
ಬೆಂಗಳೂರು : ಮಹದಾಯಿ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವೇನು ಎಂಬುದನ್ನು ಫೆ.4ರೊಳಗೆ ಸ್ಪಷ್ಟಪಡಿಸಬೇಕು. ಇಲ್ಲದಿದ್ದಲ್ಲಿ ಫೆ.4ಕ್ಕೆ ಪ್ರಧಾನಿ ಮೋದಿ ಅವರಿಗೆ ಮುತ್ತಿಗೆ ಹಾಕಲಾಗುವುದು ಎಂದು ಕಳಸಾ-ಬಂಡೂರಿ ಹೋರಾಟ ಸಮನ್ವಯ ಸಮಿತಿ ಅಧ್ಯಕ್ಷ ಲೋಕನಾಥ ಹೆಬಸೂರು ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಹದಾಯಿ ಮೂರು ರಾಜ್ಯಗಳ ನಡುವಿನ ಸಮಸ್ಯೆ ಆಗಿರುವುದರಿಂದ ಪ್ರಧಾನಿಗಳ ಮಧ್ಯಪ್ರವೇಶವೊಂದೇ ಇದಕ್ಕೆ ಉಳಿದಿರುವ ದಾರಿ.
ಫೆ.4ರಂದು ಕರೆ ನೀಡಿರುವ ಬೆಂಗಳೂರು ಬಂದ್ಗೆ ಸಮಿತಿಯ ಸಂಪೂರ್ಣ ಬೆಂಬಲವಿದೆ. ಜತೆಗೆ ಉತ್ತರ ಕರ್ನಾಟಕದ ನೂರಾರು ಸಂಘಟನೆಗಳೂ ಬೆಂಬಲಿಸಿವೆ. ಅಂದಿನ ಹೋರಾಟದಲ್ಲಿ ಪಾಲ್ಗೊಳ್ಳಲು ಸಾವಿರಾರು ಸಂಖ್ಯೆಯಲ್ಲಿ ರೈತರೊಂದಿಗೆ ಫೆ.3ರಂದೇ ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ. ಈ ವಿಷಯವಾಗಿ ಜ.31ಕ್ಕೆ ಬೆಂಗಳೂರಲ್ಲಿ ವಾಟಾಳ್ ನಾಗರಾಜ್ ಅವರೊಂದಿಗೆ ಸಭೆ ನಡೆಸಲಾಗುವುದು. ಫೆ.4ರೊಳಗೆ ಪ್ರಧಾನಿ ತಮ್ಮ ನಿಲುವು ಸ್ಪಷ್ಟಪಡಿಸದಿದ್ದಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಬಿಜೆಪಿ ಪರಿವರ್ತನಾ ರ್ಯಾಲಿಯಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ಅವರಿಗೆ ಮುತ್ತಿಗೆ ಹಾಕಲಾಗುವುದು ಎಂದು ಹೇಳಿದರು.
ಒಂದು ವೇಳೆ ಪ್ರಧಾನಿಗೆ ಮುತ್ತಿಗೆ ಹಾಕಲು ನಮಗೆ ಅವಕಾಶ ನೀಡದಿದ್ದಲ್ಲಿ ಫೆ.4ರಂದೇ ಮುಂದಿನ ಹೋರಾಟದ ರೂಪರೇಷೆ ಚರ್ಚಿಸಿ ನಿರ್ಧರಿಸುತ್ತೇವೆ ಎಂದು ಸ್ಪಷ್ಟಪಡಿಸಿದರು. ಬರೀ ರಾಜಕಾರಣ: ಈಚೆಗೆ ನಡೆದ ಸರ್ವಪಕ್ಷ ಸಭೆಯೂ ಯಾವುದೇ ನಿರ್ಧಾರ ಕೈಗೊಳ್ಳದೇ ಸಂಪೂರ್ಣ ವಿಫಲವಾಗಿದೆ. ಮಹದಾಯಿ ವಿಷಯ ಜನರ, ರೈತರ ಸಮಸ್ಯೆಯಾಗದೇ ರಾಜಕೀಯ ಪಕ್ಷಗಳ ಸಮಸ್ಯೆಯಾಗಿ ಪರಿವರ್ತನೆಯಾಗಿದೆ. ಒಬ್ಬರ ಮೇಲೊಬ್ಬರು ಕೆಸರೆರಚಾಟದಲ್ಲಿ ತೊಡಗಿದ್ದಾರೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮೂರು ಪಕ್ಷಗಳು ಪರಸ್ಪರ ಆರೋಪ ಪ್ರತ್ಯಾರೋಪದಲ್ಲಿ ತೊಡಗಿವೆ. ಆದರೆ ನಮ್ಮ ಸಂಕಷ್ಟವನ್ನು ಕೇಳುವವರೇ ಇಲ್ಲದಂತಾಗಿದೆ ಎಂದು ಕಿಡಿಕಾರಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.