
ನವದೆಹಲಿ(ಫೆ.07): ನ್ಯಾ. ದಿನೇಶ್ ಮಹೇಶ್ವರಿ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದಾರೆ. ಸುಪ್ರೀಂ ಕೋರ್ಟ್'ನ ಮೊದಲ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಕೊಲಿಜಿಯಂ ಇತ್ತಿಚೆಗಷ್ಟೆ ನ್ಯಾ. ದಿನೇಶ್ ಮಹೇಶ್ವರಿ ಅವರನ್ನು ಕರ್ನಾಟಕ ಹೈಕೋರ್ಟ್'ಗೆ ವರ್ಗಾಯಿಸುವಂತೆ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿತ್ತು. ಮುಖ್ಯ ನ್ಯಾಯಮೂರ್ತಿಗಳೊಂದಿಗೆ ಸಮಾಲೋಚನೆ ನಡೆಸಿ ಈ ತೀರ್ಮಾನ ಪ್ರಕಟಿಸಲಾಗಿದೆ ಎಂದು ಕಾನೂನು ಸಚಿವಾಲಯದ ಅಧಿಸೂಚನೆ ತಿಳಿಸಿದೆ.
ನ್ಯಾ. ದಿನೇಶ್ ಮಹೇಶ್ವರಿ ಪ್ರಸಕ್ತ ಮೇಘಾಲಯ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದು ಫೆ.20 ರೊಳಗೆ ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಹುದ್ದೆ ಸ್ವೀಕರಿಸಬೇಕು ಎಂದು ರಾಷ್ಟ್ರಪತಿಗಳು ಸೂಚಿಸಿದ್ದಾರೆ. ಜ.10ರಂದು ಸಭೆ ಸೇರಿದ್ದ ಸುಪ್ರೀಂ ಕೋರ್ಟ್'ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಕೊಲಿಜಿಯಂ ನ್ಯಾ. ದಿನೇಶ್ ಮಹೇಶ್ವರಿ ಅವರನ್ನು ಕರ್ನಾಟಕ ಹೈ ಕೋರ್ಟ್ಗೆ ವರ್ಗಾಯಿಸುವ ತೀರ್ಮಾನ ಕೈಗೊಂಡಿತ್ತು.
ರಾಜ್ಯ ಹೈಕೋರ್ಟ್ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್.ಜಿ. ರಮೇಶ್ ಅವರು ನ್ಯಾ. ದಿನೇಶ್ ಮಹೇಶ್ವರಿ ಅವರಿಗಿಂತ ಹೆಚ್ಚಿನ ಹಿರಿತನ ಹೊಂದಿದ್ದರೂ ನ್ಯಾ.ರಮೇಶ್ ಈ ಹಿಂದೆ ಮುಖ್ಯ ನ್ಯಾಯಮೂರ್ತಿ ಸ್ಥಾನ ನಿರಾಕರಿಸಿದ್ದ ಹಿನ್ನೆಲೆಯಲ್ಲಿ ಈ ನೇಮಕ ಶಿಫಾರಸು ಮಾಡಲಾಗಿದೆ ಎಂದು ಕೊಲಿಜಿಯಂ ಹೇಳಿತ್ತು. ನ್ಯಾ.ದಿನೇಶ್ ಅವರು 2004ರಲ್ಲಿ ರಾಜಸ್ಥಾನ ಹೈಕೋರ್ಟ್ ನಲ್ಲಿ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. ಬಳಿಕ 2016ಕ್ಕೆ ಮೇಘಾಲಯದ ಮುಖ್ಯ ನ್ಯಾಯಮೂರ್ತಿಯಾದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.