
ಶ್ರೀನಗರ (ಸೆ.21): ಕಣಿವೆ ರಾಜ್ಯ ಕಾಶ್ಮೀರದಲ್ಲಿ ಉಗ್ರರ ಹಾವಳಿ ಮಿತಿ ಮೀರಿರುವಂತೆಯೇ ಇತ್ತ ಉಗ್ರರ ಬೆದರಿಕೆಗೆ ಆತಂಕ ವ್ಯಕ್ತಪಡಿಸಿರುವ 7 ಪೊಲೀಸ್ ಅಧಿಕಾರಿಗಳು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಇಂದು ಮುಂಜಾನೆ ಮೂವರು ಎಸ್ಪಿಒ ಅಧಿಕಾರಿಗಳು ಸೇರಿದಂತೆ ಒಟ್ಟು 4 ಪೊಲೀಸ್ ಸಿಬ್ಬಂದಿ ಅಹಪರಣ ಮಾಡಿದ್ದ ಉಗ್ರರು, ಈ ಪೈಕಿ ಮೂವರನ್ನು ಕೊಂದು ಹಾಕಿದ್ದರು. ಓರ್ವ ಅಧಿಕಾರಿ ಸ್ಥಳೀಯರ ನೆರವಿನಿಂದ ತಪ್ಪಿಸಿಕೊಂಡಿದ್ದ. ಮೂವರು ಅಧಿಕಾರಿಗಳನ್ನು ಕೊಂದ ಬಳಿಕ ವಿಡಿಯೋ ಸಂದೇಶ ರವಾನಿಸಿದ್ದ ಉಗ್ರರು ಇನ್ನು ಐದು ದಿನಗಳಲ್ಲಿ ಕೆಲಸಕ್ಕೆ ರಾಜಿನಾಮೆ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು.
ಇದರ ಬೆನ್ನಲ್ಲೇ ಉಗ್ರ ಹಾವಳಿಗೆ ಬೆದರಿರುವ ಪೊಲೀಸ್ ಅಧಿಕಾರಿಗಳು ರಾಜಿನಾಮೆಗೆ ಮುಂದಾಗಿದ್ದಾರೆ. ಶೋಪಿಯಾನ್ ನಲ್ಲಿ ಇಂದು ಐದು ಮಂದಿ ಪೊಲೀಸರು ರಾಜಿನಾಮೆ ಘೋಷಣೆ ಮಾಡಿದ್ದು, ಈ ಪೈಕಿ ಮೂವರು ಪೊಲೀಸ್ ಪೇದೆಗಳು ಮತ್ತು ಇಬ್ಬರು ಎಸ್ಪಿಒ ಅಧಿಕಾರಿಗಳು ರಾಜಿನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಈ ಪೈಕಿ ಮೂವರು ಅಧಿಕಾರಿಗಳು ವಾಟ್ಸಪ್ನಲ್ಲಿ ರಾಜಿನಾಮೆ ಘೋಷಣೆ ಮಾಡಿದ್ದು, ಅಲ್ಲದೆ ತಮ್ಮ ಆತಂಕ ಮತ್ತು ಕಳವಳ ವ್ಯಕ್ತಪಡಿಸಿದ್ದರು. ಕಾಶ್ಮೀರದಲ್ಲಿ ನಡೆಯುತ್ತಿರುವ ಉಗ್ರ ನಿಗ್ರಹ ಕಾರ್ಯಾಚರಣೆ ವಿರುದ್ಧ ಕಿಡಿಕಾರಿದ್ದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ, ಸೇನೆ ಮತ್ತು ಪೊಲೀಸ್ ಕೆಲಸವೂ ಸೇರಿದಂತೆ ಕಾಶ್ಮೀರಿಗಳು ಸರ್ಕಾರಿ ಕೆಲಸ ತೊರೆಯದಿದ್ದರೆ ಕೊಂದು ಹಾಕುವುದಾಗಿ ಬೆದರಿಕೆ ಹಾಕಿತ್ತು.
ಇದರ ಬೆನ್ನಲ್ಲೇ ಇಂದು ನಾಲ್ಕು ಮಂದಿಯನ್ನು ಉಗ್ರರು ಅಪಹರಣ ಮಾಡಿ ಮೂವರನ್ನು ಕೊಂದು ಹಾಕಿದ್ದರು. ಈ ಬೆಳವಣಿಗೆಯಿಂದ ಕಾಶ್ಮೀರದಲ್ಲಿ ಭಯಭೀತ ವಾತಾವರಣ ಸೃಷ್ಟಿಯಾಗಿದ್ದು, ಕಾಶ್ಮೀರಿ ಪೊಲೀಸರು ಇದೀಗ ತೀವ್ರ ಆತಂಕದಲ್ಲಿ ಕೆಲಸ ನಿರ್ವಹಣೆ ಮಾಡುವಂತಾಗಿದೆ. ಪ್ರಸ್ತುತ ಜಮ್ಮು ಮತ್ತು ಕಾಶ್ಮೀರದಲ್ಲಿ 36 ಸಾವಿರ ಎಸ್ಪಿಒ ಅಧಿಕಾರಿಗಳು ಕಾರ್ಯ ನಿರ್ವಹಿಸುತ್ತಿದ್ದು, ಒಟ್ಟು 22 ಜಿಲ್ಲೆಗಳಲ್ಲಿ ಕರ್ತವ್ಯ ನಿರತರಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.