
ಭೋಪಾಲ್[ಅ.18]: ನವೆಂಬರ್ ನಲ್ಲಿ ನಡೆಯಲಿರುವ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸಿಎಂ ಅಭ್ಯರ್ಥಿ ರೇಸಿನಲ್ಲಿರುವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಹೆಸರೆ ಸ್ಪರ್ಧಿಸುವವರ ಅಂತಿಮ ಪಟ್ಟಿಯಲ್ಲಿ ಇಲ್ಲವಂತೆ.
ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಇದು ಬಿಜೆಪಿ ಸೃಷ್ಟಿಸಿರುವ ಸುಳ್ಳು ಸುದ್ದಿಯೇ ವಿನಃ ಮತ್ತೇನಿಲ್ಲ ಎಂದಿದೆ. ಜ್ಯೋತಿರಾದಿತ್ಯ ಅವರು ಕೂಡ ಹೇಳಿಕೆ ನೀಡಿದ್ದು, ಪಕ್ಷದ ಪ್ರಚಾರ ಸಮಿತಿ ಅಭ್ಯರ್ಥಿಗಳ ಪಟ್ಟಿ ಇನ್ನು ಅಂತಿಮವಾಗಿಲ್ಲ. ಇನ್ನೊಂದು ವಾರದಲ್ಲಿ ಎಲ್ಲ ಪ್ರಕ್ರಿಯೆಗಳು ಮುಗಿಯಲಿದೆ. ವೈರಲ್ ಆಗಿರುವ ಪಟ್ಟಿ ಎಲ್ಲಿಂದ ಬಂತು ಎಂಬುದರ ಬಗ್ಗೆ ನನಗೂ ಮಾಹಿತಿಯಿಲ್ಲ ಎಂದು ತಿಳಿಸಿದ್ದಾರೆ.
ಈಗಾಗಲೇ ಮಧ್ಯಪ್ರದೇಶದ ಎಲ್ಲ 230 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದು ಕಾಂಗ್ರೆಸ್ ಪರಿಶೀಲನಾ ಸಮಿತಿ ಕೂಡ ಅಭ್ಯರ್ಥಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಹರಡಿದೆ. ಎಲ್ಲಡೆ ವೈರಲ್ ಆಗಿರುವ ಪಟ್ಟಿಯಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಅವರ ಹೆಸರಿಲ್ಲದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಕಾಂಗ್ರೆಸಿನಲ್ಲಿ ಸಿಎಂ ರೇಸಿನಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ, ಕಮಲ್ ನಾಥ್ ಹಾಗೂ ದಿಗ್ವಿಜಯ್ ಸಿಂಗ್ ಮೂವರಿದ್ದು ಪಕ್ಷವೂ ಕೂಡ ಯಾರು ಅಭ್ಯರ್ಥಿಯೆಂದು ಅಂತಿಮಗೊಳಿಸಿಲ್ಲ. ಮಧ್ಯಪ್ರದೇಶದಲ್ಲಿ 2005ರಿಂದ ಬಿಜೆಪಿ ಅಧಿಕಾರದಲ್ಲಿದ್ದು ಶಿವರಾಜ್ ಸಿಂಗ್ ಚೌಹಾಣ್ ಮುಖ್ಯಮಂತ್ರಿಯಾಗಿದ್ದಾರೆ. ಚುನಾವಣಾ ಪೂರ್ವ ಸಮೀಕ್ಷೆಗಳ ಪ್ರಕಾರ ಈ ಬಾರಿ ಬಿಜೆಪಿ ಅಧಿಕಾರ ಕಳೆದುಕೊಳ್ಳಲಿದೆಯಂತೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.