ಕೇರಳ, ಪಾಂಡಿಚೆರಿ ಚುನಾವಣಾ ವೆಚ್ಚಕ್ಕಾಗಿ ಭಾರಿ ಹಣ ನೀಡಿದ್ದ ಡಿಕೆಶಿ

Published : Sep 17, 2019, 07:41 AM IST
ಕೇರಳ, ಪಾಂಡಿಚೆರಿ ಚುನಾವಣಾ ವೆಚ್ಚಕ್ಕಾಗಿ ಭಾರಿ ಹಣ ನೀಡಿದ್ದ  ಡಿಕೆಶಿ

ಸಾರಾಂಶ

ಕೇರಳ ಹಾಗೂ ಪಾಂಡಿಚೆರಿ ಚುನಾವಣೆ ನಡೆದ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಕೊಟ್ಯಂತರ ರು ಹಣ ಚುನಾವಣಾ ವೆಚ್ಚಕ್ಕಾಗಿ ನೀಡಿದ್ದರು ಎಂದು ಜಾರಿ ನಿರ್ದೇಶನಾಲಯದ (ಇ.ಡಿ.) ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಬೆಂಗಳೂರು [ಸೆ.17]:  ಮೂರು ವರ್ಷಗಳ ಹಿಂದೆ ನಡೆದಿದ್ದ ಕೇರಳ ಮತ್ತು ಪಾಂಡಿಚೇರಿ ವಿಧಾನಸಭಾ ಚುನಾವಣಾ ವೆಚ್ಚಕ್ಕೆ ಪ್ರಭಾವಿ ಕಾಂಗ್ರೆಸ್‌ ನಾಯಕ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅವರು 47 ಕೋಟಿ ರು. ನೀಡಿದ್ದರು ಎಂಬ ಬಹುಮುಖ್ಯ ಸಂಗತಿ ಜಾರಿ ನಿರ್ದೇಶನಾಲಯದ (ಇ.ಡಿ.) ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಇದುವರೆಗೆ ತನಿಖೆಯಲ್ಲಿ ಆ ಎರಡು ರಾಜ್ಯಗಳ ಚುನಾವಣಾ ಇಡುಗಂಟನ್ನು ಯಾರಿಗೆ ಶಿವಕುಮಾರ್‌ ಕೊಟ್ಟಿದ್ದರು ಎಂಬುದು ಖಚಿತವಾಗಿಲ್ಲ. ಈ ಬಗ್ಗೆ ವಿಸ್ತೃತವಾದ ತನಿಖೆ ನಡೆಸುವ ಅಗತ್ಯವಿದೆ ಎಂದು ಇ.ಡಿ. ಅಧಿಕಾರಿಗಳು ಪ್ರತಿಪಾದಿಸಿದ್ದಾರೆ. ತನ್ಮೂಲಕ ಈಗಾಗಲೇ ಇ.ಡಿ. ಬಲೆಯಲ್ಲಿ ಸಿಲುಕಿರುವ ಮಾಜಿ ಸಚಿವರು ಮತ್ತಷ್ಟುಸಂಕಷ್ಟಕ್ಕೆ ಸಿಲುಕಿದಂತಾಗಿದೆ ಎನ್ನಲಾಗಿದೆ.

2016ರ ಮೇನಲ್ಲಿ ಕೇರಳ ಮತ್ತು ಪಾಂಡಿಚೇರಿ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆದಿತ್ತು. ಆ ವೇಳೆ ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದಲ್ಲಿ ಶಿವಕುಮಾರ್‌ ಸಚಿವರಾಗಿದ್ದರು. ಪ್ರಭಾವಿ ಇಂಧನ ಖಾತೆ ನಿರ್ವಹಿಸುತ್ತಿದ್ದ ಅವರು, ನೆರೆ ರಾಜ್ಯಗಳಲ್ಲಿ ಚುನಾವಣೆ ವೆಚ್ಚಕ್ಕೆ ಆರ್ಥಿಕ ನೆರವು ನೀಡಿರಬಹುದು ಎಂದು ಶಂಕಿಸಲಾಗಿದೆ.

2017ರಲ್ಲಿ ಡಿ.ಕೆ.ಶಿವಕುಮಾರ್‌ ಮತ್ತು ಅವರ ಆಪ್ತರ ಮನೆ ಮತ್ತು ವಿವಿಧ ಸಂಸ್ಥೆಗಳ ಕಚೇರಿ ಮನೆಗಳ ದಾಳಿ ನಡೆಸಲಾಯಿತು. ಆ ವೇಳೆ ಜಪ್ತಿಯಾದ ದಾಖಲೆಗಳನ್ನು ಪರಿಶೀಲಿಸಿದಾಗ ಶಿವಕುಮಾರ್‌ ಅವರು ಕೇರಳ ಮತ್ತು ಪಾಂಡಿಚೇರಿ ಚುನಾವಣೆಗೆ ಆರ್ಥಿಕ ಸಹಕಾರ ಕೊಟ್ಟಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಶೋಧನೆ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಅಲ್ಲದೆ ಆ ಚುನಾವಣೆಯಲ್ಲಿ ಕೇರಳದಲ್ಲಿ ಕಾಂಗ್ರೆಸ್‌ ಸೋತರೆ, ಪಾಂಡಿಚೇರಿಯಲ್ಲಿ ಕಾಂಗ್ರೆಸ್‌ ಅಧಿಕಾರ ಹಿಡಿಯಿತು. ಹೀಗಾಗಿ ಶಿವಕುಮಾರ್‌ ಅವರ ಪ್ರಕರಣದಲ್ಲಿ ಕೇರಳ ಮತ್ತು ಪಾಂಡಿಚೇರಿ ಕಾಂಗ್ರೆಸ್‌ ನಾಯಕರಿಗೆ ಇ.ಡಿ. ತನಿಖೆ ಭೀತಿ ಶುರುವಾಗಿದೆ ಎಂದು ತಿಳಿದು ಬಂದಿದೆ.

24 ಕೋಟಿ ರು. ಸಂದಾಯ:

ಕೇರಳ ಮತ್ತು ಪಾಂಡಿಚೇರಿ ಮಾತ್ರವಲ್ಲದೆ ಶಿವಕುಮಾರ್‌ ಅವರಿಂದ ವಿವಿಧ ರಾಜಕೀಯ ವ್ಯಕ್ತಿಗಳಿಗೆ 24.58 ಕೋಟಿ ಸಂದಾಯವಾಗಿದೆ. ಆದರೆ ಯಾರಿಗೆ ಮತ್ತು ಯಾವ ಕಾರಣಕ್ಕೆ ಹಣ ನೀಡಲಾಯಿತು ಎಂಬುದು ಖಚಿತವಾಗಿಲ್ಲ. ಈ ನಿಟ್ಟಿನಲ್ಲಿ ಪತ್ತೆದಾರಿಕೆ ಸಹ ಮುಂದುವರೆಸಲಾಗಿದೆ ಎಂದು ಇ.ಡಿ. ಮೂಲಗಳು ಹೇಳಿವೆ.

ದೆಹಲಿಯಲ್ಲಿ ಶಿವಕುಮಾರ್‌ ಅವರಿಗೆ ಸೇರಿದ ಮನೆಯಲ್ಲಿ ಪತ್ತೆಯಾದ 8 ಕೋಟಿ ರು. ಸಹ ರಾಷ್ಟ್ರೀಯ ಕಾಂಗ್ರೆಸ್‌ ನಾಯಕರಿಗೆ ತಲುಪಿಸಲು ಸಂಗ್ರಹಿಸಲಾಗಿತ್ತು ಎಂದು ಗೊತ್ತಾಗಿದೆ. ಈ ಹಣಕಾಸು ಬಗ್ಗೆ ಶಿವಕುಮಾರ್‌ ಅವರು ಸಾಕ್ಷ್ಯಗಳನ್ನು ಸಹ ನಾಶ ಮಾಡಿದ್ದಾರೆ. ಹೀಗಾಗಿ ದೆಹಲಿ ಪ್ಲ್ಯಾಟ್‌ನಲ್ಲಿ ಸಿಕ್ಕ ಹಣದ ಜೊತೆಗೆ 24 ಕೋಟಿ ರು. ಬಗ್ಗೆ ಸಹ ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಗ್ರೆಸ್ ಒಳಜಗಳಕ್ಕೆ ಪ್ರತಿಪಕ್ಷ ಕಿಡಿ.. ನಾಯಕತ್ವವಿಲ್ಲದೆ ರಾಜ್ಯದ ಅಭಿವೃದ್ಧಿ ಅಸಾಧ್ಯ: ಆರ್.ಅಶೋಕ್‌
ಭಗವದ್ಗೀತೆ ಬೋಧನೆ ಪ್ರಸ್ತಾಪ ಹಿಂದೆ ಎಚ್ಜಿಕೆ ಅಜೆಂಡಾ : ಮಧು ಬಂಗಾರಪ್ಪ