ಬೆಂಗಳೂರು (ಜೂ.02): ಕನ್ನಡದ ಮೇರು ನಟ ಡಾ.ರಾಜ್ಕುಮಾರ್ ಪತ್ನಿ ಪಾರ್ವತಮ್ಮ ರಾಜ್ಕುಮಾರ್ ಅವರ ಅಂತಿಮ ಯಾತ್ರೆ ಸಂದರ್ಭದಲ್ಲಿ ಪಾರ್ಥಿವ ಶರೀರಕ್ಕೆ ರಾಷ್ಟ್ರಧ್ವಜ ಹೊದಿಸಿದ್ದ ಪ್ರಕರಣ ಇದೀಗ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಭಾರತದ ಧ್ವಜ ಕಾಯ್ದೆ ೫ರ ಅಡಿಯಲ್ಲಿ ರಾಜ್ಯ ಪೊಲೀಸರು, ಮಿಲಿಟರಿ, ಕೇಂದ್ರ ಪ್ಯಾರಾ ಮಿಲಿಟರಿ ಪಡೆಗಳ ಸಿಬ್ಬಂದಿಗಳ ಅಂತ್ಯಕ್ರಿಯೆ ಸಂದರ್ಭದಲ್ಲಿ ಮಾತ್ರ ಧ್ವಜ ಬಳಸಬಹುದು. ಯಾವುದೇ ಖಾಸಗಿ ವ್ಯಕ್ತಿಗಳ ಅಂತ್ಯಕ್ರಿಯೆ ಸಂದರ್ಭದಲ್ಲಿ ರಾಷ್ಟ್ರ ಧ್ವಜ ಬಳಸುವಂತಿಲ್ಲ. ಆದರೆ ಪಾರ್ವತಮ್ಮನವರ ಪಾರ್ಥಿವ ಶರೀರದ ಮೇಲೆ ರಾಷ್ಟ್ರ ಧ್ವಜ ಹೊದಿಸುವ ಮೂಲಕ ಕಾನೂನನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ವಕೀಲ ಜಿ.ಜೆ.ಚೇತನ್ ಎಂಬುವರು ನಗರದ ೨೪ನೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ.
ಅಲ್ಲದೆ, ಕಾನೂನು ಉಲ್ಲಂಘನೆಗೆ ಕಾರಣವಾಗಿರುವ ಸರ್ಕಾರ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಕಾರ್ಯದರ್ಶಿ ಹಾಗೂ ನಗರ ಪೊಲೀಸ್ ಆಯುಕ್ತರ ವಿರುದ್ಧ ಕ್ರಮ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಯಾವ ಕಾರಣಕ್ಕಾಗಿ ಧ್ವಜ ಹೊದಿಸಲಾಗಿತ್ತು ಎಂಬ ಅಂಶವನ್ನು ನ್ಯಾಯಾಲಯಕ್ಕೆ ಹಾಜರಾಗಿ ಉತ್ತರಿಸಬೇಕು. ಅಲ್ಲದೆ, ಕಾನೂನಿನ ಪ್ರಕಾರ ಶಿಕ್ಷೆ ಹಾಗು ದಂಡ ವಿಧಿಸಬೇಕು ಎಂದು ದೂರಿನಲ್ಲಿ ಕೋರಿದ್ದಾರೆ.