
ಬೆಂಗಳೂರು (ಡಿ. 27): ಗೃಹರಕ್ಷಕ ದಳದ ಸಿಬ್ಬಂದಿಯ ಗೌರವ ಧನವನ್ನು ರೂ. 400 ರಿಂದ 500 ಕ್ಕೆ ಏರಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಚರ್ಚಿಸುವುದಾಗಿ ಗೃಹ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದ್ದಾರೆ.
ಗೃಹರಕ್ಷಕ ದಳದ ಸಿಬ್ಬಂದಿ ಪೊಲೀಸ್ ಇಲಾಖೆ ಪೂರಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತುರ್ತು ಪರಿಸ್ಥಿತಿ, ಕಾನೂನು ಸುವ್ಯವಸ್ಥೆ, ಚುನಾವಣಾ ಇನ್ನಿತರ ಬಂದೋಬಸ್ತ್, ಸಂಚಾರ ನಿಯಂತ್ರಣ ಮತ್ತು ಪ್ರವಾಹ ಬೆಂಕಿ ಅನಾಹುತಗಳ ಸಂದರ್ಭದಲ್ಲಿ ಸಿಬ್ಬಂದಿ ಸೇವೆ ಗಣನೀಯವಾಗಿದೆ. ತುರ್ತು ಪರಿಸ್ಥಿತಿಗಳಲ್ಲಿ ಕಾರ್ಯ ನಿರ್ವಹಿಸುವ ಸಂದರ್ಭಗಳಲ್ಲಿ ಪೊಲೀಸರಿಗೆ ನೀಡುವ ಸೌಲಭ್ಯಗಳನ್ನೇ ಗೃಹ ರಕ್ಷಕರಿಗೂ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು. ಗೃಹ ರಕ್ಷಕ ದಳದವರು ಈವರೆಗೆ ಪೊಲೀಸರ ಬ್ಯಾಂಡ್ಅನ್ನು ಎರವಲಾಗಿ ಪಡೆಯುತ್ತಿದ್ದರು. ಈಗ ಅವರು ಸ್ವಂತ ಬ್ಯಾಂಡ್ ಹೊಂದಿರುವುದು ಅನುಕೂಲವಾಗಿದೆ ಎಂದು ತಿಳಿಸಿದರು.
ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ವಿಭಾಗದ ಡಿಜಿಪಿ ಎಂ.ಎನ್. ರೆಡ್ಡಿ, ರಕ್ಷಕ ದಳವು ತುರ್ತು ಸಂದರ್ಭದಲ್ಲಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುವ ಸಂಸ್ಥೆ. ಜನರಿಗೆ ಹಾಗೂ ದೇಶಕ್ಕೆ ತುರ್ತು ಸಂದರ್ಭಗಳಲ್ಲಿ ರಕ್ಷಣೆ ನೀಡುವ ಉದ್ದೇಶವೇ ಇದರ ಪರಮ ಗುರಿ ಎಂದರು. ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿ ಇಲ್ಲದಿದ್ದರೆ ಸಮಾಜದಲ್ಲಿ ಶಾಂತಿ ಕಾಪಾಡಲು ಕಷ್ಟವಾಗುತ್ತದೆ. ಈ ಎರಡೂ ಸಂಸ್ಥೆಗಳಿಂದ ಪೊಲೀಸ್ ಇಲಾಖೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಿದರು. ಬೆಂಗಳೂರು ಉತ್ತರ ಜಿಲ್ಲೆಯ ಕಮಾಂಡೆಂಟ್ ಡಾ.ಬಿ. ಅಮರನಾಥ್ ಮಾತನಾಡಿ, ಗೃಹರಕ್ಷಕ ದಳದ ಸಿಬ್ಬಂದಿಗೆ ಸರ್ಕಾರದ ವತಿಯಿಂದ ಇನ್ನೂ ಹೆಚ್ಚಿನ ಸೌಕರ್ಯಗಳು ಸಿಗಬೇಕು. ಈ ಬಗ್ಗೆ ಸರ್ಕಾರ ಗಮನಹರಿಸಬೇಕು ಎಂದು ಸಚಿವರಿಗೆ ಮನವಿ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.