ಮತ್ತೆ ಮಲೆನಾಡಿನಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ವಿವಿಧೆಡೆ ಮಳೆಯ ಅಬ್ಬರಕ್ಕೆ ರಸ್ತೆಯ ಮೇಲೆ ಮರಗಳು ಉರುಳಿ ಬಿದ್ದಿವೆ.
ಚಿಕ್ಕಮಗಳೂರು : ಮಲೆನಾಡಿನಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಮತ್ತೆ ಅಸ್ತವ್ಯಸ್ತವಾಗಿದೆ. ಭಾರೀ ಮಳೆ ಹಾಗೂ ಬಿರುಗಾಳಿಗೆ ರಸ್ತೆಯ ಮೇಲೆ ಮರಗಳು ಉರುಳಿ ಬಿದ್ದಿವೆ.
ಚಿಕ್ಕಮಗಳೂರು ತಾಲೂಕಿನ ಮಲ್ಲಂದೂರು ರಸ್ತೆ ಮಧ್ಯದಲ್ಲೇ ಭಾರೀ ಗಾತ್ರದ ಮರವೊಂದು ಉರುಳಿ ಬಿದ್ದಿದ್ದು ಸಂಚಾರ ತಡೆ ಉಂಟಾದ ಹಿನ್ನೆಲೆಯಲ್ಲಿ, ಪೊಲೀಸ್ ಅಧಿಕಾರಿಗಳೇ ಸ್ಥಳದಲ್ಲಿ ಮರ ತೆರವು ಕಾರ್ಯಾಚಾರಣೆ ನಡೆಸಿದ್ದಾರೆ. ಈ ವೇಳೆ ಸಖರಾಯಪಟ್ಟಣ ಪೊಲೀಸ್ ಠಾಣೆ ಪಿಎಸ್ಐ ಸುನೀತಾ ಅವರಿಗೆ ಸ್ಥಳೀಯರು ನೆರವು ನೀಡಿದ್ದಾರೆ.
ಭಾರೀ ಮಳೆ ಹಿನ್ನೆಲೆಯಲ್ಲಿ ವಿವಿಧೆಡೆ ರಸ್ತೆ ಸಂಚಾರಕ್ಕೆ ಸಮಸ್ಯೆ ಎದುರಾಗಿದೆ. ನದಿಗಳೂ ತುಂಬಿ ಹರಿಯುತ್ತಿವೆ. ಕೆಲ ದಿನಗಳ ಕಾಲ ಬಿಡುವು ನೀಡಿದ್ದ ವರುಣ ಮತ್ತೆ ಆರ್ಭಟ ಆರಂಭಿಸಿದ್ದಾನೆ.