
ಚಂಡೀಗಢ: ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಪ್ರಾರ್ಥನೆ ಸಂದರ್ಭದಲ್ಲಿ ‘ಗಾಯತ್ರಿ ಮಂತ್ರ’ ಪಠಣವನ್ನು ಜಾರಿಗೊಳಿಸಲು ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಬಿಜೆಪಿ ಸರ್ಕಾರ ನಿರ್ಧರಿಸಿದೆ.
ರಾಜ್ಯದ ಶಾಲೆಗಳ ಪ್ರಾಂಶುಪಾಲರು, ಶಿಕ್ಷಕರು ಮತ್ತು ಇತರರೊಂದಿಗೆ ಇತ್ತೀಚೆಗಷ್ಟೇ ನಡೆಸಿದ ಸಭೆಯಲ್ಲಿ ಹಿಂದೂ ಧರ್ಮದ ಮಹಾಗ್ರಂಥಗಳಲ್ಲಿ ಒಂದಾದ ಋಗ್ವೇದದಲ್ಲಿರುವ ಗಾಯತ್ರಿ ಮಂತ್ರ ಪಠಣ ಜಾರಿಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ. ನಾಳೆಯೇ (ಫೆ.27) ಈ ಬಗ್ಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಇಲ್ಲಿ ಶಿಕ್ಷಣ ಸಚಿವ ರಾಮ್ ಬಿಲಾಸ್ ಶರ್ಮಾ ತಿಳಿಸಿದ್ದಾರೆ.
ಆದರೆ, ಈ ಕುರಿತು ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜ್ಯದಲ್ಲಿರುವ ದುರಾಡಳಿತ, ಶಿಕ್ಷಣ, ಆರೋಗ್ಯ ಮತ್ತು ಕೃಷಿ ವಲಯಗಳ ಸಮಸ್ಯೆಗಳನ್ನು ಮುಚ್ಚಿಹಾಕಲು ಸರ್ಕಾರ ಜನರ ದೃಷ್ಟಿಯನ್ನು ಬೇರೆಡೆ ಸೆಳೆಯುವ ಸರ್ಕಾರದ ಯತ್ನವಿದು ಎಂದು ಕಾಂಗ್ರೆಸ್ ಮುಖಂಡ ಅಫ್ತಾಬ್ ಅಹ್ಮದ್ ದೂರಿದ್ದಾರೆ.
ಶಿಕ್ಷಣ ವ್ಯವಸ್ಥೆಯಲ್ಲಿ ಕೇಸರೀಕರಣದ ಯತ್ನವೇ ಇದು ಎಂಬ ಪ್ರಶ್ನೆಗೆ ಉತ್ತರಿಸಿರುವ ಸಚಿವ ರಾಮ್ ಬಿಲಾಸ್ ಶರ್ಮಾ, ‘ಮುಂಜಾನೆ ಸೂರ್ಯನ ಕಿರಣಗಳು ಕೇಸರಿಮಯವಾಗಿಯೇ ಇರುತ್ತವೆ. ತ್ರಿವರ್ಣ ಧ್ವಜದಲ್ಲಿ ಮೊದಲಿಗೆ ಕೇಸರಿಯೇ ಇದೆ. ಇದರಲ್ಲಿ ತಪ್ಪೇನಿದೆ,’ ಎಂದು ಮರು ಪ್ರಶ್ನಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.