
ಚನ್ನಪಟ್ಟಣ : ಒಂದು ಕಡೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬೆಳೆ ಸಾಲಕ್ಕೆ ಸಂಬಂಧಿಸಿ ರೈತರಿಗೆ ನೋಟಿಸ್ ನೀಡದಂತೆ ಬ್ಯಾಂಕ್ಗಳಿಗೆ ಸೂಚನೆ ನೀಡುತ್ತಿದ್ದರೂ ಇತ್ತ ಮುಖ್ಯಮಂತ್ರಿ ಸ್ವಕ್ಷೇತ್ರದಲ್ಲೇ ಸಾಲ ಮರುಪಾವತಿ ಮಾಡದ ರೈತ ಮಹಿಳೆಯೊಬ್ಬರಿಗೆ ಬ್ಯಾಂಕ್ವೊಂದು ನ್ಯಾಯಾಲಯದಿಂದ ನೋಟಿಸ್ ಜಾರಿ ಮಾಡಿದೆ.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿದ ರಾಜ್ಯ ರೈತಸಂಘದ ಪದಾಧಿಕಾರಿಗಳು, ರೈತ ಮಹಿಳೆಗೆ ನೀಡಿರುವ ಕೋರ್ಟ್ ನೋಟಿಸ್ ಪ್ರದರ್ಶಿಸಿ, ಮುಖ್ಯಮಂತ್ರಿಗಳ ಸ್ವಕ್ಷೇತ್ರದಲ್ಲೇ ಬ್ಯಾಂಕ್ಗಳು ರೈತರಿಗೆ ನೋಟಿಸ್ ಜಾರಿಗೊಳಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ತಾಲೂಕಿನ ಕುರಿದೊಡ್ಡಿ ಗ್ರಾಮದ ಶಾರದಮ್ಮ ತಮ್ಮ 5 ಎಕರೆ ಭೂಮಿಯಲ್ಲಿ ಬೆಳೆ ಬೆಳೆಯಲು 2011ರಲ್ಲಿ ಬೇವೂರು ಗ್ರಾಮದ ಕೆನರಾ ಬ್ಯಾಂಕ್ನಿಂದ 5 ಲಕ್ಷ ರು. ಸಾಲ ಪಡೆದಿದ್ದರು. ಸಾಲ ಮರುಪಾವತಿಸಿಲ್ಲ ಎಂದು ಅವರಿಗೆ ನೋಟಿಸ್ ಬಂದಿದೆ ಎಂದರು.
ಬರ ಹಾಗೂ ಬೆಲೆ ಕುಸಿತದ ಪರಿಣಾಮ ಸಾಲ ಮರುಪಾವತಿ ಸಾಧ್ಯವಾಗಿರಲಿಲ್ಲ. ಆದರೆ ಇತ್ತೀಚೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಸಾಲ ಮನ್ನಾ ಘೋಷಣೆ ಮಾಡಿದ್ದರಿಂದ ರೈತ ಮಹಿಳೆಯ ಕುಟುಂಬ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು. ಆದರೆ ಬ್ಯಾಂಕ್ ಅಧಿಕಾರಿಗಳು ಈಗ ನ್ಯಾಯಾಲಯದಿಂದ ನೋಟಿಸ್ ಜಾರಿ ಮಾಡಿದ್ದರಿಂದ ಆತಂಕಕ್ಕೆ ಒಳಗಾಗಿದ್ದಾರೆ ಎಂದು ರೈತ ಸಂಘದ ಮುಖಂಡರು ಹೇಳಿದರು.
ಮುಖ್ಯಮಂತ್ರಿಗಳು ಹೋದಲ್ಲೆಲ್ಲ ಸಾಲ ಮನ್ನಾ ಯೋಜನೆ ಮಾಡಿದ್ದೇನೆ ಎಂದು ಹೇಳುವ ಬದಲು ಈ ಕುರಿತು ಬ್ಯಾಂಕ್ಗಳಿಗೆ ಸೂಚನೆ ನೀಡಲಿ ಎಂದು ಇದೇ ವೇಳೆ ರೈತ ಮುಖಂಡರು ಆಗ್ರಹಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.