
ಧಾರವಾಡ (ಅ. 24): ಡಿ.7 ರಿಂದ ಮೂರು ದಿನ ನಡೆಯಬೇಕಿದ್ದ ೮೪ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು 2019 ರ ಜನವರಿ 6,7 ಮತ್ತು 8 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ| ಮನು ಬಳಿಗಾರ್ ತಿಳಿಸಿದ್ದಾರೆ.
ಪರಿಷತ್ತಿನ ಕಾರ್ಯಕಾರಿ ಸಮಿತಿ ಡಿ.7 ರಿಂದ 9 ರವರೆಗೆ ಧಾರವಾಡದಲ್ಲಿ ಸಮ್ಮೇಳನ ನಡೆಸಲು ತೀರ್ಮಾನ ಕೈಗೊಂಡಿತ್ತು. ಆದರೆ, ಸಮ್ಮೇಳನದ ಸಿದ್ಧತೆಗೆ ಸಮಯಾವಕಾಶ ಕಡಿಮೆಯಾಗುತ್ತಿದೆ. ಆದ್ದರಿಂದ ಒಂದು ತಿಂಗಳ ಕಾಲ ಸಮ್ಮೇಳನ ಮುಂದೂಡಲು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಆರ್ .ವಿ.ದೇಶಪಾಂಡೆ ಅವರ ಅಧ್ಯಕ್ಷತೆಯಲ್ಲಿ ಅ.17 ರಂದು ನಡೆದ ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಯಿತು.
ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಜಯಮಾಲಾ, ಸಮ್ಮೇಳನದ ಸರ್ವಾಧ್ಯಕ್ಷ ಚಂದ್ರಶೇಖರ ಕಂಬಾರ ಅವರಿಗೂ ಈ ಕುರಿತು ಮಾಹಿತಿ ನೀಡಿ ಸಮ್ಮತಿ ಪಡೆಯಲಾಗಿದೆ ಎಂದು ಹೇಳಿದರು.
ಸಮ್ಮೇಳನಕ್ಕೆ ಸಿದ್ಧತೆ:
ಸಮ್ಮೇಳನಕ್ಕೆ ಒಂದು ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆ ಇದೆ. ಧಾರವಾಡ ಜಿಲ್ಲಾಧಿಕಾರಿ ಸ್ವಾಗತ ಸಮಿತಿ ಅಧ್ಯಕ್ಷರಾಗಿರುತ್ತಾರೆ. ವಿವಿಧ ಸಿದ್ಧತೆಗಳಿಗಾಗಿ 16 ಉಪ ಸಮಿತಿಗಳನ್ನು ರಚಿಸಲಾಗಿದೆ. ಕರ್ನಾಟಕ ಕಲಾ ಕಾಲೇಜು ಆವರಣದಲ್ಲಿ ಪ್ರಧಾನ ವೇದಿಕೆ ನಿರ್ಮಾಣಗೊಳ್ಳಲಿದ್ದು, ಏಕಕಾಲದಲ್ಲಿ ಸುಮಾರು 30 ಸಾವಿರ ಮಂದಿ ಕುಳಿತುಕೊಳ್ಳುವ ವ್ಯವಸ್ಥೆ ಮಾಡಲಾಗುವುದು.
ಎರಡನೇ ವೇದಿಕೆಯನ್ನು ಕಲಾಭವನದಲ್ಲಿ ಮತ್ತು ಮೂರನೇ ವೇದಿಕೆಯನ್ನು ವಿದ್ಯಾವರ್ಧಕ ಸಂಘದಲ್ಲಿ ನಿರ್ಮಿಸುವ ಉದ್ದೇಶವಿದೆ. ಈ ಕುರಿತು ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.