2005ರವರೆಗೆ ಮಾಡುತ್ತಿದ್ದ ಅಕ್ರಮ ಸಾಗುವಳಿ ಸಕ್ರಮ

By Suvarna Web DeskFirst Published Mar 28, 2018, 7:50 AM IST
Highlights

ರಾಜ್ಯದಲ್ಲಿ 2005 ಇಸವಿವರೆಗೆ ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿದ್ದ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಿ ಭೂ ಮಂಜೂರಾತಿ ಮಾಡುವ ಕುರಿತಂತೆ ರಾಜ್ಯ ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ.

ಬೆಂಗಳೂರು : ರಾಜ್ಯದಲ್ಲಿ 2005 ಇಸವಿವರೆಗೆ ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿದ್ದ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಿ ಭೂ ಮಂಜೂರಾತಿ ಮಾಡುವ ಕುರಿತಂತೆ ರಾಜ್ಯ ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ.

ಈ ಮೂಲಕ 1990ರಿಂದ 2005ರವರೆಗೆ ಸರ್ಕಾರಿ ಭೂಮಿಯನ್ನು ಅನಧಿಕೃತವಾಗಿ ಸಾಗುವಳಿ ಮಾಡುತ್ತಿದ್ದವರಿಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಕೆಗೆ ಒಂದು ವರ್ಷ ಕಾಲಾವಕಾಶ ನೀಡಿದೆ. 2005ರವರೆಗೆ ಸಾಗುವಳಿ ಮಾಡುವ ಭೂಮಿಯನ್ನು ಸಕ್ರಮಗೊಳಿಸುವ ಸಂಬಂಧ ವಿಧೇಯಕಕ್ಕೆ ಈಗಾಗಲೇ ವಿಧಾನಮಂಡಳದ ಉಭಯ ಸದನಗಳು ಒಪ್ಪಿಗೆ ನೀಡಿವೆ. ಸಚಿವ ಸಂಪುಟ ಸಹ ಒಪ್ಪಿಗೆ ನೀಡಿ ರಾಜ್ಯಪಾಲರ ಅಂಕಿತಕ್ಕೆ ಸಲ್ಲಿಸಲಾಗಿತ್ತು.

ಸರ್ಕಾರದ ಈ ನಿರ್ಧಾರಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದು, ಸಾಗುವಳಿ ಸಕ್ರಮದ ಬಗ್ಗೆ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದೆ. ಈ ಮೂಲಕ 14-04-1990ರಿಂದ 2005 ವರೆಗೆ ಸರ್ಕಾರಿ ಜಮೀನು ಸಾಗುವಳಿ ಮಾಡುತ್ತಿದ್ದವರು ಬಗರ್‌ಹುಕುಂ ಸಕ್ರಮಕ್ಕೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಒಂದು ವರ್ಷ ಕಾಲಾವಕಾಶ ನೀಡಿದ್ದು, ಇದರಿಂದ ಸಾವಿರಾರು ಭೂ ಹೀನರಿಗೆ ಭೂಮಿ ಮಂಜೂರಾಗುವ ನಿರೀಕ್ಷೆ ಇದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ ಮಾಹಿತಿ ನೀಡಿದರು.

click me!