ನಾವು ಏನು ಬೇಕಾದರೂ ಮಾಡಬಹುದು ಎಂದ ಬಿಎಸ್ ವೈ ಹಿಂದಿರುವ ಬಲ ಯಾವುದು?

Published : Sep 21, 2018, 08:59 AM IST
ನಾವು ಏನು ಬೇಕಾದರೂ ಮಾಡಬಹುದು ಎಂದ ಬಿಎಸ್ ವೈ ಹಿಂದಿರುವ ಬಲ ಯಾವುದು?

ಸಾರಾಂಶ

ಕರ್ನಾಟಕದಲ್ಲಿ ನೀವು ಅಧಿಕಾರ ನಡೆಸುತ್ತಿರಬಹುದು. ಆದರೆ, ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವಿದೆ. ಏನು ಬೇಕಾದರೂ ಮಾಡಬಹುದು ಎಂಬುದನ್ನು ಮರೆತಿರುವಂತಿದೆ ಎಂದು ಎಚ್.ಡಿ ಕುಮಾರಸ್ವಾಮಿ ಅವರಿಗೆ ಬಿ.ಎಸ್ ಯಡಿಯೂರಪ್ಪ ಹೇಳಿದರು.  

ಬೆಂಗಳೂರು :  ರಾಜ್ಯದಲ್ಲಿ ನೀವು ಅಧಿಕಾರದಲ್ಲಿದ್ದರೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದೆ ಎಂಬುದನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮರೆಯಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಪ್ರತಿಪಕ್ಷದ ನಾಯಕ ಬಿ.ಎಸ್‌.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ನೀವು ಅಧಿಕಾರ ನಡೆಸುತ್ತಿರಬಹುದು. ಆದರೆ, ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವಿದೆ. ಏನು ಬೇಕಾದರೂ ಮಾಡಬಹುದು ಎಂಬುದನ್ನು ಮರೆತಿರುವಂತಿದೆ ಎಂದು ಹೇಳಿದರು.

ನಾನು ನನ್ನ ಇತಿಮಿತಿ ಏನು ಎಂಬುದನ್ನು ಅರಿತುಕೊಂಡೇ ಮಾತನಾಡಿದ್ದೇನೆ. ಹದ್ದುಮೀರಿ ಮಾತನಾಡುತ್ತಿರುವುದು ನೀವು. ನಿಮ್ಮ ಈ ಧಮ್ಕಿಗೆ ನಾನು ಹೆದರುವುದಿಲ್ಲ, ಬಗ್ಗುವುದಿಲ್ಲ. ಅದೇನು ಮಾಡಿಕೊಳ್ಳುತ್ತೀರೊ ಮಾಡಿಕೊಳ್ಳಿ ಎಂದು ಸವಾಲನ್ನೂ ಎಸೆದರು.

ಮುಖ್ಯಮಂತ್ರಿ ಸ್ಥಾನವಾಗಲಿ ಅಥವಾ ಅಧಿಕಾರ ಯಾರಿಗೂ ಶಾಶ್ವತವಲ್ಲ. ಸೇಡಿನ ರಾಜಕಾರಣಕ್ಕೆ ನೀವು ಮುನ್ನುಡಿ ಬರೆದಿದ್ದೀರಿ. ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿದರೆ ನಾನು ಸುಮ್ಮನೆ ಕೈ ಕಟ್ಟಿಕೂರುವುದಿಲ್ಲ. ನನಗೂ ರಾಜಕೀಯ ಮಾಡುವುದು ಗೊತ್ತು. ನೀವು ಏನೇ ಮಾಡಿದರೂ ಅದಕ್ಕೆ ಪ್ರತಿಯಾಗಿ ನಮಗೂ ಏನು ಮಾಡಬೇಕೆಂಬುದು ಗೊತ್ತಿದೆ. ನಾನು ಅಧಿಕಾರದಲ್ಲಿದ್ದ ವೇಳೆ ಎಂದಿಗೂ ನಾನು ಸೇಡಿನ ರಾಜಕಾರಣ ಮಾಡಲಿಲ್ಲ. ಕುಮಾರಸ್ವಾಮಿ ಅಧಿಕಾರ ವಹಿಸಿಕೊಂಡ ದಿನದಿಂದಲೂ ಇದನ್ನೇ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.

ಶಿವರಾಮ ಕಾರಂತ ಬಡಾವಣೆಯಲ್ಲಿ ನಾನು ಕಾನೂನು ಬಾಹಿರವಾಗಿ ಯಾವುದೇ ರೀತಿ ಕ್ರಮ ಕೈಗೊಂಡಿದ್ದರೆ ತನಿಖಾ ಸಂಸ್ಥೆಗಳು ನಿಮ್ಮ ಕೈಯಲ್ಲೇ ಇವೆ. ತನಿಖೆ ಮಾಡಿ ಕ್ರಮ ಕೈಗೊಳ್ಳಲು ಮೀನಾಮೇಷವೇಕೆ ಎಂದು ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದರು.

ಆ ಶಿವರಾಮ ಕಾರಂತ ಬಡಾವಣೆಯ ಡಿನೋಟಿಫಿಕೇಷನ್‌ ಬಗ್ಗೆ ತನಿಖೆ ನಡೆಸಿದರೆ ಸತ್ಯಾಂಶ ಜನರಿಗೆ ತಿಳಿಯಲಿದೆ. ಈ ಅಪ್ಪ-ಮಕ್ಕಳು ಮೈಸೂರಿನಲ್ಲಿ ಎಷ್ಟುಸೈಟು ಮಾಡಿಕೊಂಡಿದ್ದಾರೆ ಎಂಬುದು ನಮಗೂ ಗೊತ್ತಿದೆ. ಎಲ್ಲವನ್ನು ದಾಖಲೆಗಳ ಸಮೇತ ಬಿಡುಗಡೆ ಮಾಡುತ್ತೇವೆ. ನಿಮ್ಮ ಆಟ ಹೆಚ್ಚು ದಿನ ನಡೆಯುವುದಿಲ್ಲ ಎಂದು ಯಡಿಯೂರಪ್ಪ ಎಚ್ಚರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌