ತುಂಬಿತು ಭದ್ರಾ ಜಲಾಶಯ; ತೆರೆಯಿತು ಕ್ರೆಸ್ಟ್ ಗೇಟ್

Jul 24, 2018, 9:08 PM IST

ಶಿವಮೊಗ್ಗ ದಾವಣಗೆರೆ ಚಿಕ್ಕಮಗಳೂರು ಜಿಲ್ಲೆಗಳ ರೈತರ ಜೀವನಾಡಿಯಾಗಿರುವ ಭದ್ರಾ ಜಲಾಶಯ ಭರ್ತಿಯಾಗಿದ್ದು ಮಂಗಳವಾರ ಮಧ್ಯಾಹ್ನ ನಾಲೆಗಳಿಗೆ ನೀರು ಬಿಡಲಾಗಿದೆ .186 ಅಡಿ ಸಾಮರ್ಥ್ಯದ ಭದ್ರಾ ಜಲಾಶಯ 184 ಅಡಿ ತಲುಪಿದ್ದು ಜಲಾಶಯದ ಗೇಟ್ಗಳ ಮೂಲಕ 6500 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ .ಭದ್ರಾ ಜಲಾನಯನ ವ್ಯಾಪ್ತಿಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದ್ದು, ಹೆಚ್ಚುವರಿ ನೀರನ್ನು ನದಿಗೆ ಬಿಡಲಾಗಿದೆ.  

ಸಾಮಾನ್ಯವಾಗಿ ಮಳೆಗಾಲ ಮುಗಿಯುವ ವೇಳೆಗೆ ಭರ್ತಿಯಾಗುತ್ತಿದ್ದ ಜಲಾಶಯ ಕೆಲ ವರ್ಷಗಳಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಸಂಗ್ರಹವಾಗದೆ ರೈತರ ಬೆಳೆಗಳಿಗೆ ಹಾಗೂ ಕುಡಿಯುವ ನೀರಿಗೆ ಸಮಸ್ಯೆ ಎದುರಾಗಿದ್ದು ಈ ಬಾರಿ ಮುಂಗಾರು ಆರಂಭದಲ್ಲಿ ಉತ್ತಮ ಮಳೆಯಾಗಿರುವುದರಿಂದ ಭದ್ರಾ ಜಲಾಶಯ ಜುಲೈ ತಿಂಗಳಲ್ಲೇ ಭರ್ತಿಯಾಗಿದ್ದು ನಾಲ್ಕೈದು ಜಿಲ್ಲೆಗಳ ಜನರಲ್ಲಿ ಹರ್ಷ ಮೂಡಿಸಿದೆ.