
ಬೆಂಗಳೂರು[ಅ.20]: ದಿನದಿಂದ ದಿನಕ್ಕೆ ಉಪ ಚುನಾವಣೆಯ ಕಾವು ಹೆಚ್ಚಾಗುತ್ತಿದೆ. ಈಗಾಗಲೇ ಚುನಾವಣಾ ಅಖಾಡಕ್ಕಿಳಿದಿರೋ ಕದನ ಕಲಿಗಳು, ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಶತಾಯಗತಾಯ ಗೆಲ್ಲಲೇಬೇಕು ಅಂತಾ ಪಣತೊಟ್ಟಿರುವ ಅಭ್ಯರ್ಥಿಗಳು, ಮತಬೇಟೆಗೆ ನಾನಾ ಕಸರತ್ತುಗಳನ್ನ ನಡೆಸುತ್ತಿದ್ದಾರೆ.
ಬಳ್ಳಾರಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಾಂಗ್ರೆಸ್ ರೋಡ್ ಶೋನಲ್ಲಿ ಪಕ್ಷದ ಅಭ್ಯರ್ಥಿ ಉಗ್ರಪ್ಪ ಪರ ಶಾಸಕ ನಾಗೇಂದ್ರ, ಐವಾನ್ ಡಿಸೋಜ ಸೇರಿ ಜಿಲ್ಲೆಯ ಎಲ್ಲ ಪದಾಧಿಕಾರಿಗಳು ಭಾಗವಹಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದರು. ಮತ್ತೊಂದೆಡೆ ಬಿಜೆಪಿ ಕೂಡ ಕೂಡ್ಲಿಗಿ, ಹಗರಿಬೊಮ್ಮನಹಳ್ಳಿಯಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿತು.
ಶಿವಮೊಗ್ಗದಲ್ಲಿ ಸಭೆ
ಶಿವಮೊಗ್ಗ ಲೋಕಸಭಾ ಉಪ ಚುನಾವಣೆ ಸಂಬಂಧ ಯಡಿಯೂರಪ್ಪ ನೇತೃತ್ವದಲ್ಲಿ, ಜಿಲ್ಲಾ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಿತು. ಸಭೆಯಲ್ಲಿ ಈಶ್ವರಪ್ಪ, ಹರತಾಳು ಹಾಲಪ್ಪ, ಕುಮಾರ ಬಂಗಾರಪ್ಪ ಸೇರಿ ಜಿಲ್ಲಾ ಮುಖಂಡರು ಪಾಲ್ಗೊಂಡು, ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಸಮಾಲೋಚನೆ ನಡೆಸಿದರು. ಬಳಿಕ ಮಾತನಾಡಿದ ಕುಮಾರ ಬಂಗಾರಪ್ಪ, ಜೆಡಿಎಸ್ ಅಭ್ಯರ್ಥಿ ಹಾಗೂ ಸಹೋದರ ಮಧು ಬಂಗಾರಪ್ಪ ವಿರುದ್ಧ ವಾಗ್ದಾಳಿ ನಡೆಸಿದರು.
ಮಂಡ್ಯದಲ್ಲಿ ಅಶೋಕ್ ಪ್ರಚಾರ
ಇತ್ತ, ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಪರ ಆರ್. ಅಶೋಕ್ ಪ್ರಚಾರಕ್ಕೆ ಅಧಿಕೃತ ಚಾಲನೆ ಕೊಟ್ಟರೆ ಜೆಡಿಎಸ್ ಅಭ್ಯರ್ಥಿ ಶಿವರಾಮೇಗೌಡ ಪ್ರಚಾರಕ್ಕೆ ಇನ್ನೂ ಎಂಟ್ರಿ ಕೊಟ್ಟಿಲ್ಲ. ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಅನಿತಾ ಕುಮಾರಸ್ವಾಮಿ, ಜಿಲ್ಲಾ ಜೆಡಿಎಸ್ ಮುಖಂಡರ ಸಭೆ ನಡೆಸಿ ಚುನಾವಣಾ ತಯಾರಿ ಹಾಗೂ ಪಕ್ಷ ಸಂಘಟನೆ ಬಗ್ಗೆ ಚರ್ಚಿಸಿದರು. ಅತ್ತ, ಜಮಖಂಡಿ ಕಾಂಗ್ರೆಸ್ ಅಭ್ಯರ್ಥಿ ಆನಂದ ನ್ಯಾಮಗೌಡ ಅಬ್ಬರದ ಪ್ರಚಾರ ನಡೆಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.