ಸಮ್ಮಿಶ್ರ ಸರ್ಕಾರದ ವಿರುದ್ಧ ಬಂಡೆದ್ದ ಕೈ ಶಾಸಕ! ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದ ಇಂಡಿ ಶಾಸಕ! ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಅಸಮಾಧಾನ! ಇಂಡಿ ತಾಲೂಕು ಅಭಿವೃದ್ಧಿಯಲ್ಲಿ ತಾರತಮ್ಯ ಎಂದ ಪಾಟೀಲ್
ವಿಜಯಪುರ(ಸೆ.24): ಇಂಡಿ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ಸಮ್ಮಿಶ್ರ ಸರ್ಕಾರದ ವಿರುದ್ದ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.
ಸಮ್ಮಿಶ್ರ ಸರ್ಕಾರದ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ ಶಾಸಕ ಯಶವಂತರಾಯಗೌಡ ಪಾಟೀಲ್, ಕಳೆದ ಸರ್ಕಾರದಲ್ಲಿ ಅಭಿವೃದ್ಧಿ ಮಾಡುವ ಮೂಲಕ ನಾನು ಜನರಿಗೆ ಕೊಟ್ಟಿದ್ದ ಮಾತು ಉಳಿಸಿಕೊಂಡಿದ್ದೇನೆ ಆದರೆ ಸಮ್ಮಿಶ್ರ ಸರ್ಕಾರದಲ್ಲಿ ಅಭಿವೃದ್ಧಿ ಕೆಲಸ ಮಾಡಲು ಆಗುತ್ತಿಲ್ಲ ಎಂದು ಖೇದ ವ್ಯಕ್ತಪಡಿಸಿದ್ದಾರೆ.
ಅಧಿಕಾರದಲ್ಲಿ ಯಾರು ಇರುತ್ತಾರೆ ಯಾರು ಇರಲ್ಲ ಎಂಬುದು ಮುಖ್ಯವಲ್ಲ, ಅಭಿವೃದ್ಧಿ ಮಾಡುವುದು ಮುಖ್ಯ ಎಂದು ಶಾಸಕ ಪಾಟೀಲ್ ಹೇಳಿದ್ದಾರೆ. ಸಮ್ಮಿಶ್ರ ಸರ್ಕಾರ ಇರುವುದರಿಂದ ಕಳೆದ ಬಾರಿಯಷ್ಟು ಅಭಿವೃದ್ಧಿ ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದು ಅವರು ಅಸಮಾಧಾನ ಹೊರ ಹಾಕಿದ್ದಾರೆ.
ಇಂಡಿ ತಾಲೂಕು ಆದಾಗಿನಿಂದ ಅಭಿವೃದ್ಧಿಗೆ ತಾರತಮ್ಯ ಮಾಡಲಾಗುತ್ತಿದ್ದು, ಇಂಡಿಯಲ್ಲಿ ಮೆಗಾ ಮಾರ್ಕೆಟ್, ವಿಮಾನ ನಿಲ್ದಾಣ, ನೀರಾವರಿ ಯೋಜನೆಗಳು, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯಗಳು ಬಾಕಿ ಉಳಿದಿವೆ ಎಂದು ಯಶವಂತರಾಯಗೌಡ ಪಾಟೀಲ್ ಹೇಳಿದ್ದಾರೆ.
ಕಾಲುವೆಗಳಿಗೆ ಸರಿಯಾಗಿ ನೀರು ವಿತರಣೆ ಆಗುತ್ತಿಲ್ಲ, ಕೆರೆ ತುಂಬುವ ಯೋಜನೆಗಳಲ್ಲಿ ಸಹ 17 ಕೆರೆಗಳಲ್ಲಿ 14 ಕೆರೆಗಳಿಗೆ ಮಾತ್ರ ನೀರು ತುಂಬಿಸಲಾಗಿದೆ ಎಂದು ಯಶವಂತರಾಯಗೌಡ ಪಾಟೀಲ್ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.