
ಬೆಂಗಳೂರು : ಭಾರೀ ಮಳೆಯಿಂದಾಗಿ ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ನದಿಗಳ ಅಬ್ಬರ, ಗುಡ್ಡ ಕುಸಿತ ಹಾಗೂ ಮರಗಳು ಧರೆಗುರುಳಿದ್ದರಿಂದ ಬಹುತೇಕ ಕಡೆ ರಸ್ತೆ, ರೈಲು ಸಂಚಾರ ಸ್ಥಗಿತಗೊಂಡಿದೆ.
ಕೊಡಗು-ಕೇರಳ, ಗೋಣಿಕೊಪ್ಪಲು-ಮೈಸೂರು, ಶೃಂಗೇರಿ-ಕೊಪ್ಪ, ಕೊಟ್ಟಿಗೆಹಾರ-ಕುದುರೆಮುಖ ಮಾರ್ಗಗಳಲ್ಲಿ ಸಂಚಾರ ಸ್ಥಗಿತಗೊಂಡಿದೆ. ಇದೇ ವೇಳೆ ಕುಕ್ಕೆ ಸುಬ್ರಹ್ಮಣ್ಯ-ಸಿರಿಬಾಗಿಲು ಮಾರ್ಗದ ರೈಲು ಹಳಿಯಲ್ಲಿ ಗುಡ್ಡದ ಮಣ್ಣು ಕುಸಿದು ಬಿದ್ದಿದ್ದರಿಂದ ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತಗೊಂಡಿದೆ.
ಗುಡ್ಡಕುಸಿತದಿಂದ ಕಳೆದೊಂದು ವಾರದಿಂದ ನಿಷೇಧಗೊಂಡಿದ್ದ ಚಾರ್ಮಾಡಿ ಘಾಟ್ ರಸ್ತೆ ಶುಕ್ರವಾರದಿಂದ ವಾಹನ ಸಂಚಾರಕ್ಕೆ ಮುಕ್ತಗೊಳ್ಳಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ತಿಳಿಸಿದೆ. ಹಾಸನ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಕುಕ್ಕೆ ಸುಬ್ರಹ್ಮಣ್ಯ-ಸಿರಿಬಾಗಿಲು ಮಾರ್ಗದ ರೈಲು ಹಳಿಯಲ್ಲಿ ಗುಡ್ಡದ ಮಣ್ಣು ಕುಸಿದು ಬಿದ್ದಿದ್ದರಿಂದ ಬೆಂಗಳೂರು- ಮಂಗಳೂರು ರೈಲು ಸಂಚಾರ ಸ್ಥಗಿತಗೊಂಡಿದೆ.
ಇದೇ ವೇಳೆ ಹಾಸನ ಜಿಲ್ಲೆಯ ಸಕಲೇಶಪುರ ಬಳಿಯ ಕಡಗರವಳ್ಳಿ ಬಳಿ ರೈಲು ಹಳಿ ಮೇಲೆ ಬೃಹತ್ ಬಂಡೆಯೊಂದು ಉರುಳಿ ಬಿದ್ದಿದೆ. ಇದರಿಂದಾಗಿ ಬೆಳಗ್ಗೆ 11 ಗಂಟೆಗೆ ಕಾರವಾರದಿಂದ ಬೆಂಗಳೂರಿಗೆ ಹೊರಟಿದ್ದ ರೈಲಿನ ಸಂಚಾರವನ್ನು ಸುಬ್ರಹ್ಮಣ್ಯದಲ್ಲೇ ರದ್ದುಪಡಿಸಲಾಗಿದೆ. ಅದೇ ರೀತಿ ಬೆಂಗಳೂರು-ಮಂಗಳೂರು ರೈಲು ಸಂಚಾರವನ್ನೂ ಸಕಲೇಶಪುರದಲ್ಲಿ ಸ್ಥಗಿತಗೊಳಿಸಲಾಗಿದೆ.
ಹಳಿ ಮೇಲೆ ಬಿದ್ದಿರುವ ಮಣ್ಣನ್ನು ಜೆಸಿಬಿ ಮೂಲಕ ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ. ಇದರಿಂದಾಗಿ 1500ಕ್ಕೂ ಹೆಚ್ಚು ಪ್ರಯಾಣಿಕರು ಪರದಾಡುವಂತಾಯಿತು. ಬಳಿಕ ರೈಲ್ವೆ ಅಧಿಕಾರಿಗಳು ಬೇರೆ ವಾಹನದ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.