
ಬೆಂಗಳೂರು [ಜು.24] : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರವೂ ಅಬ್ಬರದ ಮಳೆಯಾಗಿದ್ದು, ಉತ್ತರ ಕನ್ನಡದಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯ ಏಳು ಕಡೆ ಗಂಜಿ ಕೇಂದ್ರ ತೆರೆಯಲಾಗಿದ್ದು, ಹಲವು ಮನೆಗಳಿಗೆ ಹಾನಿಯಾಗಿದೆ. ಕೊಡಗಿನಲ್ಲೂ ಉತ್ತಮ ಪ್ರಮಾಣದಲ್ಲಿ ಮಳೆಯಾಗಿದ್ದು, ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಮದೆನಾಡಲ್ಲಿ ಭೂ ಕುಸಿತ ಉಂಟಾಗಿದೆ. ಕೊಡಗು ಮತ್ತು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಮುಂದುವರಿದಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಕೊಡಗು ಜಿಲ್ಲೆಯಲ್ಲಿ ಎನ್ ಡಿಆರ್ಎಫ್ ತಂಡ ನಿಯೋಜನೆಗೊಂಡಿದೆ. ಉತ್ತರ ಕನ್ನಡದಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಕುಮಟಾದ ಕೋನಳ್ಳಿ, ಮೂರೂರು-ಕೋಣಾರೆ, ಭಟ್ಕಳದ ಚೌಥನಿ, ಹೊನ್ನಾವರದ ಭಾಸ್ಕೇರಿ, ಗೋಟಿನಹೊಳೆ, ಗುಂಡಬಾಳ ನದಿ ಸುತ್ತಮುತ್ತಲಿನ ಪ್ರದೇಶ ಜಲಾವೃತವಾಗಿದೆ. ಪ್ರವಾಹ ಪೀಡಿತರಿಗಾಗಿ ಹೊನ್ನಾವರದ ಮುಗ್ವಾ, ಕಡತೋಕಾ, ಕರ್ಕಿ ಗ್ರಾಪಂ ವ್ಯಾಪ್ತಿಯಲ್ಲಿ 5 ಗಂಜಿ ಕೇಂದ್ರ ತೆರೆಯಲಾಗಿದೆ.
ಒಟ್ಟು 181 ಜನ ಆಶ್ರಯ ಪಡೆದಿದ್ದಾರೆ. ಕುಮಟಾದ ಕೋನಳ್ಳಿ ಹಿರೇಕಟ್ಟಾ ಜಲಾವೃತವಾಗಿದ್ದು, ಸುಮಾರು 30 ಮನೆಗಳಿಗೆ ನೀರು ನುಗ್ಗಿದೆ. ಇಲ್ಲಿಗೆ ಸಮೀಪದ ಊರಕೇರಿ ಶಾಲೆಯಲ್ಲಿ ಗಂಜಿ ಕೇಂದ್ರ ತೆರೆಯಲಾಗಿದೆ. ಅಂಕೋಲಾದ ಹಾರವಾಡ ಬಳಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದಿದ್ದು ತಕ್ಷಣ 3 ರೈಲುಗಳನ್ನು ತಡೆಹಿಡಿಯಲಾಗಿದೆ. ಕಾರವಾರ ಸಮೀಪ ರಾಷ್ಟ್ರೀಯ ಹೆದ್ದಾರಿ 66 ರ ಬಳಿ ಅರ್ಗಾ ಎಂಬಲ್ಲಿ ಮಂಗಳವಾರ ಬೆಳಗ್ಗೆ ಗುಡ್ಡ ಕುಸಿದು ಕೆಲ ಸಮಯ ಸಂಚಾರಕ್ಕೆ ವ್ಯತ್ಯಯ ಉಂಟಾಗಿತ್ತು.
ಶಾಲಾ-ಕಾಲೇಜುಗಳಿಗೆ ರಜೆ : ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿಯೂ ಭಾರೀ ಮಳೆಯಾಗಿದೆ. ಅಂಗನವಾಡಿ, ಶಾಲೆಗಳು, ಪಿಯುಸಿವರೆಗಿನ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಲಾಗಿತ್ತು. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಜು.25 ರವರೆಗೆ 200 ಮಿ.ಮೀ.ಗಿಂತ ಹೆಚ್ಚು ಮಳೆ ಸುರಿಯುವ ಸಾಧ್ಯತೆ ಇದ್ದು, ಜು.25 ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದ.ಕನ್ನಡದಲ್ಲಿ 85.6 ಮಿ.ಮೀ. ಮಳೆಯಾಗಿದೆ. ಉಡುಪಿಯಲ್ಲಿ ಬುಧವಾರವೂ ರಜೆ ಮುಂದುವರಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.