
ಮಂಡ್ಯ(ಸೆ. 21): ಜಾತ್ಯತೀಯ ಜನತಾ ದಳದ ಎಲ್ಲ ಶಾಸಕರು ಒಟ್ಟಾಗಿ ರಾಜೀನಾಮೆ ಸಲ್ಲಿಸಲು ನಿರ್ಧರಿಸಿದ್ದಾರೆ. ನಿನ್ನೆ ಮಂಡ್ಯ ಸಂಸದ ಪುಟ್ಟರಾಜು ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ಡಿಸಿ ತಮ್ಮಣ್ಣ ಸೇರಿದಂತೆ ಜೆಡಿಎಸ್'ನ ಎಂಟು ಶಾಸಕರು ರಾಜೀನಾಮೆ ನಿರ್ಧಾರ ಪ್ರಕಟಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸುವರ್ಣನ್ಯೂಸ್ ಜೊತೆ ಮಾತನಾಡಿದ ಮದ್ದೂರು ಶಾಸಕ ಡಿ.ಸಿ.ತಮ್ಮಣ್ಣ, ಜೆಡಿಎಸ್'ನ ಎಲ್ಲಾ ಜನಪ್ರತಿನಿಧಿಗಳೂ ಒಟ್ಟಾಗಿ ರಾಜೀನಾಮೆ ನೀಡುತ್ತೇವೆ ಎಂದು ಹೇಳಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್'ಡಿ ಕುಮಾರಸ್ವಾಮಿ ಇಂದು ಮತ್ತು ನಾಳೆ ಪಕ್ಷದ ಶಾಸಕರ ಸಭೆ ಕರೆದಿದ್ದು ಈ ವಿಚಾರವಾಗಿ ನಿರ್ಧಾರ ಕೈಗೊಳ್ಳಲಿದ್ದಾರೆ. ಬಳಿಕ ಪಕ್ಷದ ರಾಷ್ಟ್ರಾಧ್ಯಕ್ಷ ಹೆಚ್'ಡಿ ದೇವೇಗೌಡರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಆ ಬಳಿಕ ತಾವೆಲ್ಲರೂ ರಾಜೀನಾಮೆ ನೀಡುವುದಾಗಿ ತಮ್ಮಣ್ಣ ಹೇಳಿದ್ದಾರೆ.
ಸಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗಬೇಕು:
"ಕೇವಲ ಜೆಡಿಎಸ್'ನ ಬೆರಳೆಣಿಕೆ ಶಾಸಕರು ರಾಜೀನಾಮೆ ಕೊಟ್ಟರೆ ಏನೂ ಪ್ರಯೋಜನವಿಲ್ಲ. ರಾಜ್ಯದ ಎಲ್ಲಾ 224 ಶಾಸಕರು, ಸಂಸದರು ಹಾಗೂ ವಿಧಾನಪರಿಷತ್ ಸದಸ್ಯರು ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ಸಾಂವೈಧಾನಿಕ ಬಿಕ್ಕಟ್ಟು ಸೃಷ್ಟಿಯಾಗುವಂತೆ ಮಾಡಬೇಕು. ಆ ಮೂಲಕ ಕೇಂದ್ರ ಸರಕಾರ ಹಾಗೂ ಸುಪ್ರೀಂಕೋರ್ಟ್'ನಿಂದ ನಮಗೆ ಆಗುತ್ತಿರುವ ಅನ್ಯಾಯವನ್ನು ಎತ್ತಿತೋರಿಸಿ ಮುಖ್ಯನ್ಯಾಯಮೂರ್ತಿಗಳ ಗಮನ ಸೆಳೆಯಲು ಸಾಧ್ಯ.." ಎಂದು ಈ ವೇಳೆ ಡಿ.ಸಿ.ತಮ್ಮಣ್ಣ ಅಭಿಪ್ರಾಯಪಟ್ಟಿದ್ದಾರೆ.
"ಭಾರತದಲ್ಲಿ ನ್ಯಾಯಾಲಯಗಳಿಂದ ನ್ಯಾಯ ಸಿಗುತ್ತದೆಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾವಿಸಲಾಗುತ್ತಿದೆ. ಆದರೆ, ಇಲ್ಲಿಯೂ ಇಂತಹ ಅನ್ಯಾಯಗಳು ನಡೆಯುತ್ತವೆ ಎಂಬುದನ್ನು ಎಲ್ಲರ ಗಮನಕ್ಕೆ ತರಲು ಸಂವಿಧಾನಿಕ ಬಿಕ್ಕಟ್ಟು ಸೃಷ್ಟಿಸುವುದು ಅಗತ್ಯ" ಎಂದು ತಮ್ಮಣ್ಣ ತಿಳಿಸಿದ್ದಾರೆ.
ಸಂದರ್ಶನ: ಕಿರಣ್ ಹನಿಯಡ್ಕ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.