
ನವದೆಹಲಿ(ಜು.13): ಆನ್ಲೈನ್ ಅಂಕಿ ಅಂಶಗಳ ಮೇಲುಸ್ತುವಾರಿಗೆ ಸಾಮಾಜಿಕ ಮಾಧ್ಯಮ ಕೇಂದ್ರವನ್ನು ಸ್ಥಾಪಿಸುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಜನರನ್ನು ಸದಾ ಕಣ್ಗಾವಲಿನಲ್ಲಿ ಇಡಬೇಕಾದ ಪರಿಸ್ಥಿತಿಯನ್ನು ನಿರ್ಮಾಣ ಮಾಡಬೇಡಿ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದತ್ತ ಚಾಟಿ ಬೀಸಿದೆ. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು ನ್ಯಾಯಮೂರ್ತಿಗಳಾದ ಎ.ಎಂ ಖನ್ವಿಲ್ಕರ್ ಮತ್ತು ಡಿ ವೈ ಚಂದ್ರಾಚೂಡ್ ಅವರನ್ನೊಳಗೊಂಡ ನ್ಯಾಯಪೀಠ, ಕೇಂದ್ರ ಸರ್ಕಾರಕ್ಕೆ ಈ ಸಂಬಂಧ ನೊಟೀಸ್ ಕಳುಹಿಸಿ ಎರಡು ವಾರಗಳೊಳಗೆ ಉತ್ತರಿಸುವಂತೆ ಹೇಳಿದೆ.
ಸಾಮಾಜಿಕ ಮಾಧ್ಯಮ ಕೇಂದ್ರವನ್ನು ಸ್ಥಾಪಿಸುವ ಕೇಂದ್ರ ಸರ್ಕಾರದ ನಿರ್ಧಾರ ವಿರೋಧಿಸಿ ತೃಣಮೂಲ ಕಾಂಗ್ರೆಸ್ ಶಾಸಕ ಮಹುವಾ ಮೊಯ್ಟ್ರಾ ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯದ ವಿಭಾಗೀಯ ಪೀಠ ಈ ಮೇಲಿನಂತೆ ಅಭಿಪ್ರಾಯಪಟ್ಟಿದೆ. ಕೇಂದ್ರ ಸರ್ಕಾರ ಜನರ ವಾಟ್ಸಾಪ್ ಮೆಸೇಜ್ಗಳನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ಸಾಮಾಜಿಕ ಜಾಲತಾಣ ಕೇಂದ್ರವನ್ನು ಸ್ಥಾಪಿಸುವ ಕೇಂದ್ರ ಸರ್ಕಾರದ ಕ್ರಮ ಸದಾ ಕಣ್ಗಾವಲಿನ ಪರಿಸ್ಥಿತಿಯನ್ನು ನಿರ್ಮಾಣ ಮಾಡಿದಂತಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮಗಳ ವಿಷಯಗಳನ್ನು ಸಂಗ್ರಹಿಸಿ ವಿಶ್ಲೇಷಿಸುವ ಸೋಷಿಯಲ್ ಮೀಡಿಯಾ ಕಮ್ಯೂನಿಕೇಷನ್ ಹಬ್ನ್ನು ಸ್ಥಾಪಿಸುವ ಕೇಂದ್ರ ಸರ್ಕಾರದ ನಿರ್ಣಯಕ್ಕೆ ತಡೆ ತರಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಜೂನ್ 18ರಂದು ನಿರಾಕರಿಸಿತ್ತು.
ದೇಶದ ಜನರ ಟ್ವಿಟ್ಟರ್, ಇನ್ಸ್ಟಾಗ್ರಾಮ್, ಫೇಸ್ಬುಕ್ ಮತ್ತು ಇತರ ಇಮೇಲ್ಗಳ ಖಾತೆಗಳನ್ನು ಪತ್ತೆ ಹಚ್ಚಿ ಅವುಗಳಲ್ಲಿನ ವಿಷಯಗಳನ್ನು ಉಸ್ತುವಾರಿ ಮಾಡಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ದೂರಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.