್ರೇಮಾ ಅಪ್ಪುಗೋಳ ಅವರನ್ನು ಶುಕ್ರವಾರ ಖಡೇಬಜಾರ ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ಗ್ರಾಹಕ ನ್ಯಾಯಾಲಯದ ವಾರಂಟ್ ಆಧರಿಸಿ ಪ್ರೇಮಾ ಅವರನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ಕುರಿತ ವಿಚಾರಣೆ ಜು.10ರಂದು ಇರುವ ಹಿನ್ನೆಲೆಯಲ್ಲಿ ಅವರಿಗೆ ಜು.10ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.