ಇಂತಹ ವಿಚಾರಗಳನ್ನು ಇರಿಸಿಕೊಂಡು ರಾಜಕೀಯ ಮಾಡುವ ಅಗತ್ಯ ನನಗಿಲ್ಲ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಮೈಸೂರು [ಜೂ.18] : ಜಿಂದಾಲ್ ಕಂಪನಿಗೆ ಭೂಮಿ ಪರಭಾರೆ ಮಾಡುವ ವಿಚಾರದಲ್ಲಿ ರಾಜಕೀಯ ಮಾಡುವ ಅಗತ್ಯ ನನಗಿಲ್ಲ. ನನಗೆ ನನ್ನ ರಾಜ್ಯದ ಹಿತವಷ್ಟೇ ಮುಖ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಜಿಂದಾಲ್ ಕಂಪನಿಗೆ ಭೂಮಿ ಪರಭಾರೆ ಮಾಡುವ ನಿರ್ಧಾರ ಖಂಡಿಸಿ ನಾನು ಧರಣಿ ಮಾಡುವ ವಿಚಾರ ಒಂದು ವಾರದ ಹಿಂದೆಯೇ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಗೊತ್ತಿತ್ತು. ಆಗಲೇ ಅವರು ಮಾತುಕತೆಗೆ ಕರೆಯಬಹುದಿತ್ತು. ಆದರೆ ನಾವು ಧರಣಿ ಮುಗಿಸಿ ಮೆರವಣಿಗೆ ಹೊರಡುವಾಗ ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ. ಜತೆಗೆ, ಯಡಿಯೂರಪ್ಪ ಸಹಕಾರ ನೀಡಲಿಲ್ಲ, ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಜಿಂದಾಲ್ ಕಂಪನಿಗೆ ಭೂಮಿ ಕೊಡುವ ವಿಷಯದಲ್ಲಿ ರಾಜಕೀಯ ಮಾಡುವ ಅಗತ್ಯ ನನಗಿಲ್ಲ ಎಂದು ಯಡಿಯೂರಪ್ಪ ಕಿಡಿಕಾರಿದರು. ಜಿಂದಾಲ್ಗೆ ಭೂಮಿ ಪರಭಾರೆ ಮಾಡುವ ಕುರಿತು ರಾಜ್ಯ ಸರ್ಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಕೈಗೊಳ್ಳುವುದೂ ಇಲ್ಲ ಎಂದರು.