
ಬೆಂಗಳೂರು(ಮಾ. 21): ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಬೃಹತ್ ಪ್ರತಿಭಟನೆಯನ್ನು ವಾಪಸ್ ಪಡೆಯುವ ಸಾಧ್ಯತೆ ಇದೆ. ಇಂದು ಸಿಎಂ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸಂಘದ ರಾಜ್ಯಾಧ್ಯಕ್ಷೆ ವರಲಕ್ಷ್ಮೀ ಕೂಡ ಪಾಲ್ಗೊಂಡಿದ್ದರು. ಸಿಎಂ ಆಶ್ವಾಸನೆಯಿಂದ ಅಂಗನವಾಡಿ ಕಾರ್ಯಕರ್ತೆಯರು ಸಮಾಧಾನಗೊಂಡರೆಂಬ ಮಾಹಿತಿ ಮಾಧ್ಯಮಗಳಿಗೆ ಸಿಕ್ಕಿದೆ.
ಸಂಧಾನ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗೆ ಕೇಂದ್ರ ಸರಕಾರವನ್ನು ದೂರಿದ್ದಾರೆ. ರಾಜ್ಯ ಸರಕಾರಕ್ಕೆ ಭಾರವಾದರೂ ಅಂಗನವಾಡಿ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಂಬಳ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ವಿವಿಧೆಡೆಯಿಂದ ಬಂದಿರುವ 10 ಸಾವಿರಕ್ಕೂ ಅಂಗನವಾಡಿ ಕಾರ್ಯಕರ್ತೆಯರು ನಿನ್ನೆಯಿಂದ ಫ್ರೀಡಂ ಪಾರ್ಕ್ ಬಳಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.
ಬೇಡಿಕೆಗಳೇನು?
* ಸಹಾಯಕರ ತಿಂಗಳ ಗೌರವಧನವನ್ನು 3,500ದಿಂದ 7 ಸಾವಿರಕ್ಕೆ ಹೆಚ್ಚಿಸಬೇಕು
* ಅಂಗನವಾಡಿ ಕಾರ್ಯಕರ್ತೆಯರ ಗೌರವಧನ 7ರಿಂದ 10 ಸಾವಿರಕ್ಕೆ ಹೆಚ್ಚಿಸಬೇಕು
* ಭಾಗ್ಯಲಕ್ಷ್ಮಿ ಬಾಂಡ್ ವಿತರಣೆ, ಪೊಲಿಯೋ ಹನಿ ಅಭಿಯಾನಕ್ಕೆ ಪ್ರತ್ಯೇಕ ಸಿಬ್ಬಂದಿ
* ಅಂಗನವಾಡಿ ಸಿಬ್ಬಂದಿ ನೇಮಕ ನಿಯಮಗಳು ತೆಗೆಯುವುದಕ್ಕೂ ನಿಯಮ ರೂಪಿಸಬೇಕು
* ಕಾರ್ಯಕರ್ತರ ಸೇವಾ ಜೇಷ್ಠತೆ ಆಧಾರದ ಮೇಲೆ ಭತ್ಯೆ ಹೆಚ್ಚಿಸಬೇಕು
* ಆರ್'ಟಿಐ ಅಡಿಯಲ್ಲಿ ಅಂಗನವಾಡಿ ಕೇಂದ್ರಗಳನ್ನು ತರಬಾರದು
* ನೌಕರರೆಂದು ಪರಿಗಣಿಸಿ ಕನಿಷ್ಠ ವೇತನ, ನಿವೃತ್ತಿ ಸೌಲಭ್ಯ ಕೊಡಬೇಕು
* ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯತಿಗೆ ಪ್ರತ್ಯೇಕ ನಿಯಮ ರೂಪಿಸಬೇಕು
* ಆರೋಗ್ಯ ಸಂಬಂಧಿ ವಿಚಾರಗಳಿಗೆ ವೇತನ ಸಹಿತ ರಜೆ ನೀಡಬೇಕು
* ಅಂಗನವಾಡಿ ಕಾರ್ಯಕರ್ತೆಯರ ಖಾಲಿ ಸ್ಥಾನಗಳನ್ನು ಕೂಡಲೇ ಭರ್ತಿ ಮಾಡಬೇಕು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.