
ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ತವರು ಜಿಲ್ಲೆಯಾದ ಶಿವಮೊಗ್ಗದ ಸಾಗರ ಕ್ಷೇತ್ರದ ಟಿಕೆಟ್ ಹಂಚಿಕೆ ಸಂಬಂಧ ಉದ್ಭವಿಸಿದ್ದ ಗೊಂದಲ ಬಗೆಹರಿಸುವ ಪ್ರಯತ್ನ ನಡೆದಿದ್ದು, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೇ ಟಿಕೆಟ್ ನೀಡುವ ನಿರೀಕ್ಷೆಯಿದೆ.
ಗುರುವಾರ ನಗರದ ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸಕ್ಕೆ ಬೇಳೂರು ಗೋಪಾಲಕೃಷ್ಣ ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ಅವರಿಬ್ಬರನ್ನೂ ಕರೆಸಿಕೊಂಡು ಯಡಿಯೂರಪ್ಪ ಸುದೀರ್ಘ ಮಾತುಕತೆ ನಡೆಸಿದರು. ಹಾಲಪ್ಪ ಅವರು ಈ ಹಿಂದೆ ಸೊರಬ ಕ್ಷೇತ್ರ ಪ್ರತಿನಿಧಿಸಿದ್ದರೂ ಆ ಕ್ಷೇತ್ರದಲ್ಲಿ ಈಗ ಕಾಂಗ್ರೆಸ್ನಿಂದ ವಲಸೆ ಬಂದಿರುವ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರನ್ನು ಕಣಕ್ಕಿಳಿಸಬೇಕು ಎಂಬ ಆಶಯ ಯಡಿಯೂರಪ್ಪ ಅವರದಾಗಿತ್ತು. ಕುಮಾರ್ ಬಂಗಾರಪ್ಪ ಅವರು ಪಕ್ಷ ಸೇರ್ಪಡೆ ವೇಳೆ ಯಡಿಯೂರಪ್ಪ ಅವರು ಮಾತು ಕೊಟ್ಟಿದ್ದರು. ಹೀಗಾಗಿ ಸಾಗರ ಕ್ಷೇತ್ರದಿಂದ ಹಾಲಪ್ಪ ಅವರಿಗೆ ಟಿಕೆಟ್ ನೀಡಬೇಕು ಎಂಬ ಉದ್ದೇಶವನ್ನು ಯಡಿಯೂರಪ್ಪ ಹೊಂದಿದ್ದರು.
ಈ ನಡುವೆ ಹಾಲಪ್ಪ ಅವರಿಗೆ ಸೊರಬದಿಂದ ಟಿಕೆಟ್ ನೀಡುವುದು ಬೇಡ ಎಂಬ ಸಲಹೆಯನ್ನು ಸಂಘ ಪರಿವಾರದ ಮುಖಂಡರು ನೀಡಿದ್ದಾರೆ ಎನ್ನಲಾಗಿದೆ. ಆದರೆ, ಇದಕ್ಕೆ ಜಿಲ್ಲಾ ಮುಖಂಡರ ವಿರೋಧವೂ ಇತ್ತು. ಸಾಗರ ಕ್ಷೇತ್ರದ ಹಾಲಿ ಶಾಸಕ ಹಾಗೂ ಸಚಿವ ಕಾಗೋಡು ತಿಮ್ಮಪ್ಪ ಅವರನ್ನು ಎದುರಿಸಲು ಬೇಳೂರು ಗೋಪಾಲಕೃಷ್ಣ ಅವರೇ ಸರಿಯಾದ ವ್ಯಕ್ತಿ. ಹಾಲಪ್ಪ ಅವರು ಕ್ಷೇತ್ರದ ಹೊರಗಿನ ವರಾಗುತ್ತಾರೆ.
ಕಾಗೋಡು ಅವರನ್ನು ಎದುರಿಸಿ ಗೆಲ್ಲುವುದು ಸಾಧ್ಯವಿಲ್ಲ ಎಂಬ ಅಭಿಪ್ರಾಯವನ್ನು ಯಡಿಯೂರಪ್ಪ ಸೇರಿದಂತೆ ಪಕ್ಷದ ಇತರ ನಾಯಕರಿಗೆ ರವಾನಿಸಿದ್ದರು. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರು ಉಭಯ ನಾಯಕರನ್ನು ಕರೆದು ಮಾತನಾಡಿದ ಯಡಿಯೂರಪ್ಪ ಅವರು ಸಮೀಕ್ಷೆ ಆಧರಿಸಿಯೇ ಅಭ್ಯರ್ಥಿ ಅಂತಿಮಗೊಳಿಸಲಾಗುವುದು.
ಬೇಳೂರು ಅವರಿಗೆ ಟಿಕೆಟ್ ನೀಡುವುದಕ್ಕೆ ಯಾವುದೇ ಅಭ್ಯಂತರವಿಲ್ಲ ಎಂಬ ಮಾತನ್ನು ಹೇಳಿದ್ದಾರೆ ಎನ್ನಲಾಗಿದೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಸಾಗರ ವಿಧಾನಭಾ ಕ್ಷೇತ್ರಕ್ಕೆ ಯಾರಿಗೆ ಟಿಕೆಟ್ ನೀಡಬೇಕೆಂಬುದು ಇನ್ನೂ ಅಂತಿಮವಾಗಿಲ್ಲ. ಸಮೀಕ್ಷಾ ವರದಿ, ಜಿಲ್ಲಾ ಸಮಿತಿ ಯಾರಿಗೆ ಶಿಫಾರಸು ಮಾಡುತ್ತದೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.