ಸುಬ್ರಹ್ಮಣ್ಯ ಗಲಾಟೆ: ಚೈತ್ರಾ ಕುಂದಾಪುರ ಅರೆಸ್ಟ್

Published : Oct 26, 2018, 08:50 AM IST
ಸುಬ್ರಹ್ಮಣ್ಯ ಗಲಾಟೆ: ಚೈತ್ರಾ ಕುಂದಾಪುರ ಅರೆಸ್ಟ್

ಸಾರಾಂಶ

ಚೈತ್ರಾ ಮತ್ತು ಆಕೆಯ ಬೆಂಬಲಿಗರನ್ನು ಸುಬ್ರಹ್ಮಣ್ಯ ಠಾಣೆ ಪೊಲೀಸರು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿದ್ದರು. ವಿಚಾರಣೆ ನಡೆಸಿದ ಸುಳ್ಯ ನ್ಯಾಯಾಲಯ ಚೈತ್ರಾ ಸೇರಿ 7 ಮಂದಿಗೆ 10 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. 

ಸುಬ್ರಹ್ಮಣ್ಯ :  ಹಿಂದೂಪರ ವಾಗ್ಮಿ ಚೈತ್ರಾ ಕುಂದಾಪುರ ಮತ್ತವರ ಬೆಂಬಲಿಗರು ಬುಧವಾರ ರಾತ್ರಿ ಸುಳ್ಯದ ಹಿಂದೂಪರ ಸಂಘಟನೆ ಕಾರ್ಯಕರ್ತರೊಬ್ಬರ ಮೇಲೆ ನಡೆಸಿದ ಹಲ್ಲೆ ಖಂಡಿಸಿ ಮತ್ತು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಧಕ್ಕೆ ತರುವ ರೀತಿಯಲ್ಲಿ ನಡೆದುಕೊಂಡಿದ್ದಾರೆಂದು ಆರೋಪಿಸಿ ಕುಕ್ಕೆ ಸುಬ್ರಹ್ಮಣ್ಯ ಪೇಟೆ ವರ್ತಕರು ಗುರುವಾರ ಸಂಪೂರ್ಣ ಬಂದ್‌ ನಡೆಸಿದರು. ಹಲ್ಲೆ ಘಟನೆಗೆ ಸಂಬಂಧಿಸಿ ಸ್ಥಳೀಯ ನ್ಯಾಯಾಲಯವು ಚೈತ್ರಾ ಕುಂದಾಪುರ ಸೇರಿದಂತೆ 7 ಮಂದಿಗೆ 10 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಬೆಳಗ್ಗಿನಿಂದ ಸಂಜೆಯ ತನಕ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅಂಗಡಿ ಮುಂಗಟ್ಟುಗಳೆಲ್ಲಾ ಬಾಗಿಲು ಮುಚ್ಚಿದ್ದು, ಬಂದ್‌ ಸಂಪೂರ್ಣ ಶಾಂತಿಯುತವಾಗಿತ್ತು. ಕ್ಷೇತ್ರಕ್ಕೆ ಬರುವ ಭಕ್ತರಿಗೆ ಯಾವುದೇ ತೊಂದರೆ ಆಗಲಿಲ್ಲ. ದೇವಸ್ಥಾನ ವತಿಯಿಂದ ಭಕ್ತರಿಗೆ ಎಂದಿನಂತೆ ಉಪಾಹಾರ, ಭೋಜನ ವ್ಯವಸ್ಥೆ ಮಾಡಲಾಗಿತ್ತು.

ಚೈತ್ರಾ ಸೇರಿ 7 ಮಂದಿ ಬಂಧನ: ಕುಕ್ಕೆ ದೇವಸ್ಥಾನದಲ್ಲಿ ನಡೆಯುವ ಸರ್ಪ ಸಂಸ್ಕಾರ ವಿಚಾರವಾಗಿ ಚೈತ್ರಾ ಇತ್ತೀಚೆಗೆ ನೀಡಿದ್ದ ಹೇಳಿಕೆ ವಿಚಾರವಾಗಿ ಸ್ಥಳೀಯ ಹಿಂದೂ ಸಂಘಟನೆ ವಿರೋಧ ವ್ಯಕ್ತಪಡಿಸಿತ್ತು. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲೂ ಭಾರಿ ಚರ್ಚೆ ನಡೆಯುತ್ತಿತ್ತು. ಇದು ತಾರಕಕ್ಕೇರಿ ಆಕ್ರೋಶಗೊಂಡ ಚೈತ್ರಾ ಕುಂದಾಪುರ ಬುಧವಾರ ಸಂಜೆ ತನ್ನ ಬೆಂಬಲಿಗರ ಜೊತೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ಹಿಂದೂ ಜಾಗರಣ ವೇದಿಕೆಯ ತಾಲೂಕು ಕಾರ್ಯದರ್ಶಿ ಗುರುಪ್ರಸಾದ್‌ ಪಂಜ ಹಾಗೂ ಕೆಲವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಮತ್ತು ಆಕೆಯ ಬೆಂಬಲಿಗರನ್ನು ಸುಬ್ರಹ್ಮಣ್ಯ ಠಾಣೆ ಪೊಲೀಸರು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿದ್ದರು. ವಿಚಾರಣೆ ನಡೆಸಿದ ಸುಳ್ಯ ನ್ಯಾಯಾಲಯ ಚೈತ್ರಾ ಸೇರಿ 7 ಮಂದಿಗೆ 10 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಘಟನೆಗೆ ಸಂಬಂಧಿಸಿ ಗುರುಪ್ರಸಾದ್‌ ಪಂಜ ವಿರುದ್ಧ ಕಳ್ಳತನ ಹಾಗೂ ಮಾನಭಂಗ ಯತ್ನ ಸಂಬಂಧ ಪ್ರತಿದೂರು ದಾಖಲಾಗಿದೆ ಎಂದು ತಿಳಿದುಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರಧಾನಿಗೆ ಪತ್ರ ಬರೆಯುವುದರಲ್ಲಿ ಸಿದ್ದರಾಮಯ್ಯ, ಡಿಕೆಶಿ ನಿಸ್ಸೀಮರು: ಬಿ.ವೈ.ವಿಜಯೇಂದ್ರ
ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?