ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆಯಲ್ಲಿ ಯಾವ ಅಂಶಗಳಿಗೆ ಒತ್ತು..?

By Suvarna Web DeskFirst Published Mar 29, 2018, 11:54 AM IST
Highlights

ಮುಂದಿನ ಚುನಾವಣೆಯಲ್ಲಿ ಮತದಾರ ರನ್ನು ಸೆಳೆಯಲು ಕಾಂಗ್ರೆಸ್ ಪಕ್ಷ ರಾಜ್ಯ ಮಟ್ಟ, ಪ್ರಾದೇಶಿಕವಾರು ಹಾಗೂ ಜಿಲ್ಲಾ ಮಟ್ಟದಲ್ಲಿ ಮೂರು ಪ್ರತ್ಯೇಕ ಪ್ರಣಾಳಿಕೆ ಸಿದ್ಧಪಡಿಸುತ್ತಿದ್ದು, ಭಾನುವಾರದ ವೇಳೆಗೆ ಪ್ರಣಾಳಿಕೆಗೆ ಅಂತಿಮ ಸ್ವರೂಪ ದೊರೆಯಲಿದೆ.

ಬೆಂಗಳೂರು : ಮುಂದಿನ ಚುನಾವಣೆಯಲ್ಲಿ ಮತದಾರ ರನ್ನು ಸೆಳೆಯಲು ಕಾಂಗ್ರೆಸ್ ಪಕ್ಷ ರಾಜ್ಯ ಮಟ್ಟ, ಪ್ರಾದೇಶಿಕವಾರು ಹಾಗೂ ಜಿಲ್ಲಾ ಮಟ್ಟದಲ್ಲಿ ಮೂರು ಪ್ರತ್ಯೇಕ ಪ್ರಣಾಳಿಕೆ ಸಿದ್ಧಪಡಿಸುತ್ತಿದ್ದು, ಭಾನುವಾರದ ವೇಳೆಗೆ ಪ್ರಣಾಳಿಕೆಗೆ ಅಂತಿಮ ಸ್ವರೂಪ ದೊರೆಯಲಿದೆ.

ಬುಧವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪ್ರಣಾಳಿಕೆ ಸಮಿತಿ ಸಭೆಯಲ್ಲಿ ಪ್ರಣಾಳಿಕೆಯ ಕರಡು ಪ್ರತಿಯನ್ನು ಪ್ರಣಾಳಿಕೆ ರಚನಾ ಸಮಿತಿ ಅಧ್ಯಕ್ಷ ಎಂ. ವೀರಪ್ಪ ಮೊಯ್ಲಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಿದರು.

 ಪ್ರಣಾಳಿಕೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪ್ರಣಾಳಿಕೆ ಸಮಿತಿ ಸದಸ್ಯರು ಸಮಗ್ರವಾಗಿ ಪರಿಶೀಲನೆ ನಡೆಸಿ ಚರ್ಚೆ ಮಾಡಿದರು. ಆರೋಗ್ಯ, ಕೃಷಿ, ಶಿಕ್ಷಣ, ನೀರಾವರಿ, ಮಹಿಳಾ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆವಾರು ಅಂಶಗಳನ್ನು ಪ್ರಣಾಳಿಕೆಯಲ್ಲಿ ಸೇರಿಸಲಾಗಿದೆ.

ಕಳೆದ ಬಾರಿಯ ಪ್ರಣಾಳಿಕೆಗಿಂತ ಹೆಚ್ಚು ಅಂಶಗಳನ್ನು ಸೇರಿಸಿದ್ದು, ಈಡೇರಿಸಲು ಯೋಗ್ಯವಾದ ಭರವಸೆಗಳನ್ನು ಮಾತ್ರ ಪ್ರಣಾಳಿಕೆಯಲ್ಲಿ ಸೇರ್ಪಡೆ ಮಾಡಲು ನಿರ್ಧರಿಸಲಾಗಿದೆ. ಕರಡು ಸಮಿತಿ ಬಗ್ಗೆ ಭಾನುವಾರದವರೆಗೆ ಸಲಹೆಗಳಿಗೆ ಅವಕಾಶ ನೀಡಲಾಗಿದ್ದು, ಭಾನುವಾರ ಪ್ರಣಾಳಿಕೆ ಅಂತಿಮಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ರಾಹುಲ್‌ರಿಂದ ರಾಜ್ಯ ಪ್ರಣಾಳಿಕೆ ಬಿಡುಗಡೆ: ಸಭೆ ಬಳಿಕ ಮಾತನಾಡಿದ ಎಂ. ವೀರಪ್ಪ ಮೊಯ್ಲಿ ಅವರು ಪ್ರಾದೇಶಿಕ, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಮೂರು ವಿಭಾಗಗಳಾಗಿ ಪ್ರಣಾಳಿಕೆಯನ್ನು ಪ್ರತ್ಯೇಕವಾಗಿ ಸಿದ್ಧಪಡಿಸಲಾಗುತ್ತಿದೆ.

ರಾಜ್ಯ ಮಟ್ಟದ ಪ್ರಣಾಳಿಕೆಯನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಿದ್ದಾರೆ. ಕಳೆದ ಬಾರಿ 165 ಭರವಸೆಗಳನ್ನು ನೀಡಲಾಗಿತ್ತು. ಈ ಬಾರಿ ಇನ್ನೂ ಹೆಚ್ಚು ಅಂಶಗಳನ್ನು ಸೇರಿಸಲಾಗಿದೆ. ಪ್ರಣಾಳಿಕೆಯಲ್ಲಿ ನವ ಕರ್ನಾಟಕ ನಿರ್ಮಾಣದ ಅಭಿಯಾನಕ್ಕೆ ಒತ್ತು ನೀಡಲಾಗಿದೆ ಎಂದು ಹೇಳಿದರು.

click me!