
ಬೆಳಗಾವಿ [ಆ.11]: ಪ್ರವಾಹ ಪೀಡಿತ ಎರಡೂ ಜಿಲ್ಲೆಗಳಲ್ಲಿ ಜಿಲ್ಲಾಡಳಿತ ಪರಿಹಾರ ಕಾರ್ಯ ಕೈಗೊಂಡಿದ್ದು, ನೆರೆ ಸಂತ್ರಸ್ತರು, ಜಾನುವಾರುಗಳಿಗೆ ಪರಿಹಾರ ಕೇಂದ್ರ ತೆರೆಯಲಾಗಿದೆ. ಸಂತ್ರಸ್ತರ ಪ್ರತಿಯೊಂದು ಕುಟುಂಬಕ್ಕೆ ತಾತ್ಕಾಲಿಕವಾಗಿ 3800 ರು. ಪರಿಹಾರ ವಿತರಿಸಲಾಗುತ್ತದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
ಪ್ರವಾಹದಲ್ಲಿ ಎಲ್ಲವನ್ನೂ ಕಳೆದುಕೊಂಡಿರುವ ಸಂತ್ರಸ್ತರಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಭಾಗದಲ್ಲಿನ ಪ್ರವಾಹ ಪರಿಸ್ಥಿತಿ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮನವರಿಕೆ ಮಾಡಿದ್ದಾರೆ ಎಂದರು.
ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದಾಗ ಪ್ರವಾಹ ಪರಿಸ್ಥಿತಿ ತೀವ್ರವಾಗಿರುವುದು ಕಂಡುಬಂದಿದೆ. ಕೃಷ್ಣಾ, ಘಟಪ್ರಭಾ ಮತ್ತು ಮಲಪ್ರಭಾ ನದಿ ತೀರದ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿವೆ. ಎರಡೂ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿದೆ. ಅನೇಕ ಸೇತುವೆಗಳು ಮುಳುಗಡೆಗೊಂಡಿದ್ದು, ಜನ-ಜಾನುವಾರುಗಳಿಗೆ ಅಪಾಯವಿದೆ ಎಂದು ವಿವರಿಸಿದರು.
ನೇಕಾರರ ಸಾಲ ಪಾವತಿ ಅವಧಿ ವಿಸ್ತರಣೆ: ಬೆಳಗಾವಿ ನಗರದಲ್ಲಿ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದಾಗ ಪ್ರವಾಹದಿಂದ ನೇಕಾರ ಕುಟುಂಬಗಳು ಸಂಕಷ್ಟಕ್ಕೀಡಾಗಿರುವುದು ಕಂಡುಬಂದಿದೆ. ಹೀಗಾಗಿ ನೇಕಾರರ ಸಾಲ ಮರುಪಾವತಿ ಅವಧಿ ವಿಸ್ತರಣೆಗೆ ಅವಕಾಶ ನೀಡುವಂತೆ ಕ್ರಮ ವಹಿಸಲಾಗುವುದು ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
ಬೆಳಗಾವಿ ನೇಕಾರರ ಮಗ್ಗಗಳು ಮತ್ತು ಕಚ್ಚಾ ವಸ್ತುಗಳು ಪ್ರವಾಹದಿಂದ ಹಾನಿಯಾಗಿರುವುದರಿಂದ ನೇಕಾರರ ಸಾಲ ಮರುಪಾವತಿಗೆ ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ಪಾವತಿಸುವಂತೆ ಪ್ರವಾಹ ಪೀಡಿತರಿಗೆ ಕಿರುಕುಳ ಕೊಡದೇ ಸಾಲ ಮರುಪಾವತಿಗೆ ಅವಕಾಶ ನೀಡಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಸೂಕ್ತ ಆದೇಶ ನೀಡಲಿದೆ ಎಂದು ಅವರು ಭರವಸೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.