
ಬೆಂಗಳೂರು: ನಿನ್ನ ಸಹವಾಸ ಮಾಡಿದ್ದ ಮಹಿಳೆಯರಿಗೆಲ್ಲಾ ಏಕೆ ಸಾವಿನ ಗತಿ ಬಂತು? ಸುಳ್ಯ ತಾಲೂಕಿನ ಸುನಂದಾ ಎಂಬಾಕೆಯ ಕೊಲೆ ಪ್ರಕರಣದ ಆರೋಪಿ ಸೈನೈಡ್ ಮೋಹನ್ಗೆ ರಾಜ್ಯ ಹೈಕೋರ್ಟ್ನ ನ್ಯಾಯಮೂರ್ತಿ ರವಿ ಮಳಿಮಠ ಹಾಗೂ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ಪೀಠ ಕೇಳಿದ ಪ್ರಶ್ನೆ ಇದು.
ತನ್ನ ಪರವಾಗಿ ತಾನೇ ವಾದ ಮಂಡಿಸಿದ ಮೋಹನ್, ಸುನಂದಾ ಕೀಟನಾಶಕ ಸೇವನೆಯಿಂದ ಸಾವನ್ನಪ್ಪಿದ್ದಳು. ಆದರೆ ಪೊಲೀಸರು ನನ್ನನ್ನು ಬಂಧಿಸಿದ ಬಳಿಕ ಸೈನೈಡ್ ಸೇವನೆಯಿಂದಲೇ ಆಕೆಯ ಸಾವು ಸಂಭವಿಸಿದೆ ಎಂಬುದಾಗಿ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ತಿರುಚಿದ್ದಾರೆ. ಆ ಮೂಲಕ ಅನಗತ್ಯವಾಗಿ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಿದ್ದಾರೆ ಎಂದು ದೂರಿದ.
ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ನೀನು (ಮೋಹನ್) ಪೊಲೀಸರ ತನಿಖೆಯನ್ನು ಅನುಮಾನಸುತ್ತಿದ್ದೀಯಲ್ಲವೇ?. ಹಾಗಿದ್ದರೆ, ನಿನ್ನ ಸಹವಾಸ ಮಾಡಿದ ಮಹಿಳೆಯರಿಗೆ ಏಕೆ ಸಾವಿನ ಗತಿ ಬಂದಿತು? ಆ ಕುರಿತು ನಮಗೆ ಅನುಮಾನ ಹುಟ್ಟಿದೆ. ಸುನಂದಾ ಶವದ ಮರಣೋತ್ತರ ಪರೀಕ್ಷೆ ನಡೆದ ಒಂದೂವರೆ ವರ್ಷದ ಬಳಿಕ ನಿನ್ನನ್ನು ಪೊಲೀಸರು ಬಂಧಿಸಿದ್ದರು.
ಶವಪರೀಕ್ಷೆ ನಡೆಸಿದ ವೈದ್ಯರಿಗೆ ಅಥವಾ ವಿಧಿ ವಿಜ್ಞಾನ ತಜ್ಞರಿಗಾಗಲೀ ನೀನೇ ಕೊಲೆ ಮಾಡಿದ್ದೀರಿ ಎಂದು ತಿಳಿದಿರಲಿಲ್ಲ.ಇಂತಹ ಪರಿಸ್ಥಿತಿಯಲ್ಲಿ ದುರುದ್ದೇಶಪೂರ್ವಕವಾಗಿ ನಿಮ್ಮನ್ನು ಸಿಲುಕಿಸಲು ಸೈನೈಡ್ ನೀಡಿ ಕೊಲೆ ಮಾಡಲಾಗಿದೆ ಎಂಬುದಾಗಿ ಮೊದಲೇ ವರದಿ ಸಿದ್ಧಪಡಿಸಲು ಪೊಲೀಸರಿಗೆ ಹೇಗೆ ಸಾಧ್ಯ? ಎಂದು ಪ್ರಶ್ನಿಸಿದರು. ನಂತರ ವಿಚಾರಣೆಯನ್ನು ಮಂಗಳವಾರಕ್ಕೆ (ನ.೧೪) ಮುಂದೂಡಿತು.
2008ರ ಫೆ.11ರಂದು ಮೈಸೂರಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಸೈನೈಡ್ ನೀಡಿ ಸುನಂದಾಳನ್ನು ಕೊಲೆ ಮಾಡಿದ ಆರೋಪದಲ್ಲಿ ಸೈನೈಡ್ ಮೋಹನ್ಗೆ 2013ರ ಡಿ.21ರಂದು ದಕ್ಷಿಣ ಕನ್ನಡ ಜಿಲ್ಲಾ 4ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ವಿಧಿಸಿದ ಗಲ್ಲುಶಿಕ್ಷೆ ವಿಧಿಸಿತ್ತು. ಗಲ್ಲು ಶಿಕ್ಷೆ ರದ್ದತಿಗೆ ಕೋರಿ ಸೈನೈಡ್ ಮೋಹನ್ ಹೈಕೋರ್ಟ್ ಮೊರೆ ಹೋಗಿದ್ದಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.