
ಬೆಂಗಳೂರು : ಪ್ರಾಕೃತಿಕ ವಿಕೋಪದ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಕೊಡಗು ಜಿಲ್ಲೆಯ ಮೂರು ಪಟ್ಟಣ ಪಂಚಾಯ್ತಿಗಳು ಸೇರಿದಂತೆ ಒಟ್ಟು 68 ನಗರ ಸ್ಥಳೀಯ ಸಂಸ್ಥೆಗಳ ಸ್ಥಾನಗಳು ಹಾಗೂ 36 ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯ ಫಲಿತಾಂಶ ಬುಧವಾರ ಪ್ರಕಟವಾಗಿದೆ. ಕೊಡಗು ಜಿಲ್ಲೆಯ 3 ಮೂರು ಪ.ಪಂ.ಗಳ ಪೈಕಿ ಎರಡರಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಧಿಕಾರ ಹಿಡಿಯುವುದು ಬಹುತೇಕ ನಿಶ್ಚಿತವಾಗಿದೆ. ಇನ್ನು ಬೆಳ್ತಂಗಡಿ ಪಟ್ಟಣ ಪಂಚಾಯ್ತಿಯಲ್ಲಿ ಬಿಜೆಪಿಗೆ ಸ್ಪಷ್ಟಬಹುಮತ ದೊರಕಿದೆ.
ಪ್ರಾಕೃತಿಕ ವಿಕೋಪದಿಂದ ತತ್ತರಿಸಿದ್ದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಮೂರು ಪಟ್ಟಣ ಪಂಚಾಯ್ತಿಗಳಿಗೆ ನಡೆಯಬೇಕಿದ್ದ ಚುನಾವಣೆಯನ್ನು ಅ.3ಕ್ಕೆ ಮುಂದೂಡಲಾಗಿತ್ತು. ಅಂದು ನಡೆದ ಚುನಾವಣೆ ಫಲಿತಾಂಶ ಈಗ ಪ್ರಕಟವಾಗಿದ್ದು, ಸೋಮವಾರಪೇಟೆ ಪಪಂನಲ್ಲಿ 22 ವರ್ಷಗಳ ಬಿಜೆಪಿ ಆಡಳಿತಕ್ಕೆ ತೆರೆ ಎಳೆಯುವಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಸಫಲವಾಗಿವೆ.
ಈ ಪಪಂನ ಒಟ್ಟು 11 ವಾರ್ಡ್ಗಳ ಪೈಕಿ ಕಾಂಗ್ರೆಸ್ 4, ಜೆಡಿಎಸ್ 3, ಬಿಜೆಪಿ 3 ಹಾಗೂ ಓರ್ವ ಪಕ್ಷೇತರರು ಜಯಗಳಿಸಿದ್ದಾರೆ. ಇನ್ನು ಕುಶಾಲನಗರ ಪಪಂನಲ್ಲಿ ಆಡಳಿತ ಚುಕ್ಕಾಣಿ ಹಿಡಿಯುವಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟಬಹುಮತ ಲಭಿಸದೇ ಇದ್ದರೂ ಬಹುತೇಕ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಆಡಳಿತಕ್ಕೇರುವ ಸಾಧ್ಯತೆಗಳು ನಿಚ್ಚಳವಾಗಿವೆ. ಒಟ್ಟು 16 ವಾರ್ಡ್ಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 6, ಕಾಂಗ್ರೆಸ್ 6, ಜೆಡಿಎಸ್ನ ನಾಲ್ವರು ವಿಜೇತರಾಗಿದ್ದಾರೆ.
ವಿರಾಜಪೇಟೆಯಲ್ಲಿ ಅತಂತ್ರ: ವಿರಾಜಪೇಟೆ ಪಪಂನಲ್ಲಿ ಕಳೆದ ಅವಧಿಯಲ್ಲಿ ಆಡಳಿತ ನಡೆಸಿದ್ದ ಬಿಜೆಪಿ ಈ ಬಾರಿ ಎಂಟು ಸ್ಥಾನಕ್ಕೆ ಸೀಮಿತವಾಗಿ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. ಆದರೆ, ಬಹುಮತಕ್ಕೆ ಬಿಜೆಪಿಗೆ ಇನ್ನೂ ಎರಡು ಸ್ಥಾನಗಳ ಕೊರತೆ ಇದೆ. ಒಟ್ಟು 18 ಸ್ಥಾನಗಳ ಪೈಕಿ ಬಿಜೆಪಿ 8, ಕಾಂಗ್ರೆಸ್ 6, ಜೆಡಿಎಸ್ನ ಒಬ್ಬರು ಹಾಗೂ ಮೂವರು ಪಕ್ಷೇತರರು ಗೆಲುವು ಸಾಧಿಸಿದ್ದಾರೆ. ಒಂದು ವೇಳೆ ಬಿಜೆಪಿ ಪಕ್ಷೇತರರನ್ನು ಸೆಳೆದುಕೊಳ್ಳುವಲ್ಲಿ ಯಶಸ್ವಿಯಾದರೆ ಮತ್ತೆ ಅಧಿಕಾರಕ್ಕೇರುವುದು ಸಾಧ್ಯವಿದೆ.
ಬೆಳ್ತಂಗಡಿಯಲ್ಲಿ ಅರಳಿದ ಕಮಲ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪಟ್ಟಣ ಪಂಚಾಯ್ತಿಯ ಇತಿಹಾಸದಲ್ಲೇ ಮೊದಲ ಬಾರಿಗೆ ಬಿಜೆಪಿ ಪೂರ್ಣ ಬಹುಮತದೊಂದಿಗೆ ಅಧಿಕಾರದ ಗದ್ದುಗೆಯನ್ನೇರಲು ಸಿದ್ಧವಾಗಿದೆ. ಪಪಂನ ಒಟ್ಟು 11 ವಾರ್ಡ್ಗಳಿಗೆ ನಡೆದ ಚುನಾವಣೆಯಲ್ಲಿ 7 ವಾರ್ಡ್ಗಳಲ್ಲಿ ಬಿಜೆಪಿ, 4 ವಾರ್ಡ್ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯ ಗಳಿಸಿದ್ದಾರೆ.
ಇದಲ್ಲದೆ ಮಾಜಿ ಸಚಿವ ರಮಾನಾಥ ರೈ ಅವರ ಕ್ಷೇತ್ರವಾದ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಂಗಬೆಟ್ಟು ತಾಲೂಕು ಪಂಚಾಯಿತಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪ್ರಭಾಕರ ಪ್ರಭು ವಿಜಯಿಯಾಗಿದ್ದಾರೆ.
ಉಳಿದಂತೆ ಕಲಬುರಗಿ ಜಿಪಂನ ಅಡಕಿ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ವೀರಣ್ಣ ಪಾಣಿ, ಚಾಮರಾಜನಗರ ನಗರಸಭೆಯ ಪ್ರತಿಷ್ಠೆಯ 9ನೇ ವಾರ್ಡ್ನಲ್ಲಿ ನಾಗೇಂದ್ರ ಆಯ್ಕೆಯಾಗಿದ್ದಾರೆ. ಇವರಿಬ್ಬರು ಬಿಜೆಪಿ ಅಭ್ಯರ್ಥಿಗಳಾಗಿದ್ದಾರೆ. ಅಲ್ಲದೆ, ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಸೋಮನಾಥಪುರ ಜಿಪಂ ಕ್ಷೇತ್ರದ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಎಸ್.ವಿ. ಜಯಪಾಲ್, ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕುದೂರು ಜಿಪಂ ಉಪ ಚುನಾವಣೆಯಲ್ಲಿ ಮೂರು ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಿ.ಅಣ್ಣೇಗೌಡ, ಶಿವಮೊಗ್ಗ ಜಿಲ್ಲೆಯ ಅವಿನಹಳ್ಳಿ ಜಿಪಂ ಉಪ ಚುನಾವಣೆಯಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಅಣ್ಣನ ಮಗ, ಕಾಂಗ್ರೆಸ್ನ ಕಾಗೋಡು ಅಣ್ಣಾಜಿ ಹಾಗೂ ಹಾಸನ ಜಿಲ್ಲೆಯ ಅರಕಲಗೂಡು ತಾಪಂಗೆ ನಡೆದ ರಾಮನಾಥಪುರ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಜಿ.ಸಿ.ಮಂಜೇಗೌಡ ಆಯ್ಕೆಯಾಗಿದ್ದಾರೆ.
ಗೊಂದಲದಲ್ಲಿ ಜಾಲಹಳ್ಳಿ ಫಲಿತಾಂಶ : ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಜಿಪಂ ಉಪ ಚುನಾವಣೆ ಮತ ಎಣಿಕೆ ಬುಧವಾರ ನಡೆಯಿತಾದರೂ ಮತಯಂತ್ರದ ದೋಷದಿಂದ ಫಲಿತಾಂಶ ಪ್ರಕಟವಾಗಿಲ್ಲ. ಈ ಸಂಬಂಧ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯ ಚುನಾವಣಾ ಆಯೋಗದ ಮೊರೆ ಹೋಗಲಾಗಿದೆ. ಆಯೋಗದ ನಿರ್ದೇಶನ ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಾಲಹಳ್ಳಿಯ ಒಟ್ಟು 31 ಮತಗಟ್ಟೆಗಳಲ್ಲಿ 30 ಮತ ಗಟ್ಟೆಗಳ ಮತ ಎಣಿಕೆ ಆಗಿದ್ದು, ಕೇವಲ ಮತಗಟ್ಟೆಸಂಖ್ಯೆ 122ರಲ್ಲಿ ಮತಯಂತ್ರ ದೋಷದಿಂದ ಮತ ಚಲಾವಣೆಯ ವಿವರಗಳು ಸಿಗುತ್ತಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.