
ಬೆಂಗಳೂರು : ಕ್ರಿಕೆಟ್ ಆಡುವ ವಿಚಾರಕ್ಕೆ ಜಗಳ ನಡೆದು ಯುವಕನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಹಾಲಕ್ಷ್ಮೀ ಲೇಔಟ್ ಠಾಣಾ ಸರಹದ್ದಿನ ಜೆ.ಸಿ.ನಗರದಲ್ಲಿ ಭಾನುವಾರ ಸಂಜೆ ನಡೆದಿದೆ. ಮಹಾಲಕ್ಷ್ಮೀ ಲೇಔಟ್ನ ಶ್ರೀರಾಮನಗರದ ಮಣಿಕಂಠ ಅಲಿಯಾಸ್ ದೊಡ್ಡಕಾಟು (22) ಮೃತ ಯುವಕ.
ಮಣಿಕಂಠ ಯಾವುದೇ ಕೆಲಸಕ್ಕೆ ಹೋಗುತ್ತಿರಲಿಲ್ಲ. ಈತ ಮಹಾಲಕ್ಷ್ಮೀ ಲೇಔಟ್ ಠಾಣಾ ವ್ಯಾಪ್ತಿಯ ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಭಾನುವಾರ ಮಧ್ಯಾಹ್ನ ನಾಲ್ಕು ಗಂಟೆ ಸುಮಾರಿಗೆ ಸ್ನೇಹಿತರೊಂದಿಗೆ ಗೆಳೆಯರ ಬಳಗ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಡುತ್ತಿದ್ದ.
ಕ್ರಿಕೆಟ್ ಪಂದ್ಯದ ವಿಚಾರವಾಗಿ ಎದುರಾಳಿ ತಂಡದ ಯುವಕನೊಬ್ಬನ ಜತೆ ಜಗಳವಾಡಿ ಆತನ ಮೇಲೆ ಹಲ್ಲೆ ನಡೆಸಿದ್ದ. ಮಣಿಕಂಠನಿಂದ ಹಲ್ಲೆಗೊಳಗಾಗಿದ್ದ ಯುವಕ ಹಲ್ಲೆಗೊಳಗಾದ ಬಗ್ಗೆ ತನ್ನ ಸ್ನೇಹಿತರಿಗೆ ಹೇಳಿದ್ದ. ಸಂಜೆ ಆರು ಗಂಟೆ ಸುಮಾರಿಗೆ ಜೆ.ಸಿ.ನಗರದಲ್ಲಿದ್ದ ಮಣಿಕಂಠನ ಮೇಲೆ ನಾಲ್ಕೈದು ದುಷ್ಕರ್ಮಿಗಳ ತಂಡ ಎರಗಿ ಹಲ್ಲೆ ನಡೆಸಿದೆ. ಗಂಭೀರವಾಗಿ ಗಾಯಗೊಂಡ ಮಣಿಕಂಠ ಸ್ಥಳದಲ್ಲಿಯೇ
ಮೃತಪಟ್ಟಿದ್ದಾನೆ.
ಘಟನೆ ಸಂಬಂಧ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಸ್ಥಳೀಯ ಸಿಸಿಟಿವಿಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಈ ಸಂಬಂಧ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.