ಮೈಸೂರು(ಅ.01): ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ 2016 ಕ್ಷಣಗಣನೆ ಆರಂಭವಾಗಿದೆ. ಇವತ್ತು ಬೆಳಗ್ಗೆ ಚಾಮುಂಡಿಬೆಟ್ಟದಲ್ಲಿ ನಾಡ ಅಧಿದೇವತೆಗೆ ಅಗ್ರಪೂಜೆ ಸಲ್ಲಿಸುವ ಮೂಲಕ ಈ ಬಾರಿಯ ದಸರೆಗೆ ಅಧಿಕೃತ ಚಾಲನೆ ಸಿಗಲಿದೆ. ಸಾಹಿತಿ ಚನ್ನವೀರ ಕಣವಿ ಈ ಬಾರಿಯ ನಾಡಹಬ್ಬ ಉದ್ಘಾಟಿಸಲಿದ್ದು, ಇದಕ್ಕಾಗಿ ಅರಮನೆ ನಗರಿ ಮೈಸೂರು ಸಕಲ ರೀತಿಯಲ್ಲೂ ಸಜ್ಜಾಗಿದೆ.
ನಾಡಹಬ್ಬ ದಸರಾ ಮಹೋತ್ಸವಕ್ಕೆ ಕ್ಷಣಗಣನೆ
ವಿಶ್ವವಿಖ್ಯಾತ ದಸರಾ ಹಬ್ಬಕ್ಕೆ ಇಂದು ಚಾಲನೆ ಸಿಗುತ್ತಿದೆ. ಬೆಳಗ್ಗೆ 11 ಗಂಟೆ 40 ನಿಮಿಷಕ್ಕೆ ಸಲ್ಲುವ ಶುಭ ಧನುರ್ ಲಗ್ನದಲ್ಲಿ ಹಿರಿಯ ಸಾಹಿತಿ ನಾಡೋಜ ಚೆನ್ನವೀರ ಕಣವಿ ನಾಡಹಬ್ಬಕ್ಕೆ ಚಾಲನೆ ನೀಡಲಿದ್ದಾರೆ. ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಹತ್ತು ದಿನಗಳ ಉತ್ಸವಕ್ಕೆ ಚಾಲನೆ ಸಿಗಲಿದೆ.. ಈ ವೇಳೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವ, ಶಾಸಕರು ಪಾಲ್ಗೊಳ್ಳಲಿದ್ದಾರೆ..
ಸಂಜೆ ಝಗಮಗಿಸುವ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುವ ಅರಮನೆ ಅಂಗಳದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ. ಇದೇ ವೇದಿಕೆಯಲ್ಲಿ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಸಮಾರಂಭ ಕೂಡ ನಡೆಯಲಿದೆ.
ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ಹಿನ್ನೆಲೆಯಲ್ಲಿ ಪೊಲೀಸ್ ಭದ್ರತೆ ಹೆಚ್ಚಾಗಿದೆ. 4214 ಮಂದಿ ಪೊಲೀಸರನ್ನು ಇಲ್ಲಿ ನಿಯೋಜನೆ ಮಾಡಲಾಗಿದೆ. ಆರ್ಎಎಫ್, ಕಮಾಂಡೋ, ಸಿಎಆರ್ ತುಕಡಿಗಳನ್ನೂ ನಿಯೋಜಿಸಲಾಗಿದೆ.