
ಬೆಂಗಳೂರು (ಸೆ. 28): ರಾಜ್ಯ ಬಿಸಿಯೂಟ ನೌಕರರಿಗೆ ಪಿಂಚಣಿ ಸೌಲಭ್ಯಕ್ಕೆ ಆಗ್ರಹಿಸಿ ಸಿಐಟಿಯು ಸಂಯೋಜಿತ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದಿಂದ ಅ.17ರಂದು ರಾಜ್ಯದ ಎಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಗೆ ಕರೆ ನೀಡಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಮಾಲಿನಿ ಮೇಸ್ತ ತಿಳಿಸಿದ್ದಾರೆ.
ಈ ಹಿಂದೆ ರಾಜ್ಯ ಸರ್ಕಾರ ಬಿಸಿಯೂಟ ನೌಕರರಿಗೆ ಪಿಂಚಣಿ ಸೌಲಭ್ಯ ನೀಡಲು ಒಪ್ಪಿಗೆ ಸೂಚಿಸಿತ್ತು. ನೌಕರರಿಂದ ಮಾಸಿಕ ನಿಗದಿತ ಮೊತ್ತ ಕಡಿತ ಮಾಡಿ ಸರ್ಕಾರದಿಂದ ಅಷ್ಟೇ ಮೊತ್ತ ಸೇರಿಸಿ ನಿವೃತ್ತಿ ಬಳಿಕ ಆ ಮೊತ್ತ ನೀಡುವುದಾಗಿ ಹೇಳಿತ್ತು. ಇದೀಗ ಶಿಕ್ಷಣ ಇಲಾಖೆ ಆಯುಕ್ತರು ಯಾವುದೇ ಚರ್ಚೆ ಇಲ್ಲದೆ ಬಿಸಿಯೂಟ ನೌಕರರನ್ನು ಕೇಂದ್ರದ ‘ಪ್ರಧಾನಮಂತ್ರಿ ಶ್ರಮಯೋಗಿ ಮಾನ್ಧನ್ ಪಿಂಚಣಿ ಯೋಜನೆ’ಗೆ ಸೇರಿಸುವುದಾಗಿ ಸುತ್ತೋಲೆ ಹೊರಡಿಸಿದ್ದಾರೆ ಎಂದು ಕಿಡಿಕಾರಿದರು.
ಕೇಂದ್ರದ ಈ ಯೋಜನೆಯು 18ರಿಂದ 40 ವರ್ಷದೊಳಗಿನ ನೌಕರರಿಗೆ ಮಾತ್ರ ಅನ್ವಯವಾಗುತ್ತದೆ. ರಾಜ್ಯದಲ್ಲಿ 1.18 ಲಕ್ಷ ಬಿಸಿಯೂಟ ನೌಕರರಿದ್ದು, ಈ ಪೈಕಿ 40 ವರ್ಷ ಮೀರಿದವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹಾಗಾಗಿ ಯೋಜನೆಯಿಂದ ಹೆಚ್ಚಿನವರು ವಂಚಿತರಾಗುತ್ತಾರೆ. ಹಾಗಾಗಿ ರಾಜ್ಯ ಸರ್ಕಾರ ಈ ಹಿಂದೆ ನೀಡಿದ್ದ ಭರವಸೆಯನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾ ಮಟ್ಟದ ಹೋರಾಟಕ್ಕೆ ಕರೆ ನೀಡಲಾಗಿದೆ. ಇದಕ್ಕೂ ಬಗ್ಗದಿದ್ದರೆ ಡಿಸೆಂಬರ್ ಮೊದಲ ವಾರದಿಂದ ಅಡುಗೆ ಕೆಲಸ ನಿಲ್ಲಿಸಿ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.