
ಬೆಂಗಳೂರು : ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಲಿಂಗಾಯತ ಸಮುದಾಯದಲ್ಲಿ ರಾಜಕೀಯ ವಾಗಿ ದೊಡ್ಡ ಧ್ರುವೀಕರಣ ಸಾಧ್ಯತೆಯಿದ್ದು, ಈ ವೇಳೆ ಸಮುದಾಯಕ್ಕೆ ಪಕ್ಷ ಹಾಗೂ ಸರ್ಕಾರದಲ್ಲಿ ಉನ್ನತ ಸ್ಥಾನವನ್ನು ನೀಡುವ ಭರವಸೆಯನ್ನು ಕಾಂಗ್ರೆಸ್ ನಾಯಕತ್ವ ಲಿಂಗಾಯತ ಸಮಾಜಕ್ಕೆ ನೀಡಿದೆ.
ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಕುಂದಗೋಳದಲ್ಲಿ ಲಿಂಗಾಯತ ಸಮುದಾ ಯದ ಪ್ರಮುಖ ಸಂಘಟನೆಗಳು ಹಾಗೂ ನಾಯಕರ ಸಭೆಯನ್ನು ನಡೆಸಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಸಚಿವ ಡಿ.ಕೆ. ಶಿವಕುಮಾರ್ ಅವರು ಚುನಾವಣೆ ಫಲಿತಾಂಶ ಪ್ರಕಟಗೊಂಡ ನಂತರ ಕಾಂಗ್ರೆಸ್ ಪಕ್ಷವು ಲಿಂಗಾಯತ ಸಮುದಾಯದ ನಾಯಕರಿಗೆ ಪಕ್ಷದಲ್ಲಿ ಉನ್ನತ ಸ್ಥಾನವನ್ನು ನೀಡಲಿದೆ.
ಅಲ್ಲದೆ, ಸರ್ಕಾರದಲ್ಲೂ ಹೆಚ್ಚಿನ ಪ್ರಾತಿನಿಧ್ಯ ಒದಗಿಸಿಕೊಡಲಿದೆ ಎಂಬ ಆಶ್ವಾಸನೆ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ. ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟ ಗೊಂಡ ನಂತರ ಬಿಜೆಪಿ ಹೈಕಮಾಂಡ್ ಲಿಂಗಾಯತ ಸಮುದಾಯದ ಮೇರು ನಾಯಕ ಎನಿ ಸಿರುವ ಬಿ.ಎಸ್. ಯಡಿಯೂರಪ್ಪ ಅವರನ್ನು ಮೂಲೆ ಗುಂಪು ಮಾಡಲಿದೆ. ಬೇರೆ ನಾಯಕರೇ ಆ ಪಕ್ಷದ ಉನ್ನತ ಸ್ಥಾನಗಳನ್ನು ಅಲಂಕರಿಸಲಿದ್ದಾರೆ.
ಈ ವೇಳೆ ಬಿಜೆಪಿಯಲ್ಲಿ ಲಿಂಗಾಯತ ಸಮುದಾಯದ ಇತರ ಪ್ರಮುಖ ನಾಯಕರು ತಮ್ಮ ಅಸ್ತಿತ್ವ ಕಳೆದುಕೊಳ್ಳುತ್ತಾರೆ. ಈ ಸೂಚನೆ ಇರುವ ಕಾರಣಕ್ಕಾಗಿಯೇ ಹಲವು ಲಿಂಗಾಯತ ನಾಯಕರು ಈಗಾಗಲೇ ಕಾಂಗ್ರೆಸ್ ಸಂಪರ್ಕ ದಲ್ಲಿದ್ದಾರೆ ಎಂದು ಈ ನಾಯಕರು ಸಭೆಯಲ್ಲಿ
ತಿಳಿಸಿದರು ಎನ್ನಲಾಗಿದೆ.
ಬಿಜೆಪಿ ಕೇವಲ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡುವುದಷ್ಟೇ ಅಲ್ಲ. ತನಗೆ ದೊಡ್ಡ ಬೆಂಬಲ ನೀಡುತ್ತಿರುವ ಲಿಂಗಾಯತ ಸಮುದಾಯದ ಸಂಸದರನ್ನು ಮೂಲೆ ಗುಂಪು ಮಾಡಿದೆ. ಮೋದಿ ಸರ್ಕಾರದಲ್ಲಿ ರಾಜ್ಯದಿಂದ ಆಯ್ಕೆಯಾದ ಬಿಜೆಪಿ ಸಂಸದರಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಲಿಂಗಾಯತ ಸಮುದಾಯದವ ರಿದ್ದರೂ ಅವರಿಗೆ ಪ್ರಮುಖ ಸ್ಥಾನ ನೀಡಲಿಲ್ಲ.
ಹೀಗೆ ಲಿಂಗಾಯತ ಸಮುದಾಯವನ್ನು ಕೇವಲ ಬಳಸಿಕೊಳ್ಳುವ ಕೆಲಸವನ್ನು ಮಾತ್ರ ಬಿಜೆಪಿ ಮಾಡುತ್ತಿದೆ. ಹೀಗಾಗಿ ಲಿಂಗಾಯತ ಸಮುದಾಯದ ಪ್ರಮುಖ ನಾಯಕರು ಲೋಕಸಭಾ ಚುನಾ ವಣೆ ನಂತರ ಅನ್ಯ ಪಕ್ಷಗಳತ್ತ ಮುಖ ಮಾಡುವ ಸಂದರ್ಭ ಬರುವ ಸಾಧ್ಯತೆಯಿದೆ. ಕಾಂಗ್ರೆಸ್ ಕೂಡ ಇಂತಹ ನಾಯಕರಿಗೆ ಮುಕ್ತ ಆಹ್ವಾನ ವನ್ನು ನೀಡಲಿದ್ದು, ಪಕ್ಷದಲ್ಲಿ ಲಿಂಗಾಯತ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಲಿದೆ
ಎಂಬ ಭರವಸೆ ನೀಡಿದರು ಎಂದು ತಿಳಿದುಬಂದಿದೆ.
ಕ್ಷೇತ್ರದ ಅಭಿವೃದ್ಧಿ ಪಕ್ಷದ ಹೊಣೆ: ಅಲ್ಲದೆ, ಕುಂದಗೋಳ ಚುನಾವಣೆಯಲ್ಲಿ ಲಿಂಗಾಯತ ಸಮುದಾಯ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಬೇಕು ಎಂದು ಅವರು ಮನವಿ ಮಾಡಿದರು. ಈ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದರೆ, ಕ್ಷೇತ್ರದ ಅಭಿವೃದ್ಧಿಯ ಸಂಪೂರ್ಣ ಹೊಣೆಯನ್ನು ಕಾಂಗ್ರೆಸ್ ಪಕ್ಷ ಹೊರಲಿದೆ. ಅಲ್ಲದೆ, ಕ್ಷೇತ್ರದಲ್ಲಿ ಗೂಂಡಾಗಿರಿ ನಡೆಸುತ್ತಿರುವವರನ್ನು ಹತೋಟಿಯಲ್ಲಿಟ್ಟು, ಲಿಂಗಾಯತ ಸಮುದಾಯಕ್ಕೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳಲಿದೆ ಎಂದು ಭರವಸೆ ನೀಡಿದರು ಎನ್ನಲಾಗಿದೆ.
ಸಭೆಯಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ, ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್, ನಾಯಕರಾದ ಅನಿಲ್ ಕುಮಾರ್ ಪಾಟೀಲ್ ಹಾಗೂ ಲಿಂಗಾಯತ ಸಮುದಾಯದ ಪ್ರಮುಖ ನಾಯಕರು ಪಾಲ್ಗೊಂಡಿದ್ದರು ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.