
ಬೆಂಗಳೂರು/ ಹಾಸನ : ಸರ್ಕಾರವನ್ನು ಅಸ್ಥಿರಗೊಳಿಸಲು ಮೈತ್ರಿ ಪಕ್ಷದ ಶಾಸಕರಿಗೆ ಬಿಜೆಪಿ ಹಾಕುತ್ತಿರುವ ಗಾಳಕ್ಕೆ ತಿರುಗೇಟು ನೀಡಲು ಜೆಡಿಎಸ್ ತನ್ನ ಶಾಸಕರನ್ನು ಹಿಡಿತದಲ್ಲಿಟ್ಟುಕೊಳ್ಳುವ ಕಾರ್ಯತಂತ್ರ ರೂಪಿಸಿದ್ದು, ಸರ್ಕಾರದ ಯೋಜನೆಗಳ ಜಾರಿ ಮತ್ತು ಅಭಿವೃದ್ಧಿ ಕಾರ್ಯದಲ್ಲಿ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗಲು ಕಾರ್ಯಪ್ರವೃತ್ತವಾಗಿದೆ.
ಮೈತ್ರಿ ಸರ್ಕಾರದಲ್ಲಿದ್ದರೂ ಸಚಿವರು ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕಾರ್ಯ ಮಾಡುತ್ತಿಲ್ಲ. ಇದು ಶಾಸಕರ ತೀವ್ರ ಅಸಮಾಧಾನಕ್ಕೆ ಕಾರಣವಾಗಿತ್ತು. ಇದನ್ನೇ ಬಂಡವಾಳವಾಗಿಸಿಕೊಂಡ ಬಿಜೆಪಿಯು ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಿ, ಜೆಡಿಎಸ್, ಕಾಂಗ್ರೆಸ್ ಪಕ್ಷದ ಶಾಸಕರಿಗೆ ಸಚಿವ ಸ್ಥಾನ ಮತ್ತು ಕೋಟ್ಯಂತರ ರು. ಆಮಿಷವೊಡ್ಡಿ ಸೆಳೆಯುವ ಪ್ರಯತ್ನ ನಡೆಸಿದೆ. ಬಿಜೆಪಿಯ ಈ ಪ್ರಯತ್ನದಿಂದಾಗಿ ಶಾಸಕರು ಆಮಿಷಕ್ಕೊಳಗಾಗುವ ಸಾಧ್ಯತೆಯಿಂದ ಜೆಡಿಎಸ್ ವರಿಷ್ಠರು ಇದೀಗ ಎಚ್ಚೆತ್ತುಕೊಂಡಿದ್ದಾರೆ.
ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರ ನಡೆಸುವ ನಿರ್ಧಾರಕ್ಕೆ ಬಂದಿದ್ದಾರೆ. ಈ ನಿಟ್ಟಿನಲ್ಲಿ ಹಾಸನದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಡೆಸಲಿದ್ದಾರೆ. ಬೇಲೂರು ರಸ್ತೆಯಲ್ಲಿನ ಖಾಸಗಿ ಹೊಟೇಲ್ನಲ್ಲಿ ಶನಿವಾರ ಸಂಜೆ ಸಭೆ ನಡೆಯಲಿದ್ದು, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ನೇತೃತ್ವದಲ್ಲಿ ಸಭೆ ಜರುಗಲಿದೆ ಎಂದು ಹೇಳಲಾಗಿದೆ.
ಗುರುವಾರ ನಡೆದ ಸಚಿವ ಸಂಪುಟ ಸಭೆಯ ಬಳಿಕ ನಡೆದ ಅನೌಪಚಾರಿಕ ಚರ್ಚೆಯಲ್ಲಿಯೂ ಬಿಜೆಪಿಯ ಆಪರೇಷನ್ ಕಮಲದ ಬಗ್ಗೆ ಗಂಭೀರವಾಗಿ ಸಮಾಲೋಚನೆ ನಡೆಸಲಾಯಿತು. ಈ ವೇಳೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಜವಾಬ್ದಾರಿಯನ್ನು ಆಯಾ ಪಕ್ಷದ ಸಚಿವರು ಮತ್ತು ಮುಖಂಡರು ತೆಗೆದುಕೊಳ್ಳಬೇಕು. ಬಿಜೆಪಿಯವರು ಮೈತ್ರಿ ಪಕ್ಷದವರನ್ನು ಸೆಳೆಯಲು ಗಂಭೀರವಾಗಿಯೇ ಪ್ರಯತ್ನ ನಡೆಸಿದ್ದಾರೆ. ಆದರೆ, ಮೈತ್ರಿ ಸರ್ಕಾರದ ಶಾಸಕರು ಯಾವುದೇ ಆಮಿಷಕ್ಕೆ ಬಲಿಯಾಗದಂತೆ ನೋಡಿಕೊಳ್ಳಬೇಕು ಎಂಬುದರ ಕುರಿತು ಚರ್ಚಿಸಲಾಯಿತು.
ರಾಜ್ಯ ಸರ್ಕಾರವನ್ನು ಉರುಳಿಸಲು ಬಿಜೆಪಿ ಆಪರೇಷನ್ ಕಮಲಕ್ಕೆ ಮುಂದಾಗಿರುವುದು ಮತ್ತು ರಾಜ್ಯ ರಾಜಕೀಯ ಚಟುವಟಿಕೆಗಳು ದಿನೇ ದಿನೇ ಹೊಸ ತಿರುವು, ದಿಕ್ಕು ಪಡೆದುಕೊಳ್ಳುತ್ತಿವ ಕಾರಣ ಶನಿವಾರ ಸಭೆ ಕರೆಯಲಾಗಿದೆ. ಸಭೆಯಲ್ಲಿ ಯಾವುದೇ ಕಾರಣಕ್ಕೂ , ಯಾವುದೇ ಪರಿಸ್ಥಿತಿ ಬಂದರೂ ಶಾಸಕರು ಆಸೆ, ಆಮಿಷಗಳಿಗೆ ಒಳಗಾಗಬಾರದು. ಸರ್ಕಾರದ ಬೀಳುತ್ತದೆ ಎಂಬ ಸುದ್ದಿಯಿಂದ ಅಧೀರರಾಗದೇ ಗಟ್ಟಿಯಾಗಿ ನಿಲ್ಲಬೇಕು, ಒಗ್ಗಟ್ಟನ್ನು ಪ್ರದರ್ಶಿಸಬೇಕು ಎಂದು ಸೂಚಿಸುವ ಸಾಧ್ಯತೆ ಇದೆ.
ಪಕ್ಷದಲ್ಲಿನ ಸಣ್ಣಪುಟ್ಟಭಿನ್ನಾಭಿಪ್ರಾಯ ಬದಿಗೊತ್ತಿ ಸರ್ಕಾರ ಉಳಿಸಿಕೊಂಡು ಮುನ್ನಡೆಸುವ ಕಡೆ ಗಮನ ಹರಿಸಬೇಕು. ಮುಂಬರುವ ಲೋಕಸಭೆ ಚುನಾವಣೆಯ ಸಿದ್ಧತೆ ಕಡೆ ಹೆಚ್ಚಿನ ಗಮನಹರಿಸಬೇಕು. ಹೆಚ್ಚು ಸ್ಥಾನ ಗೆಲ್ಲಲು ಅನುಕೂಲವಾಗುವಂತೆ ಈಗಿನಿಂದಲೇ ತಯಾರಿ ನಡೆಸಬೇಕು. ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ನೀಡಬೇಕು. ವಿರೋಧ ಪಕ್ಷವಾದ ಬಿಜೆಪಿಯ ಆಪರೇಷನ್ ಕಮಲ ವಿಫಲಗೊಳಿಸಬೇಕು ಎಂಬಿತ್ಯಾದಿ ವಿಷಯಗಳ ಬಗ್ಗೆ ಶಾಸಕರೊಡನೆ ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ದೇವೇಗೌಡರ ತಂತ್ರ ಮತ್ತು ಸೂಚನೆ: ಏತನ್ಮಧ್ಯೆ, ಅಧಿಕಾರ ಪಡೆಯಲು ಬಿಜೆಪಿ ಇನ್ನಿಲ್ಲದ ವಾಮಮಾರ್ಗ ಅನುಸರಿಸುತ್ತಿದೆ. ಸಮ್ಮಿಶ್ರ ಸರ್ಕಾರದ ಅಭಿವೃದ್ಧಿಗೆ ಹಿನ್ನಡೆಯಾಗುವಂತೆ ಆಗಾಗ್ಗೆ ಅಡ್ಡಿಪಡಿಸುವುದು ನಡೆಯುತ್ತಿದೆ. ಬಿಜೆಪಿ ಉಂಟು ಮಾಡುವ ರಾಜಕೀಯ ಗೊಂದಲಗಳ ಬಗ್ಗೆ ಸವಿಸ್ತರವಾಗಿ ಚರ್ಚಿಸಿ, ಪಕ್ಷದ ಶಾಸಕರ ಒಗ್ಗಟ್ಟನ್ನು ಪ್ರದರ್ಶಿಸಬೇಕು ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್ .ಡಿ. ದೇವೇಗೌಡರು ಸೂಚನೆ ನೀಡಿದ್ದಾರೆ.
ಸಾಧ್ಯವಾದರೆ ತಾವು ಕೂಡ ಸಭೆಗೆ ಆಗಮಿಸುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷರಿಗೆ ತಿಳಿಸಿದ್ದಾರೆ. ಹೀಗೆ ಆಪರೇಷನ್ ಕಮಲ ವಿಫಲಗೊಳಿಸಿ ಜೆಡಿಎಸ್ ಶಾಸಕರು ಪಕ್ಷ ಬಿಟ್ಟು ಹೋಗದಂತೆ ಮಾಜಿ ಪ್ರಧಾನಿ ತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.