
ಬೆಂಗಳೂರು : ರಾಜ್ಯದ ರೈತರು ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳಲ್ಲಿ ಮಾಡಿರುವ ಸಾಲವನ್ನು ಮನ್ನಾ ಮಾಡಲು ಬ್ಯಾಂಕುಗಳು ತಾತ್ವಿಕವಾಗಿ ಒಪ್ಪಿಗೆ ನೀಡಿದ್ದು, ಸರ್ಕಾರದಿಂದ ಮರುಪಾವತಿ ಹಾಗೂ ಕಂತುಗಳ ಕುರಿತಂತೆ ರೂಪರೇಷೆ ನಿರ್ಧರಿಸಲು ಉಪಸಮಿತಿ ರಚಿಸಲು ನಿರ್ಧರಿ ಸಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಮಂಗಳವಾರ ವಿಧಾನಸೌಧದಲ್ಲಿ ವಿವಿಧ ರಾಷ್ಟ್ರೀಕೃತ ಬ್ಯಾಂಕುಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಅವರು ಸುದ್ದಿ ಗಾರರೊಂದಿಗೆ ಮಾತನಾಡಿದರು.
ಬಜೆಟ್ನಲ್ಲಿ ಘೋಷಿಸಿರುವಂತೆ ರೈತರ ಸಾಲ ಮನ್ನಾ ಮಾಡಲು ಬದ್ಧವಾಗಿದೆ. ಸರ್ಕಾರಿ ಬ್ಯಾಂಕುಗಳ ಸಾಲ ಮನ್ನಾ ಕುರಿತಂತೆ ಮಂಗಳವಾರ ಬ್ಯಾಂಕುಗಳ ಅಧಿಕಾರಿಗಳ ಜೊತೆ ಸುದೀರ್ಘವಾಗಿ ಚರ್ಚಿಸಲಾಗಿದೆ. ನಾಲ್ಕು ಕಂತಿನಲ್ಲಿ ಸಾಲ ಮರುಪಾವತಿಸಲು ಸಹ ಬ್ಯಾಂಕುಗಳು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿವೆ. ಸಾಲ ಮನ್ನಾ ಜೊತೆಗೆ ರೈತರಿಗೆ ಹೊಸದಾಗಿ ಸಾಲ ನೀಡುವ ಬಗ್ಗೆ ಚರ್ಚಿಸಲಾಗಿದೆ. ಇಂದು ನಡೆದ ಸಭೆಯ ವಿವರಗಳ ಬಗ್ಗೆ ಬ್ಯಾಂಕಿನ ಆಡಳಿತ ಮಂಡಳಿ ಜೊತೆ ಚರ್ಚಿಸಲಾಗುವುದು ಎಂದು ಬ್ಯಾಂಕು ಅಧಿಕಾರಿಗಳು ತಿಳಿಸಿದ್ದಾರೆ ಎಂದರು.
ಪ್ರತಿಯೊಬ್ಬರ ರೈತರ ಆಧಾರ್ ಕಾರ್ಡ್ ಮತ್ತಿತರ ದಾಖಲೆಗಳನ್ನು ಪರಿಶೀಲಿಸಿ ಅನರ್ಹ ರೈತರನ್ನು ಗುರುತಿಸಲಾಗುವುದು. ಈ ಎಲ್ಲ ಅಂಕಿ-ಅಂಶಗಳನ್ನು ಆಧರಿಸಿ ಸಾಲ ಮನ್ನಾ ಮಾಡಲಾಗುವುದು ಎಂದು ತಿಳಿಸಿದರು. ಸರ್ಕಾರಿ ಬ್ಯಾಂಕುಗಳಲ್ಲಿ ಇರುವ 37 ,159 ಕೋಟಿ ರು. ಚಾಲ್ತಿ ಖಾತೆಯಲ್ಲಿರುವ 9448 ಕೋಟಿ ರು. ಹಾಗೂ ಸಿದ್ದರಾಮಯ್ಯ ಸರ್ಕಾರದಲ್ಲಿ ಮನ್ನಾ ಮಾಡಿದ ಸಾಲದ ಮೊತ್ತ, ಸಾಲ ಮರು ಪಾವತಿ ಮಾಡಿರುವ ರೈತರಿಗೆ ನೀಡಲಿರುವ ಪ್ರೋತ್ಸಾಹ ಧನ ಸೇರಿ ಸುಮಾರು 50 ಸಾವಿರ ಕೋಟಿ ರು. ಸಾಲ ಮನ್ನಾ ಮಾಡುವ ಹೊಣೆಯನ್ನು ಸರ್ಕಾರ ಹೊತ್ತಿದೆ.
ಮೂರ್ನಾಲ್ಕು ದಿನಗಳ ಹಿಂದೆ ಸಿದ್ದರಾಮಯ್ಯ ಸರ್ಕಾರದ ಸಾಲ ಮನ್ನಾ ಬಾಕಿ 1500 ಕೋಟಿ ರು.ಗಳನ್ನು ಸಹಕಾರಿ ಬ್ಯಾಂಕುಗಳಿಗೆ ಬಿಡುಗಡೆ ಮಾಡಲಾಗಿದೆ ಎಂದರು. ಸರ್ಕಾರ ಸಾಲ ಮನ್ನಾ ಬಗ್ಗೆ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದ್ದರೂ ರೈತರ ಸಾಲ ಮನ್ನಾ ಮಾಡುವ ವಿಷಯದಲ್ಲಿ ಸರ್ಕಾರ ಏನೂ ಮಾಡುತ್ತಿಲ್ಲ. ನಿಷ್ಕ್ರಿಯವಾಗಿದೆ ಎಂಬ ಅಪಪ್ರಚಾರಕ್ಕೆ ರೈತರು ಕಿವಿಗೊಡಬಾರದ ಎಂದು ಅವರು ಕೋರಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.