
ಬೆಂಗಳೂರು : ಜಿಂದಾಲ್ ಕಂಪನಿಗೆ ಭೂಮಿ ಪರಭಾರೆ ಕುರಿತು ತೀವ್ರ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ವಿಚಾರವನ್ನು ಸಂಪುಟ ಉಪ ಸಮಿತಿಗೆ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದೇ ನಾನು. ಹೀಗಂತ ಹೇಳುವ ಮೂಲಕ ಜಿಂದಾಲ್ ವಿವಾದ ಕುರಿತ ಮೌನವನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮುರಿದಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಭಾಗವಾಗಿರುವ ಕಾರಣ ಜಿಂದಾಲ್ ಬಗ್ಗೆ ಮಾತನಾಡಲು ಹೋಗಿಲ್ಲ. ಭೂಮಿ ನೀಡುವ ಸಂಬಂಧ ಸಚಿವ ಸಂಪುಟ ತೆಗೆದುಕೊಂಡ ನಿರ್ಧಾರದ ಬಗ್ಗೆ ಟೀಕೆ-ಟಿಪ್ಪಣಿಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸಂಪುಟ ಉಪ ಸಮಿತಿ ರಚಿಸುವಂತೆ ಸರ್ಕಾರಕ್ಕೆ ನಾನೇ ಸಲಹೆ ನೀಡಿದ್ದೆ. ಸಂಪುಟ ಉಪಸಮಿತಿ ಎಲ್ಲ ವಿಷಯಗಳನ್ನು ಕೂಲಂಕಷವಾಗಿ ಮತ್ತೊಮ್ಮೆ ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳುತ್ತದೆ. ಹಾಗಾಗಿ ನಾನು ಮಾತನಾಡುವುದು ಏನಿದೆ ಎಂದು ಪ್ರಶ್ನಿಸಿದರು.
ಜಿಂದಾಲ್ ಬಗ್ಗೆ ನಾನು ಮಾತನಾಡಲು ಏನಿದೆ ಎಂದು ಕೇಳಲು ನೀವು ಸಮನ್ವಯ ಸಮಿತಿ ಅಧ್ಯಕ್ಷರಲ್ಲವೇ ಎಂಬ ಪ್ರಶ್ನೆಗೆ, ಸಮನ್ವಯ ಸಮಿತಿಗೂ ಸರ್ಕಾರಕ್ಕೆ ಸಂಬಂಧವಿಲ್ಲ. ಜಿಂದಾಲ್ಗೆ ಭೂಮಿ ಪರಭಾರೆ ನಿರ್ಧಾರ ತೆಗೆದುಕೊಂಡಿದ್ದು ಸಚಿವ ಸಂಪುಟ. ನಾನು ಸರ್ಕಾರದಲ್ಲಿ ಇಲ್ಲ ಎಂಬ ಕಾರಣದಿಂದ ಮಾತನಾಡಿಲ್ಲ ಎಂದು ಹೇಳಿದರು.
ರಾಹುಲ್ ಗಾಂಧಿ ಭೇಟಿ:
ವೈಯಕ್ತಿಕ ಕೆಲಸ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ದೆಹಲಿಗೆ ಬಂದಿದ್ದೇನೆ. ಸಾಧ್ಯವಾದರೆ ಮಂಗಳವಾರ ಭೇಟಿ ಮಾಡಿ ಮಾತನಾಡುತ್ತೇನೆ ಎಂದ ಅವರು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೇವಲ ಊಹಾಪೋಹ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಮನ್ಸೂರ್ ಖಾನ್ ಗೊತ್ತಿಲ್ಲ:
ಐಎಂಎ ಜ್ಯೂವೆಲರ್ಸ್ ಮಾಲಿಕ ಮನ್ಸೂರ್ ಖಾನ್ ಯಾರೆಂಬುದು ನನಗೆ ಗೊತ್ತಿಲ್ಲ. ಆತನ ಜೊತೆಗೆ ನಾನಿರುವ ಫೋಟೋ ಪ್ರಕಟವಾಗಿದೆ. ಯಾವುದೋ ಕಾರ್ಯಕ್ರಮಕ್ಕೆ ರೋಷನ್ ಬೇಗ್ ನನ್ನನ್ನು ಕರೆದಿದ್ದರು. ಆ ಕಾರ್ಯಕ್ರಮಕ್ಕೆ ಆತನನ್ನೂ ಕರೆದಿದ್ದರು. ವೇದಿಕೆ ಮೇಲಿದ್ದ ಆತ ನನ್ನ ಜೊತೆ ಫೋಟೋ ತೆಗೆಸಿಕೊಂಡಿದ್ದ. ವಂಚನೆ ಪ್ರಕರಣದ ತನಿಖೆಯನ್ನು ಎಸ್ಐಟಿ ಮಾಡುತ್ತಿದೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.