ಇಂದು ರಾಜ್ಯದ ಶಾಲೆಗಳು ಬಂದ್

By Web DeskFirst Published Jul 9, 2019, 9:47 AM IST
Highlights

ರಾಜ್ಯದ ಬಹುತೇಕ ಶಾಲೆಗಳನ್ನು ಇಂದು ಬಂದ್ ಮಾಡಲಾಗುತ್ತಿದೆ. ಶಿಕ್ಷಕರ ಪ್ರತಿಭಟನೆ ಹಿನ್ನೆಲೆ ತರಗತಿಗಳು ನಡೆಯುವುದು ಅನುಮಾನವಾಗಿದೆ. 

ಬೆಂಗಳೂರು [ಜು.09]:  ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರತ್ಯೇಕ ವೇತನ ಶ್ರೇಣಿ ನಿಗದಿಗೊಳಿಸಬೇಕು ಹಾಗೂ 2014ಕ್ಕಿಂತ ಮೊದಲು ನೇಮಕವಾದ ಪ್ರಾಥಮಿಕ ಶಾಲಾ ಶಿಕ್ಷಕರನ್ನು 1ರಿಂದ 5ನೇ ತರಗತಿಗೆ ಬೋಧನೆಗೆ ಸೀಮಿತಗೊಳಿಸಿರುವ ಆದೇಶ ರದ್ದುಗೊಳಿಸುವಂತೆ ಒತ್ತಾಯಿಸಿ ಮಂಗಳವಾರ (ಜು.9) ರಾಜ್ಯಾದ್ಯಂತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುತ್ತಿದೆ. ಶಿಕ್ಷಕರ ಪ್ರತಿಭಟನೆಯಿಂದ ಸಹಜವಾಗಿ ಶಾಲೆಗಳು ಕಾರ್ಯನಿರ್ವಹಿಸುವುದು ಅನುಮಾನವಾಗಿದೆ.

1ರಿಂದ 7ನೇ ತರಗತಿ ವರೆಗಿನ ಸರ್ಕಾರಿ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ಅಂದಾಜು 45 ಸಾವಿರ ಶಾಲೆಗಳ ಒಂದೂವರೆ ಲಕ್ಷ ಶಿಕ್ಷಕರು ಬೀದಿಗಿಳಿದು ಹೋರಾಟ ಮಾಡಲಿದ್ದಾರೆ. ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿ ಹಾಗೂ ಶಿಕ್ಷಣ ಇಲಾಖೆ ಜಿಲ್ಲಾ ಉಪ ನಿರ್ದೇಶಕರ (ಡಿಡಿಪಿಐ) ಕಚೇರಿಗಳ ಮುಂದೆ ಬೆಳಗ್ಗೆಯಿಂದ ಸಂಜೆ 6 ಗಂಟೆ ವರೆಗೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಎಂ. ನಾರಾಯಣ ಸ್ವಾಮಿ ಹಾಗೂ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಎನ್‌.ಎಸ್‌. ತಿಳಿಸಿದ್ದಾರೆ.

ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಜೂ.30ರ ವರೆಗೆ ರಾಜ್ಯ ಸರ್ಕಾರಕ್ಕೆ ಗಡುವು ನೀಡಲಾಗಿತ್ತು. ಆದರೆ, ಸರ್ಕಾರವು ಯಾವುದೇ ರೀತಿಯಲ್ಲಿ ಸ್ಪಂದಿಸದಿರುವುದರಿಂದ ರಾಜ್ಯಾದ್ಯಂತ ಹೋರಾಟ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಪ್ರತಿಭಟನೆಯಿಂದಾಗಿ ಮಂಗಳವಾರ ರಾಜ್ಯಾದ್ಯಂತ ಬಹುತೇಕ ಶಾಲೆಗಳು ನಡೆಯುವುದು ಅನುಮಾನವಾಗಿದೆ. ಶಾಲೆಗಳನ್ನು ಬಂದ್‌ ಮಾಡಲು ಶಿಕ್ಷಕರಿಗೆ ಅಧಿಕಾರ ಇಲ್ಲ. ಆದರೆ, ಹೋರಾಟದಲ್ಲಿ ಶಿಕ್ಷಕರು ಪಾಲ್ಗೊಳ್ಳುವುದರಿಂದ ಸಹಜವಾಗಿಯೇ ಶಾಲೆಗಳು ಕಾರ್ಯನಿರ್ವಹಿಸುವುದು ಅನುಮಾನವಾಗಿದೆ.

ಶಿಕ್ಷಕರ ಬೇಡಿಕೆಗಳೇನು:  ಆರನೇ ವೇತನ ಆಯೋಗದ ಅಂತಿಮ ವರದಿ ಶಿಫಾರಸಿನ ಮೇರೆಗೆ ಮುಖ್ಯ ಶಿಕ್ಷಕರಿಗೆ 10,15,20,25 ಮತ್ತು 30 ವರ್ಷದ ಬಡ್ತಿ ನೀಡಬೇಕು. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಉಪ ನಿರ್ದೇಶಕ ಹುದ್ದೆವರೆಗೂ ಬಡ್ತಿ ನೀಡಬೇಕು. ನೂತನ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ ಮುಂದುವರಿಸಬೇಕು.

ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಾಲಿ ಪದವೀಧರ ಶಿಕ್ಷಕರನ್ನು ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿಯೂ ಕಾರ್ಯ ನಿರ್ವಹಿಸಲು ಪದವೀಧರ ಶಿಕ್ಷಕರ ವೇತನ ಶ್ರೇಣಿ ನಿಗದಿಗೊಳಿಸಬೇಕು. ಶಿಕ್ಷಕ ವಿದ್ಯಾರ್ಥಿ ಅನುಪಾತ ಗುರುತಿಸುವ ವೇಳೆ ಮುಖ್ಯ ಶಿಕ್ಷಕ, ದೈಹಿಕ ಶಿಕ್ಷಕರನ್ನು ಹೊರತುಪಡಿಸಿ ಮಾಧ್ಯಮವಾರು, ಪ್ರಾದೇಶಿಕವಾರು ವಿಶೇಷ ನಿಯಮಗಳನ್ನು ರೂಪಿಸಿ ಪ್ರಕ್ರಿಯೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

click me!