
ಕೊಪ್ಪಳ [ಜೂ.27] : ತುಂಗಭದ್ರಾ ಜಲಾಶಯದಿಂದ ಬೆಂಗಳೂರಿಗೆ ನೀರು ತೆಗೆದುಕೊಂಡು ಹೋಗಲು ಬಿಡುವ ಪ್ರಶ್ನೆಯೇ ಇಲ್ಲ. ಇಲ್ಲಿಯೇ ನೀರಿನ ಸಮಸ್ಯೆ ಜಟೀಲವಾಗಿರುವಾಗ ನೀರು ಕೊಡುವುದಾದರೂ ಎಲ್ಲಿಂದ ಎಂದು ಪ್ರಶ್ನಿಸಿದ ಇಲ್ಲಿನ ಜಿ.ಪಂ. ಸದಸ್ಯರು, ಬೆಂಗಳೂರಿಗೆ ತುಂಗಭದ್ರಾ ನೀರು ಕೊಡದೇ ಇರಲು ಸಾಮಾನ್ಯ ಸಭೆಯಲ್ಲಿ ಒಮ್ಮತದಿಂದ ನಿರ್ಧರಿಸಿದರು.
ಬುಧವಾರ ನಡೆದ ಜಿ.ಪಂ. ಸಾಮಾನ್ಯ ಸಭೆಯಲ್ಲಿ ಸದಸ್ಯರೊಬ್ಬರು ತುಂಗಭದ್ರಾ ಜಲಾಶಯದಿಂದ ಬೆಂಗಳೂರಿಗೆ ನೀರು ಒಯ್ಯುವ ಪ್ರಸ್ತಾಪ ಇದೆಯಲ್ಲಾ ಎಂದಾಗ, ಸಭೆಯಲ್ಲಿ ಈ ಬಗ್ಗೆ ಗಂಭೀರ ಚರ್ಚೆ ನಡೆಯಿತು. ‘ತುಂಗಭದ್ರಾ ಜಲಾಶಯ ಪದೇ ಪದೆ ಬರಿದಾಗುತ್ತಿರುವುದರಿಂದ ಇಲ್ಲಿನ ಸುತ್ತಮುತ್ತಲ ಜಿಲ್ಲೆಗೆ ನೀರಿನ ದಾಹ ನೀಗಿಸಲು ಸಮಸ್ಯೆಯಾಗುತ್ತಿದೆ. ಹೀಗಿರುವಾಗ ಬೆಂಗಳೂರಿಗೆ ಇಲ್ಲಿಂದ ನೀರು ಕೊಡಲು ಸಾಧ್ಯವೇ ಇಲ್ಲ’ ಎಂದು ಅಧ್ಯಕ್ಷ ವಿಶ್ವನಾಥ ರಡ್ಡಿ ಹೇಳುತ್ತಿದ್ದಂತೆ ಇದಕ್ಕೆ ಸದಸ್ಯರು ಒಕ್ಕೊರಳಿಂದ ಸಮ್ಮತಿ ನೀಡಿದರು.
ಕೊಡುವುದಿಲ್ಲ ಎನ್ನುವುದು ಸರಿಯಲ್ಲ:
ಈ ವೇಳೆ ಮಧ್ಯಪ್ರವೇಶಿಸಿದ ಜಿಪಂ ಕಾರ್ಯನಿರ್ವಾಹಕ ಅಧಿಕಾರಿ, ನೀರು ಕೊಡುವುದಿಲ್ಲ ಎನ್ನುವುದು ಸರಿಯಲ್ಲ. ಬೆಂಗಳೂರಿಗೆ ಈ ಭಾಗದವರು ಹೋಗುತ್ತೇವೆ. ಹೀಗಾಗಿ, ಈ ಕುರಿತು ಚಿಂತಿಸಿ ಎಂದು ತಮ್ಮ ಅಭಿಪ್ರಾಯ ಮಂಡನೆ ಮಾಡಿದರು. ಇದಕ್ಕೆ ಆಕ್ಷೇಪ ವ್ಯಕ್ತವಾಗುತ್ತಿದ್ದಂತೆ, ನೀವು ಏನಾದರೂ ತೀರ್ಮಾನ ತೆಗೆದುಕೊಳ್ಳಿ. ಇದು ನನ್ನ ಅಭಿಪ್ರಾಯ ಮಾತ್ರ ಎಂದು ಸುಮ್ಮನಾದರು. ಅನೇಕ ವರ್ಷಗಳಿಂದ ತುಂಗಭದ್ರಾ ಜಲಾಶಯದಲ್ಲಿ ನೀರಿನ ಅಭಾವ ಆಗುತ್ತಲೇ ಇದೆ. ಹೀಗಿರುವಾಗ ಬೆಂಗಳೂರು ಸೇರಿದಂತೆ ಬೇರೆಡೆಗೆ ನೀರು ತೆಗೆದುಕೊಂಡು ಹೋಗುವುದಾದರೂ ಹೇಗೆ ಎಂದು ಸಭೆಉಯಲ್ಲಿ ಪ್ರಶ್ನೆ ಮಾಡಲಾಯಿತು. ಹೀಗಾಗಿ, ತುಂಗಭದ್ರಾ ಜಲಾಶಯದಿಂದ ಎಲ್ಲಿಗೂ ನೀರು ಕೊಡದಿರಲು ಸರ್ವಾನುಮತದಿಂದ ಠರಾವು ಪಾಸು ಮಾಡಲಾಯಿತು. ಇದನ್ನು ಸರ್ಕಾರಕ್ಕೆ ಕಳುಹಿಸಲು ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.